ಬೆಂಗಳೂರು: ವಕ್ಫ್ ವಿಚಾರದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಬಿಜೆಪಿ ಹೊಣೆಯಾಗುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸೋಮವಾರ ಎಚ್ಚರಿಕೆ ನೀಡಿದ್ದಾರೆ.
ವಕ್ಫ್ ಮಂಡಳಿಯಿಂದ ನೋಟಿಸ್ ನೀಡಲಾದ ಸ್ಥಳಗಳಿಗೆ ಸೋಮವಾರ ಭೇಟಿ ನೀಡಿದ ಆರ್.ಅಶೋಕ ಅವರು, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು.
ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ ಅವರು, ಹತ್ತಾರು ವರ್ಷಗಳಿಂದ ಜಮೀನಿನಲ್ಲಿ ಉಳುಮೆ ಮಾಡುತ್ತಿರುವ ಸಾವಿರಾರು ರೈತರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮತಗಳನ್ನು ಸೆಳೆಯಲು ಕಾಂಗ್ರೆಸ್ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
ಮೈಸೂರಿನ ಮುನೇಶ್ವರ ನಗರವನ್ನು ಸಂಪೂರ್ಣ ವಕ್ಫ್ಗೆ ನೀಡಲು ಸಿದ್ಧತೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ರೀತಿ ಮಾಡುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಹಾಳಾಗಲಿದೆ. ಇದಕ್ಕೆ ಸರ್ಕಾರವೇ ನೇರ ಕಾರಣವಾಗಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಹಿಂದೂಗಳಿಗೆ ಒಂದೇ ಮದುವೆಯಾಗುವಂತೆ ಕಾನೂನು ತರಲಾಯಿತು. ಆದರೆ, ಮುಸ್ಲಿಮರಿಗೆ ಈ ಕಾನೂನು ಅನ್ವಯವಾಗಲಿಲ್ಲ. ಅಲ್ಲಿಂದಲೇ ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಪರವಾಗಿ ಕಾನೂನುಗಳನ್ನು ಜಾರಿ ಮಾಡಿತು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಕ್ಫ್ ಮಂಡಳಿಗೆ ಸಂಪೂರ್ಣ ಅಧಿಕಾರ ನೀಡುವಂತೆ ಕಾನೂನು ತಿದ್ದುಪಡಿ ತಂದರು. ಅದಾದ ನಂತರ 1 ಲಕ್ಷ ಕೋಟಿ ರೂ. ಗೂ ಅಧಿಕ ಬೆಲೆಬಾಳುವ ಭೂಮಿ ಒಂದೇ ಬಾರಿಗೆ ವಕ್ಫ್ ಮಂಡಳಿಗೆ ಸೇರಿಬಿಟ್ಟಿತು. ಇವೆಲ್ಲವನ್ನೂ ವ್ಯವಸ್ಥಿತವಾಗಿದೆ ಮಾಡಲಾಗಿದೆ ಎಂದು ದೂರಿದರು.
ವಕ್ಫ್ ಮಂಡಳಿಯದ್ದು ಸಮಸ್ಯೆಯೇ ಅಲ್ಲವೆಂದರೆ, ರೈತರು ಹಾಗೂ ಮಠಗಳ ಸ್ವಾಮೀಜಿಗಳು ಪ್ರತಿಭಟನೆ ಏಕೆ ಮಾಡುತ್ತಿದ್ದಾರೆ? ಬಿಜೆಪಿ ಸಚಿವರು ಎಂದಿಗೂ ಪ್ರತಿ ಜಿಲ್ಲೆಗೆ ಹೋಗಿ ನೋಟಿಸ್ ಕೊಡಲು ಸೂಚನೆ ನೀಡಿರಲಿಲ್ಲ. ಆದರೆ ಈಗಿನ ಸಚಿವ ಜಮೀರ್ ಅಹ್ಮದ್ ಪ್ರತಿ ಜಿಲ್ಲೆಗೆ ಹೋಗಿ ಅಧಿಕಾರಿಗಳನ್ನು ಬೆದರಿಸಿ ನೋಟಿಸ್ ಕೊಡಿಸುತ್ತಿದ್ದಾರೆ. ಪ್ರಧಾನಿ ಮೋದಿಯವರು ಕಾನೂನಿನಲ್ಲಿ ತಿದ್ದುಪಡಿ ತಂದು ಈ ತಪ್ಪು ಕೆಲಸವನ್ನು ಸರಿ ಪಡಿಸಲಿದ್ದಾರೆ ಎಂದು ಹೇಳಿದರು.
ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿದ್ದ ಪ್ರಧಾನಿ ನೆಹರು ಕಾಲದಲ್ಲೇ ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡಲಾಯಿತು. ಅದೇ ಮಾದರಿಯಲ್ಲಿ ತುಷ್ಟೀಕರಣವನ್ನು ಮಾಡಿ ವಕ್ಫ್ ಮಂಡಳಿಗೆ ಪರಮಾಧಿಕಾರ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಜಮೀರ್ ಅಹ್ಮದ್ ಭೂಮಿ ಕಬಳಿಕೆಗೆ ಆದೇಶ ನೀಡಿದ್ದಾರೆ. ಇದರಿಂದಾಗಿ ರಾಜ್ಯದ ರೈತರು ಚಿಂತೆಗೀಡಾಗಿದ್ದಾರೆ. ಭೂಮಿ ಕಳೆದುಕೊಳ್ಳುವ ಭಯದಲ್ಲಿ ಜೀವಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಇದೇ ವೇಳೆ ವಕ್ಫ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಒತ್ತಾಯಿಸಿದರು.
ಬಿಜೆಪಿಯು ವಕ್ಫ್ ಕಾಯ್ದೆಯನ್ನು ವಿರೋಧಿಸುತ್ತಿದ್ದು, ಪ್ರಧಾನಿ ಮೋದಿಯವರು ಅದನ್ನು ರದ್ದುಗೊಳಿಸಬೇಕು ಎಂದು ಬಯಸಿದ್ದಾರೆ. ಮುನೇಶ್ವರ ಕಾಲೋನಿಯಲ್ಲಿ ಬೋರ್ಡ್ ಮೂಲಕ ನೋಟಿಸ್ ನೀಡಿರುವವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು