ಸಿಎಂ ಸಿದ್ದರಾಮಯ್ಯ 
ರಾಜಕೀಯ

Muda scam: ಸಿದ್ದರಾಮಯ್ಯ ಬೆನ್ನಿಗೆ ನಿಂತ ಅಹಿಂದ; ಶಕ್ತಿ ಪ್ರದರ್ಶನಕ್ಕೆ ಮುಂದು..!

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನಿರ್ಧಾರವು ಕಾಂಗ್ರೆಸ್ ಪಕ್ಷ ಮತ್ತು ಬೆಂಬಲಿಗರಲ್ಲಿ ವ್ಯಾಪಕ ಅಸಮಾಧಾನವನ್ನು ಹುಟ್ಟುಹಾಕಿದೆ.

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬೆಂಬಲಿಗರು ಸರಣಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನಿರ್ಧಾರವು ಕಾಂಗ್ರೆಸ್ ಪಕ್ಷ ಮತ್ತು ಬೆಂಬಲಿಗರಲ್ಲಿ ವ್ಯಾಪಕ ಅಸಮಾಧಾನವನ್ನು ಹುಟ್ಟುಹಾಕಿದೆ. ವಿಶೇಷವಾಗಿ ಸಿದ್ದರಾಮಯ್ಯ ಅವರಿಗೆ ನಿಕಟವಾಗಿರುವ ಅಹಿಂದ ಸಮುದಾಯಗಳ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.

ಇದೀಗ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿರುವ ಅಹಿಂದ ಸಮುದಾಯಗಳ ಮುಖಂಡರು, ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಒಕ್ಕೂಟವು ಆಗಸ್ಟ್ 21 ಮತ್ತು 27 ರಂದು ಬೃಹತ್ ಪ್ರತಿಭಟನೆಗಳನ್ನು ಘೋಷಿಸಿದೆ.

ಮೊದಲ ದಿನ, ವಿವಿಧ ಹಿಂದುಳಿದ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪಂಜಿನ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಈ ಪ್ರತಿಭಟನೆಯಲ್ಲಿ ಸುಮಾರು 2,000 ಜನರು ಭಾಗವಹಿಸುವ ನಿರೀಕ್ಷೆಯಿದೆ.

ಆಗಸ್ಟ್ 27ರ ಪ್ರತಿಭಟನೆಯಲ್ಲಿ ಮಾವಳ್ಳಿ ಶಂಕರ್, ಅನಂತ್ ನಾಯಕ್, ಯೆನ್ನಗೆರೆ ವೆಂಕಟರಾಮಯ್ಯ ಮತ್ತು ಕೆಎಂ ರಾಮಚಂದ್ರಪ್ಪ ಸೇರಿದಂತೆ ಹಿಂದುಳಿದ ಸಮುದಾಯಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಮಾತನಾಡಿ, ಸ್ವಚ್ಛ ದಾಖಲೆ ಕಾಯ್ದುಕೊಂಡ ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಏಕಾಏಕಿ ಆಧಾರ ರಹಿತ ಆರೋಪ ಮಾಡುತ್ತಿವೆ. ಈ ಆರೋಪಗಳನ್ನು ಸಾಬೀತುಪಡಿಸಲು ಅವರ ಬಳಿ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಇದು ಸಿದ್ದರಾಮಯ್ಯ ಅವರ ಪ್ರತಿಷ್ಠೆ ಹಾಳುಮಾಡಲು ಮತ್ತು ಅವರ ರಾಜಕೀಯ ಜೀವನವನ್ನು ಅಂತ್ಯಗೊಳಿಸಲು ನಡೆಸಿದ ಪಿತೂರಿಯಾಗಿದೆ ಎಂದು ಹೇಳಿದರು.

ಇದೇ ವೇಳೆ ರಾಜ್ಯಪಾಲರನ್ನು ಟೀಕಿಸಿದ ಅವರು, ಅವರ ಈ ನಿರ್ಧಾರ ಪಕ್ಷಪಾತದಿಂದ ಕೂಡಿದೆ. ಅರಾಜಕೀಯವಾಗಿ ಮತ್ತು ತಟಸ್ಥವಾಗಿ ಉಳಿಯಬೇಕಾದ ರಾಜ್ಯಪಾಲರ ಕಚೇರಿಯನ್ನು ಈ ರೀತಿ ದುರುಪಯೋಗಪಡಿಸಿಕೊಳ್ಳುತ್ತಿರುವುದು ನಮಗೆ ತೀವ್ರ ನೋವು ತಂದಿದೆ ಎಂದು ಹೇಳಿದ್ದಾರೆ,

ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಎಂಎಲ್‌ಸಿ ಸಲೀಂ ಅಹ್ಮದ್ ಅವರು ಮಾತನಾಡಿ, ಪರಿಸ್ಥಿತಿ ಅವಲೋಕಿಸಲಾಗುತ್ತಿದ್ದು, ನಂತರದ ದಿನಗಳಲ್ಲಿ ಮುಂದಿನ ಕ್ರಮದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇಂತಹ ಪ್ರತಿಭಟನೆಗಳು ರಾಜ್ಯಕ್ಕೆ ಹೊಸದಲ್ಲ. 2011ರಲ್ಲಿ ಅಂದಿನ ರಾಜ್ಯಪಾಲ ಎಚ್‌ಆರ್‌ ಭಾರದ್ವಾಜ್‌ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿದಾಗಲೂ ಬಿಜೆಪಿ ರಾಜ್ಯಾದ್ಯಂತ ಬಂದ್‌ ನಡೆಸಿ ರಾಜ್ಯಪಾಲರ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT