ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ನಾಲ್ಕು ದಿನ ಕಳೆದಿದ್ದರೂ ಇನ್ನೂ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿಲ್ಲ. ಈಗಾಗಲೇ ಸಚಿವರಾಗಿ ನೇಮಕವಾಗಿರುವ ಎಂಟು ಮಂದಿಗೆ ಖಾತೆ ಹಂಚಿಕೆ ಮಾಡಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಆಪ್ತರಿಗೆ ಸಂಪುಟದಲ್ಲಿ ಸ್ಥಾನ ಒದಗಿಸಲು ಪಟ್ಟು ಹಿಡಿದಿರುವುದು ಪಕ್ಷದ ಹೈಕಮಾಂಡ್ ಗೆ ತಲೆ ನೋವಾಗಿ ಪರಿಣಮಿಸಿದೆ.
ಈ ಮಧ್ಯೆ ಉಭಯ ನಾಯಕರು ತಮ್ಮ ಬೆಂಬಲಿಗ ಶಾಸಕರ ಪಟ್ಟಿ ಸಿದ್ಧಪಡಿಸಿಕೊಂಡು ದೆಹಲಿಗೆ ಪ್ರತ್ಯೇಕವಾಗಿ ತೆರಳಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದ ಹಿತದೃಷ್ಟಿಯಿಂದ ವಿವಿಧ ವಿಷಯಗಳನ್ನು ಚರ್ಚಿಸಬೇಕಾಗಿದೆ. ಪಕ್ಷದ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇವೆ ಎಂದರು.
ಇದನ್ನೂ ಓದಿ: ಶೀಘ್ರದಲ್ಲೇ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು; ಸದನದಲ್ಲಿ ಬೊಮ್ಮಾಯಿ ಪ್ರಶ್ನೆಗಳಿಗೆ ಉತ್ತರಿಸಿದ ಸಿದ್ದರಾಮಯ್ಯ
ಆದಷ್ಟು ಬೇಗ ಪೂರ್ಣ ಪ್ರಮಾಣದ ಸಚಿವ ಸಂಪುಟವನ್ನು ಪೂರ್ಣಗೊಳಿಸಬೇಕು. ರಾಜ್ಯದ ಜನರಿಗೆ ನೀಡಿರುವ ಭರವಸೆಗಳನ್ನು ಪೂರ್ಣಗೊಳಿಸುತ್ತೇವೆ. ಕರ್ನಾಟಕ ಕಾಂಗ್ರೆಸ್ನಲ್ಲಿ ಯಾವುದೇ ಆಂತರಿಕ ಸಮಸ್ಯೆಗಳಿಲ್ಲ ಎಂದು ಅವರು ತಿಳಿಸಿದರು.