ರಾಜಕೀಯ

ನನ್ನನ್ನು ಜೈಲಿಗೆ ಕಳುಹಿಸಲು ಕಟೀಲ್, ಎಚ್ ಡಿಕೆ ಏನು ನ್ಯಾಯಾಧೀಶರಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಕಿಡಿ

Nagaraja AB

ಬೆಳಗಾವಿ: ಶಿವಕುಮಾರ್ ಮತ್ತೊಮ್ಮೆ ತಿಹಾರ್ ಜೈಲಿಗೆ ಹೋಗಲು ಸಿದ್ಧರಾಗಬೇಕು ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆ ವಿರುದ್ಧ ಕಿಡಿಕಾರಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್,ನನ್ನನ್ನು ಜೈಲಿಗೆ ಕಳುಹಿಸಲು ಕಟೀಲು ಮತ್ತು ಕುಮಾರಸ್ವಾಮಿ ನ್ಯಾಯಾಧೀಶರಲ್ಲ ಎಂದಿದ್ದಾರೆ. 

ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಶಿವಕುಮಾರ್ ಅವರು ಕೇಡಿಯಂತೆ ವರ್ತಿಸಬಾರದು ಎಂಬ ಸಿಟಿ ರವಿ ಅವರ ಹೇಳಿಕೆ ಕುರಿತು ಕೇಳಿದಾಗ, ಅವರಿಗೆ ಅವರ ಪಕ್ಷದವರೇ ಲೂಟಿ ರವಿ ಎಂಬ ಹೆಸರು ಕೊಟ್ಟಿದ್ದಾರೆ. ಅವರ ಪಕ್ಷದವರೇ ಏನೆಲ್ಲಾ ಹೇಳಿದ್ದಾರೆ ಎಂಬ ದಾಖಲೆ ನನ್ನ ಬಳಿ ಇದೆ. ಇದಕ್ಕೆ ಸಮಯ ಬಂದಾಗ ಉತ್ತರ ನೀಡುತ್ತೇನೆ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ವಿವಿಧ ಯೋಜನೆಗಳ ಕುರಿತು ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಘಟಪ್ರಭಾ, ಮಾರ್ಕೆಂಡೇಯ, ಹಿಪ್ಪರಗಿ ಮತ್ತು ಆಲಮಟ್ಟಿ ಜಲಾಶಯಗಳು ಶೇ 90ರಷ್ಟು ಭರ್ತಿಯಾಗಿದ್ದು, ಮಲಪ್ರಭಾ ಅಣೆಕಟ್ಟೆಯಲ್ಲಿ ಸದ್ಯ ಶೇ 52ರಷ್ಟು ನೀರು ಸಂಗ್ರಹವಾಗಿದೆ ಎಂದರು. 

ಬೆಳಗಾವಿ ವಿಭಾಗದ ನೀರಾವರಿ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲವು ಸಮಸ್ಯೆಗಳಿವೆ. ಬೆಳಗಾವಿಗೆ 1,322 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ 671 ನೇಮಕಾತಿ ಮಾಡಲಾಗಿದೆ. ಬೆಂಗಳೂರಿಗೆ ತೆರಳಿದ ಬಳಿಕ ಉಳಿದ 651 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಎನ್‌ಆರ್‌ಇಜಿಎ ಅಡಿಯಲ್ಲಿ ಮತ್ತು ಸ್ಥಳೀಯರ ಸಹಕಾರದೊಂದಿಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು, ಕಳಸಾ-ಬಂಡೂರಿ ಯೋಜನೆ ಕುರಿತು ಪ್ರತಿಕ್ರಿಯಿಸಿದ ಅವರು, ಅಂತರ್ ರಾಜ್ಯಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಕೇಂದ್ರ ಸರ್ಕಾರದ ಸಹಕಾರ ಅಗತ್ಯವಾಗಿದೆ ಎಂದರು. 

SCROLL FOR NEXT