ಬೆಂಗಳೂರು: ಪುತ್ರ ಯತೀಂದ್ರ ಸಿದ್ದರಾಮಯ್ಯ ವಿಡಿಯೋಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಸಮೇತ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಫೇಸ್ ಬುಕ್ ನಲ್ಲಿ ಸಿದ್ದರಾಮಯ್ಯ ದಾಖಲೆ ಜೊತೆಗೆ ಪೋಸ್ಟ್ ಹಾಕಿದ್ದಾರೆ. ತಾ ಕಳ್ಳ ಇತರರ ನಂಬ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಫೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ಹೆಚ್.ಡಿ.ಕುಮಾರಸ್ವಾಮಿಯವರು ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ.
ಫೋನ್ ಸಂಭಾಷಣೆಯಲ್ಲಿ ಡಾ.ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು ವರುಣ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ). ವರುಣ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿಯಾಗಬೇಕಾಗಿರುವ ಕೊಠಡಿಗಳ ವಿವರದ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳಿಸಿದ್ದರು.
ಇದನ್ನೂ ಓದಿ: ನಿಮ್ಮ 'ಸುಲಿಗೆಪುತ್ರ'ನಿಂದ ಕಾಸಿಗಾಗಿ ಹುದ್ದೆ ವ್ಯವಹಾರ ಬಟಾಬಯಲು; ಡೋಂಗಿ ಹರಿಕಾರನ ಅಸಲಿ ಮುಖ ಮಗನಿಂದಲೇ ಬೆತ್ತಲು!
ಇದರ ಬಗ್ಗೆಯೇ ನಾನು ಡಾ.ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆಯನ್ನು ಇಲ್ಲಿ ಲಗತ್ತಿಸಿದ್ದೇನೆ. ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುತ್ತಿರುವ ಸುಳ್ಳು ಸುದ್ದಿಗಳನ್ನು ಅಮಾಯಕ ಜನ ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ.
ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರಮಾಡಿಕೊಂಡು ಗಳಿಸಿದ ಅಧಿಕಾರವನ್ನು ಕೇವಲ ಹಣದ ಲೂಟಿಗಾಗಿ ದುರ್ಬಳಕೆ ಮಾಡಿಕೊಂಡ ಕುಮಾರಸ್ವಾಮಿಯವರಿಗೆ ಅಭಿವೃದ್ದಿಯ ವಿಚಾರ ಅರ್ಥವಾಗುವಂತಹದ್ದಲ್ಲ ಎಂದು ತಿರುಗೇಟು ನೀಡಿದ್ದಾರೆ.