ರಾಜಕೀಯ

ಡಾ. ಅರುಣ್ ಸೋಮಣ್ಣಗೆ ಬಿಜೆಪಿಯಲ್ಲಿ ಸ್ಥಾನ: ತಣ್ಣಗಾಯ್ತು ವಸತಿ ಸಚಿವರ ಅಸಮಾಧಾನ!

Shilpa D

ಬೆಂಗಳೂರು: ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಅವರ ಅಸಮಾಧಾನಕ್ಕೆ ಮದ್ದು ಅರೆದಿರುವ ಬಿಜೆಪಿ, ಅವರ ಪುತ್ರ ಡಾ.ಅರುಣ್‌ ಸೋಮಣ್ಣ ಅವರನ್ನು ಪಕ್ಷದ ತುಮಕೂರು ಜಿಲ್ಲಾ ಘಟಕ ಉಪಾಧ್ಯಕ್ಷರನ್ನಾಗಿ ನೇಮಿಸಿದೆ.

ಈ ಸಂಬಂಧ ಮಂಗಳವಾರ ರಾತ್ರಿ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ರವಿ ಶಂಕರ್ ಹೆಬ್ಬಾಕ ಅವರು ಆದೇಶ ಹೊರಡಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ನೇಮಕ ಮಾಡಲಾಗಿದೆ ಎಂದು ಪ್ರಸ್ತಾಪಿಸಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಆಗಿರುವ ಡಾ.ಅರುಣ್ ಸೋಮಣ್ಣ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸೂಚನೆ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ತುಮಕೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಎಚ್.ಎಸ್.ರವಿಶಂಕರ್ ತಿಳಿಸಿದ್ದಾರೆ.

ಇದರ ಬೆನ್ನಲ್ಲೇ ಅರುಣ್‌ ಸೋಮಣ್ಣ ಅವರಿಗೆ ಇದೇ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಜಿಲ್ಲೆಯ ಯಾವುದಾದರೊಂದು ವಿಧಾನಸಭಾ ಕ್ಷೇತ್ರದ ಟಿಕೆಟ್‌ ನೀಡುವರೋ ಅಥವಾ ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಬಹುದು ಎಂಬ ಮಾತೂ ಬಿಜೆಪಿ ಪಾಳಯದಿಂದ ಕೇಳಿಬಂದಿದೆ. ಈ ನೇಮಕದಿಂದ ಸಚಿವ ಸೋಮಣ್ಣ ಅವರು ಸಂತಸಗೊಂಡಿದ್ದಾರೆ. ಇದಕ್ಕಾಗಿ ಪಕ್ಷದ ವರಿಷ್ಠರು ಹಾಗೂ ನಾಯಕರಿಗೆ ಧನ್ಯವಾದ ಸಲ್ಲಿಸಿದ್ದಾರೆ.

SCROLL FOR NEXT