ಬಿ.ಎಸ್ ಯಡಿಯೂರಪ್ಪ
ಬಿ.ಎಸ್ ಯಡಿಯೂರಪ್ಪ 
ರಾಜಕೀಯ

ಲೋಕಸಭೆ ಚುನಾವಣೆ ನಂತರವೂ ಮೈತ್ರಿ ಮುಂದುವರಿಯಲಿದೆ: ಬಿ.ಎಸ್ ಯಡಿಯೂರಪ್ಪ

Shilpa D

ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ– ಜೆಡಿಎಸ್ ಪಕ್ಷಗಳು ಒಂದಾಗಿ ಹೋಗಬೇಕು. ಈ ಹೊಂದಾಣಿಕೆ ಈ ಚುನಾವಣೆಗೆ ಸೀಮಿತವಲ್ಲ. ಮೈತ್ರಿ ಮುಂದುವರೆಯಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಮಾತ್ರವಲ್ಲದೇ ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮುಂದುವರಿಯಲಿದೆ ಎಂದರು. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಪ್ರಯತ್ನ ಶುರುವಾಗಿದೆ. ನಾನು 23 ಕ್ಷೇತ್ರಗಳಲ್ಲೂ ಸುತ್ತಿದ್ದೇನೆ. ಉಳಿದ ಕ್ಷೇತ್ರಗಳಿಗೂ ಹೋಗುವೆ. ದೇವೇಗೌಡರು ಇಳಿವಯಸ್ಸಿನಲ್ಲೂ ಪ್ರಚಾರ ಮಾಡುತ್ತಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದ ಸ್ನೇಹಿತರು ಬಹಳಷ್ಟು ಮಾತನಾಡುತ್ತಾರೆ. ಅದಕ್ಕೆ ಚುನಾವಣೆಯಲ್ಲಿ ಮತದಾರರು ಉತ್ತರ ಕೊಡುತ್ತಾರೆ. ಕಾಂಗ್ರೆಸ್‌ನಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂದು ಹೇಳಲಿ ಎಂದು ಸವಾಲು ಹಾಕಿದ ಯಡಿಯೂರಪ್ಪ, ಯಾವುದೇ ವ್ಯಕ್ತಿಯ ಹೆಸರು ಹೇಳುವ ಸ್ಥಿತಿಯಲ್ಲಿ ಕಾಂಗ್ರೆಸ್ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿಯಾಗಲಿದ್ದು, ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ 5 ವರ್ಷಗಳ ಕಾರ್ಯಕ್ರಮವನ್ನು ಈಗಾಗಲೇ ರೂಪಿಸಲಾಗುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿರೋಧಿಯಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಅಂಬೇಡ್ಕರ್ ನಿಧನರಾದಾಗ ಅವರ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ. ಜವಾಹರಲಾಲ್ ನೆಹರೂ ಸಮಾಧಿಗೆ 52.6 ಎಕರೆ, ಇಂದಿರಾಗಾಂಧಿ ಸಮಾಧಿಗೆ 45 ಎಕರೆ, ರಾಜೀವ್ ಗಾಂಧಿ ಸಮಾಧಿಗೆ 15 ಎಕರೆ ಜಾಗ ನೀಡಲಾಗಿದೆ. ಆದರೆ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದು ಸರಿಯಲ್ಲ ಎಂದರು.

SCROLL FOR NEXT