ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಲಿಂಗಾಯತರು ಕಂಗಾಲಾಗಿದ್ದಾರೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಧ್ವನಿ ಎತ್ತಿರುವ ಬೆನ್ನಲ್ಲೇ ಲಿಂಗಾಯತ ಮುಖ್ಯಮಂತ್ರಿ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.
ಲಿಂಗಾಯತ ಸಮುದಾಯಕ್ಕೆ ಪ್ರಮುಖ ಹುದ್ದೆಗಳಿಗೆ ಪರಿಗಣಿಸುತ್ತಿಲ್ಲ, 'ದಿವಂಗತ ಮುಖ್ಯಮಂತ್ರಿಗಳಾದ ನಿಜಲಿಂಗಪ್ಪ ಮತ್ತು ಜೆ.ಎಚ್. ಪಟೇಲ್ ಅವರ ಅವಧಿಯಲ್ಲಿ ಸಮುದಾಯ ಉತ್ತಮವಾಗಿತ್ತು.ಈಗ ನಮ್ಮ ಸಮುದಾಯ ಕಂಗೆಟ್ಟಿದೆ ಎಂದು ಸಿದ್ದರಾಮಯ್ಯ ಅವರ ವಿರುದ್ಧ ಶಾಮನೂರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ವೀರಶೈವ ಮಹಾಸಭಾ ಕಾರ್ಯಕ್ರಮದ ವೇಳೆ ಲಿಂಗಾಯತರಿಗೆ ಪ್ರಮುಖ ಹುದ್ದೆಗಳನ್ನು ನೀಡದಿರುವ ಬಗ್ಗೆ ಶಾಮನೂರು ಶಿವಶಂಕರಪ್ಪ ಮಾತನಾಡಿದ್ದರು. “ನಾನು ಈ ಬಗ್ಗೆ ಸಚಿವರೊಂದಿಗೆ ಚರ್ಚಿಸಿಲ್ಲ. ಉಪಮುಖ್ಯಮಂತ್ರಿ ಸ್ಥಾನ ಪರಿಗಣಿಸಿದರೆ ನಾವು ಏನು ಮಾಡೋದು, ನಮ್ಮ ಬೇಡಿಕೆಯು ಮುಖ್ಯಮಂತ್ರಿ ಸ್ಥಾನ ಎಂದು ಅವರು ಹೇಳಿದ್ದರು.
ಇದನ್ನೂ ಓದಿ: ಆಪರೇಷನ್ ಹಸ್ತಕ್ಕೆ ಬಿಜೆಪಿಯ ಮೊದಲ ವಿಕೆಟ್ ಪತನ: ಮಾಜಿ ಶಾಸಕ ರಾಮಣ್ಣ ಲಮಾಣಿ ಅ.10ಕ್ಕೆ ಕಾಂಗ್ರೆಸ್ ಸೇರ್ಪಡೆ
ಮಧ್ಯ ಕರ್ನಾಟಕ ಪ್ರದೇಶದ ಅತ್ಯಂತ ಹಿರಿಯ ವ್ಯಕ್ತಿಗಳಲ್ಲಿ ಒಬ್ಬರಾದ ಲಿಂಗಾಯತ ಸಮುದಾಯದ 92 ವರ್ಷ ವಯಸ್ಸಿನ ನಾಯಕರ ಬೇಡಿಕೆಯು ದಾವಣಗೆರೆ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ ಯಡಿಯೂರಪ್ಪ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಡೆ ವಾಲಿತ್ತು. ಚುನಾವಣೆಯಲ್ಲಿ 46 ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ 37 ಅಭ್ಯರ್ಥಿಗಳು ಗೆದ್ದಿದ್ದಾರೆ. ಬಿಜೆಪಿ 69 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು. ಆದರೆ 15 ಮಂದಿ ಮಾತ್ರ ಗೆದ್ದಿದ್ದಾರೆ.
ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ್ದರಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿದ್ದರಾಮಯ್ಯ ಆಪ್ತರಾದ ರಾಜಣ್ಣ ಮೂರು ಉಪ ಮುಖ್ಯಮಂತ್ರಿ ಸೃಷ್ಟಿ ಪರ ಬ್ಯಾಟಿಂಗ್ ಮಾಡುತ್ತಿದ್ದರೆ. ಉಪಮುಖ್ಯಮಂತ್ರಿ ಶಿವಕುಮಾರ್ ಬಣದ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯ ಬಗ್ಗೆ ಮಾತುಗಳನ್ನಾಡುತ್ತಿದ್ದಾರೆ.