ರಾಜಕೀಯ

ವಿಧಾನಸಭೆ ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್ ಅಶೋಕ್ ಆಯ್ಕೆ

Vishwanath S

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಆರ್ ಅಶೋಕ್ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.

ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಪಕ್ಷದೊಳಗೆ ಅಸಮಾಧಾನ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು.

ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ವೀಕ್ಷಕರು ವಿರೋಧದ ನಡುವೆಯೂ ವಿಪಕ್ಷ ನಾಯಕನಾಗಿ ಆರ್ ಅಶೋಕ್ ಅವರನ್ನು ನೇಮಿಸಿದ್ದಾರೆ. ಇನ್ನು ಇದೇ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆರ್ ಅಶೋಕ್ ಅವರು, ಪಕ್ಷ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಅದನ್ನು ಸರಿಯಾಗಿ ನಿಭಾಯಿಸುತ್ತೇನೆ.

ಸಾಮಾನ್ಯ ಕಾರ್ಯಕರ್ತನಾಗಿ 45 ವರ್ಷಗಳಿಂದ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ನ ದುರಾಡಳಿತವನ್ನು ಜನರ ಮುಂದಿಡಲು ಪ್ರಯತ್ನಿಸುತ್ತೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲುಲು ಪ್ರಯತ್ನಿಸುತ್ತೇವೆ ಎಂದರು.

ಪಕ್ಷದಲ್ಲಿ ಅಸಮಾಧಾನ ಸ್ಫೋಟ
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಹೈಕಮಾಂಡ್​ ವೀಕ್ಷಕರು ಪ್ರಮುಖರ ಜೊತೆ ಸಭೆ ನಡೆಸಿದ್ದರು. ವರಿಷ್ಠರ ನಿರ್ಧಾರ ಬಗ್ಗೆ ಆಕಾಂಕ್ಷಿಗಳ ಗಮನಕ್ಕೆ ತಂದಿದ್ದರು. ಇದೇ ವೇಳೆ ಆರ್​ ಅಶೋಕ್ ನೇಮಕ ಕುರಿತು ತಿಳಿಸಿದಾಗ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಹೈಕಮಾಂಡ್ ತೀರ್ಮಾನ ಒಪ್ಪದೆ ಸಭೆಯಿಂದ ತೆರಳಿದ್ದರು.

SCROLL FOR NEXT