ಬಿಜೆಪಿ - ಕಾಂಗ್ರೆಸ್ - ಜೆಡಿಎಸ್ 
ರಾಜಕೀಯ

CVoter survey: ಕಾಂಗ್ರೆಸ್‌ಗೆ ಆಘಾತ ನೀಡಿದ ಸಿವೋಟರ್ ಸಮೀಕ್ಷೆ; ಬಿಜೆಪಿ-ಜೆಡಿಎಸ್ ಮೈತ್ರಿಗೆ ಅತಿಹೆಚ್ಚು ಸ್ಥಾನ

ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆ ಇದ್ದು, ಚುನಾವಣಾ ಪೂರ್ವ ಸಿವೋಟರ್ ಸಮೀಕ್ಷೆಯು ಬಿಜೆಪಿಗೆ ಸಿಹಿಸುದ್ದಿ ನೀಡಿದ್ದು, ಕಾಂಗ್ರೆಸ್‌ಗೆ ಭಾರಿ ಆಘಾತ ಉಂಟಾಗಿದೆ. ರಾಜ್ಯದ ಬಿಜೆಪಿ ನಾಯಕರು ಈ ಸಮೀಕ್ಷೆಯನ್ನು ಸಂಭ್ರಮಿಸಿದ್ದರೆ, ಕಾಂಗ್ರೆಸ್‌ ನಾಯಕರು ಇದನ್ನು ತಿರಸ್ಕರಿಸಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಕಳೆದ ಬಾರಿಯಂತೆಯೇ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುವ ಕಸರತ್ತು ನಡೆಸುತ್ತಿವೆ. ಈ ಮಧ್ಯೆ ಕಾಂಗ್ರೆಸ್ ಏಕಾಂಕಿ ಹೋರಾಟಕ್ಕೆ ಮುಂದಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸದಲ್ಲಿದೆ.

ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ, ಕಾಂಗ್ರೆಸ್ ಒಂದೇ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಕೂಡ ಒಂದೇ ಒಂದು ಸ್ಥಾನ ಗೆದ್ದುಕೊಂಡಿತ್ತು. ಪಕ್ಷೇತರ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿದ್ದರು.

ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆ ಇದ್ದು, ಚುನಾವಣಾ ಪೂರ್ವ ಸಿವೋಟರ್ ಸಮೀಕ್ಷೆಯು ಬಿಜೆಪಿಗೆ ಸಿಹಿಸುದ್ದಿ ನೀಡಿದ್ದು, ಕಾಂಗ್ರೆಸ್‌ಗೆ ಭಾರಿ ಆಘಾತ ಉಂಟಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 21, ಎನ್‌ಡಿಎ ಮೈತ್ರಿಕೂಟದ ಪಾಲುದಾರ ಜೆಡಿಎಸ್‌ಗೆ 2 ಸ್ಥಾನಗಳಲ್ಲಿ ಗೆಲುವು ಸಿಗಲಿದೆ ಎಂದು ಭವಿಷ್ಯ ನುಡಿದಿದೆ.

ಈ ಮಧ್ಯೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್‌ಗೆ ಕೇವಲ 5 ಸ್ಥಾನಗಳು ಸಿಗಲಿದೆ ಎಂದು ಸಿವೋಟರ್‌ನ ಚುನಾವಣಾ ಪೂರ್ವ ಸಮೀಕ್ಷೆ ತಿಳಿಸಿದೆ. ರಾಜ್ಯದ ಬಿಜೆಪಿ ನಾಯಕರು ಈ ಸಮೀಕ್ಷೆಯನ್ನು ಸಂಭ್ರಮಿಸಿದ್ದರೆ, ಕಾಂಗ್ರೆಸ್‌ ನಾಯಕರು ಇದನ್ನು ತಿರಸ್ಕರಿಸಿದ್ದಾರೆ.

'ರಾಜ್ಯದಲ್ಲಿ ಮೋದಿ ಅಲೆ ಇದೆ ಎಂಬುದನ್ನು ಇದು ಸಾಬೀತುಪಡಿಸುತ್ತದೆ. ಜೆಡಿಎಸ್ ಜೊತೆಗಿನ ಮೈತ್ರಿ ಕರ್ನಾಟಕದಲ್ಲಿ ನಮ್ಮ ಬಲವನ್ನು ದ್ವಿಗುಣಗೊಳಿಸಿದೆ. ಆದಾಗ್ಯೂ, ನಮ್ಮ ನಿರೀಕ್ಷೆಯು ರಾಜ್ಯದ 28 ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸುವುದಾಗಿದೆ' ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಟಿಎನ್ಐಇಗೆ ತಿಳಿಸಿದ್ದಾರೆ.

ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ಎಂಎಲ್‌ಸಿ ಬಿಕೆ ಹರಿಪ್ರಸಾದ್ ಮಾತನಾಡಿ, 'ಚುನಾವಣೆ ಪೂರ್ವ ಸಮೀಕ್ಷೆಗಳ ಬಗ್ಗೆ ನಾವು ಜಾಗರೂಕರಾಗಿರಬೇಕು. ಏಕೆಂದರೆ, ಅನೇಕ ಸಂದರ್ಭಗಳಲ್ಲಿ ಅವುಗಳು ತಮ್ಮನ್ನು ನೇಮಿಸಿಕೊಳ್ಳುವ ಏಜೆನ್ಸಿಯತ್ತ ಒಲವು ತೋರಿರುತ್ತಾರೆ' ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಮಾತನಾಡಿ, ಈ ಸಮೀಕ್ಷೆಯನ್ನು ನಾವು ಹೇಗೆ ನಂಬುವುದು? 2023ರಲ್ಲಿ ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆ ವೇಳೆ ಸಿವೋಟರ್ ಸಮೀಕ್ಷೆಯ ಪ್ರಕಾರ ಬಿಜೆಪಿಗೆ 83ರಿಂದ 95 ಸ್ಥಾನಗಳನ್ನು ನೀಡಿತ್ತು. ಆದರೆ, ಬಿಜೆಪಿ ಕೇವಲ 66 ಸ್ಥಾನಗಳನ್ನು ಗಳಿಸಿದೆ ಎಂದು ಹೇಳಿದರು.

ಅದೇ ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ 110-112 ಸ್ಥಾನಗಳನ್ನು ನೀಡಿತ್ತು. ಆದರೆ ಕಾಂಗ್ರೆಸ್ 135 ಸ್ಥಾನಗಳನ್ನು ಪಡೆದುಕೊಂಡಿದೆ. ಕಳೆದ ಬಾರಿ ಅದರ ಭವಿಷ್ಯ ನಿಜವಾಗಲಿಲ್ಲ. ಈ ಬಾರಿಯೂ ವಿಫಲವಾಗಲಿದೆ. ಕರ್ನಾಟಕದ 28 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ತಿಳಿಸಿದರು.

ಈ ಸಮೀಕ್ಷೆ ವರದಿ ಕುರಿತು ಪ್ರತಿಕ್ರಿಯಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!