ಸಂಸದೆ ಸುಮಲತಾ ಅಂಬರೀಶ್ 
ರಾಜಕೀಯ

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ನಾಳೆ ನನ್ನ ನಿಲುವು ಪ್ರಕಟ: ಸಂಸದೆ ಸುಮಲತಾ

ಲೋಕಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈ ಬಾರಿಯೂ ಮಂಡ್ಯ ಲೋಕಸಭಾ ಕ್ಷೇತ್ರ ಭಾರೀ ಸದ್ದು ಮಾಡುತ್ತಿದೆ.

ಬೆಂಗಳೂರು: ಲೋಕಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈ ಬಾರಿಯೂ ಮಂಡ್ಯ ಲೋಕಸಭಾ ಕ್ಷೇತ್ರ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಿದ್ದು, ಹಾಲಿ ಸಂಸದೆ ಸುಮಲತಾ ಅಂಬರೀಶ್ ಅತಂತ್ರವಾಗಿದ್ದಾರೆ.

ಸುಮಲತಾ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಾರಾ? ಇಲ್ವಾ? ಸ್ವಾಭಿಮಾನಿಯ ಮುಂದಿನ ನಡೆ ಏನು? ಈ ಪ್ರಶ್ನೆಗಳ ಸುತ್ತವೇ ರಾಜಕೀಯ ಸುತ್ತುತ್ತಿದೆ. ಈ ಪ್ರಶ್ನೆಗಳಿಗೆ ನಾಳೆ ಉತ್ತರ ಸಿಗಲಿದೆ.

ಸುಮಲತಾ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ಕುರಿತು ಬುಧವಾರ ತಮ್ಮ ನಿಲುವು ಪ್ರಕಟಿಸುವುದಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ,

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.

ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ.

ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ.

ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ ಎಂದು ಮಂಡ್ಯ ಸಂಸದೆ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!