ರಾಜಕೀಯ

ನಮ್ಮ ಶಾಸಕರು ಗಟ್ಟಿಯಾಗಿದ್ದಾರೆ, ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ ಯತ್ನ ವಿಫಲವಾಗುತ್ತೆ: ಸಿಎಂ ಸಿದ್ದರಾಮಯ್ಯ

Lingaraj Badiger

ಚಿಕ್ಕಮಗಳೂರು: ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ವಿಫಲವಾಗುತ್ತೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕರು ಗಟ್ಟಿಯಾಗಿದ್ದಾರೆ ಮತ್ತು "ಆಪರೇಷನ್ ಕಮಲ"ದ ಯಾವುದೇ ಪ್ರಯತ್ನಗಳಿಗೆ ಬಲಿಯಾಗುವುದಿಲ್ಲ ಎಂದು ಬುಧವಾರ ಹೇಳಿದ್ದಾರೆ.

ಇಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಸೆಳೆಯುವ ಬಗ್ಗೆ ಗುಪ್ತಚರ ಮಾಹಿತಿ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಗುಪ್ತಚರ ಇಲಾಖೆ ನನ್ನ ಬಳಿಯೇ ಇದೆ, ನಿಮಗೆ ಯಾರು ಹೇಳಿದ್ದು. ಯಾರೇ ಸಂಪರ್ಕ ಮಾಡಿದರೂ ನಮ್ಮ ಶಾಸಕರು ಗಟ್ಟಿಯಾಗಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ವಿಫಲವಾಗುತ್ತೆ ಎಂದರು.

ಕಳೆದ ವಾರವೂ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಬಿಜೆಪಿ ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.

ವಿರೋಧ ಪಕ್ಷದ ಯಾವುದೇ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ಏಕೆಂದರೆ "ಕಾಂಗ್ರೆಸ್ ಶಾಸಕರು ಅವರ ಆಮಿಷಕ್ಕೆ ಮಣಿಯುವುದಿಲ್ಲ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೂಡ ಬಿಜೆಪಿ ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದೆ ಆರೋಪ ಮಾಡುತ್ತಿದ್ದಾರೆ.

SCROLL FOR NEXT