ರಾಜಕೀಯ

ಜಾತಿ ಸಮೀಕರಣದಲ್ಲಿ ಬದಲಾವಣೆ: ತುಮಕೂರು, ಚಿತ್ರದುರ್ಗದಲ್ಲಿ ಅಚ್ಚರಿಯ ಫಲಿತಾಂಶ ಸಾಧ್ಯತೆ

Sumana Upadhyaya

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಜಾತಿ ಸಮೀಕರಣ ಬದಲಾವಣೆಯಿಂದ ಅಚ್ಚರಿಯ ಫಲಿತಾಂಶ ಬರಬಹುದು ಎಂದು ಊಹಿಸಲಾಗಿದೆ. ಲಂಬಾಣಿ, ಭೋವಿ, ಎಸ್‌ಸಿ (ಎಡ) ಮತ್ತು ಕಾಡು ಗೊಲ್ಲರಂತಹ ಸಮುದಾಯಗಳು ತಮ್ಮದೇ ಆದ ಕಾರಣಗಳಿಗೆ ಬಿಜೆಪಿಯನ್ನು ಬೆಂಬಲಿಸುವ ಕಾರಣ ಈ ಲೋಕಸಭೆ ಚುನಾವಣೆಯಲ್ಲಿ ಜಾತಿ ಸಮೀಕರಣಗಳು ಪ್ರಮುಖ ಬದಲಾವಣೆಗೆ ಒಳಗಾಗಿ ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಎನ್ ಡಿಎ ಅಭ್ಯರ್ಥಿಗಳ ಪರ ಫಲಿತಾಂಶಗಳು ಬರಬಹುದು ಎಂದು ಅಂದಾಜಿಸಲಾಗಿದೆ.

ಕಾಡು ಗೊಲ್ಲ ಸಮುದಾಯಕ್ಕೆ ಪರಿಶಿಷ್ಠ ಪಂಗಡಕ್ಕೆ ಸೇರಿಸುವ ಸೌಲಭ್ಯದ ಭರವಸೆಯನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ರಾಜ್ಯಸಭೆಯಲ್ಲಿ ನೀಡಿದ್ದು ಅವರು ಮಾಡಿದ ಭಾಷಣದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ರಾಜಕೀಯವಾಗಿ ಮಾಸ್ಟರ್‌ಸ್ಟ್ರೋಕ್ ನೀಡಿದ್ದಾರೆ ಎಂದು ಪರಿಗಣಿಸಲಾಗಿದೆ. ಇದರ ಲಾಭವನ್ನು ಪಡೆದುಕೊಂಡು, ದೇವೇಗೌಡರು ಈಗ ತಮ್ಮ ಪ್ರಚಾರ ಭಾಷಣಗಳಲ್ಲಿ ಅದನ್ನು ಪುನರುಚ್ಚರಿಸುತ್ತಿದ್ದಾರೆ ಮತ್ತು ಈ ಸಮುದಾಯಗಳನ್ನು ಪ್ರತಿನಿಧಿಸುವ ಸಂಘಗಳು ಸಹ ಎನ್ ಡಿಎ ಅಭ್ಯರ್ಥಿಗಳಿಗೆ ತಮ್ಮ ಒಲವು ತೋರಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಬದಲಾವಣೆಯು ತುಮಕೂರು ಮತ್ತು ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳಲ್ಲಿ ವಿಶೇಷವಾಗಿ ಪರಿಣಾಮ ಬೀರಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ತಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡದಿರುವ ಹಿನ್ನೆಲೆಯಲ್ಲಿ ಲಂಬಾಣಿಗಳು ಅಸಮಾಧಾನಗೊಂಡಿದ್ದಾರೆ. "ನಾವು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿರಬಹುದು, ಆದರೆ ಲೋಕಸಭೆ ಚುನಾವಣೆಯಲ್ಲಿ ನಾವು ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಸಮುದಾಯದ ಮುಖಂಡರೊಬ್ಬರು ಹೇಳಿದರು. ಎಸ್‌ಸಿ ಕೋಟಾ ವಿಭಜನೆಗೆ ಒಲವು ತೋರಿದ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದಿಂದ ಅವರು ವಿಮುಖರಾಗಿದ್ದರು.

ಚಿತ್ರದುರ್ಗದಿಂದ ಬಿ.ಎನ್.ಚಂದ್ರಪ್ಪ ಮತ್ತು ಕೋಲಾರದಿಂದ ಕೆ.ವಿ.ಗೌತಮ್ಮ ಅವರಿಗೆ ಎಸ್‌ಸಿ (ಎಡ)ದಿಂದ ಕಾಂಗ್ರೆಸ್ ಟಿಕೆಟ್ ನೀಡಿದ್ದರೂ, ಏಳು ಬಾರಿ ಕೋಲಾರದಿಂದ ಪ್ರತಿನಿಧಿಸಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರ ಕುಟುಂಬಕ್ಕೆ ಒಲವು ತೋರದ ಹಿನ್ನೆಲೆಯಲ್ಲಿ ಹಲವು ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.

ಒಕ್ಕಲಿಗ ಮತಗಳ ಬಗ್ಗೆ ಹೇಳುವುದಾದರೆ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೇಕಡಾ 4-5 ರಷ್ಟು ಹೆಚ್ಚಳವನ್ನು ಸಾಧಿಸಿದೆ. ಲೋಕಸಭೆ ಚುನಾವಣೆಯಲ್ಲಿ ಅದೇ ಪ್ರವೃತ್ತಿ ಮುಂದುವರಿಯುತ್ತದೆಯೇ ಎಂದು ನೋಡಬೇಕು. ಕಳೆದ ವಿಧಾನಸಭೆ ಚುನಾವಣೆ ವೇಳೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸುತ್ತಿದ್ದಂತೆ ಒಕ್ಕಲಿಗರು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ಹಿತಾಸಕ್ತಿಗಾಗಿ ವೀರಶೈವ ಲಿಂಗಾಯತರು ಬಿಜೆಪಿಯನ್ನು ಬೆಂಬಲಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ. ಕುರುಬರು ಸಿದ್ದರಾಮಯ್ಯ ಅವರ ಪರವಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ, ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಅಸಮಾನಗೊಂಡು ಮುಸಲ್ಮಾನರಿಗೆ ಕಾಂಗ್ರೆಸ್ ಗೆ ಬೆಂಬಲ ನೀಡದೆ ಬೇರೆ ದಾರಿಯಿಲ್ಲ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

SCROLL FOR NEXT