ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಮೀಸಲಾತಿಗಾಗಿ ಹೋರಾಟ ನಡೆಸಿದ ಪಂಚಮಸಾಲಿ ಸಮಾಜದವರ ಮೇಲೆ ಲಾಠಿಚಾರ್ಜ್ ಮಾಡಿದ ವಿಷಯ ಗುರುವಾರ ಮತ್ತೆ ಪ್ರತಿಧ್ವನಿಸಿದೆ. 2ಎ ಮೀಸಲಾತಿಗಾಗಿ ಒತ್ತಾಯಿಸಿ ಪಂಚಮಸಾಲಿ ಲಿಂಗಾಯತ ಸಮುದಾಯ ನಡೆಸುತ್ತಿರುವ ಹೋರಾಟವನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ.ಬೆಳಗಾವಿಯಲ್ಲಿ ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ ಮತ್ತು ಪೋಲಿಸ್ ಲಾಠಿಚಾರ್ಜ್ ಮಾಡಿದ್ದರಿಂದ ಹಿಂಸಾಚಾರಕ್ಕೆ ಕಾರಣವಾಯಿತು, ಇದು ಉತ್ತರ ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಮೇಲೆ ತನ್ನದೇ ಆದ ಪ್ರಭಾವ ಬೀರುವ ಸಾಧ್ಯತೆಯಿದೆ.
2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಪ್ರತಿಭಟನೆ “ಅಸಂವಿಧಾನಿಕ” ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಗಾಯದ ಮೇಲೆ ಉಪ್ಪು ಸವರಿದಂತಾಗಿದೆ. ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಪ್ರತಿಭಟನಾಕಾರರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡಿದ್ದರಿಂದ “ಲಘು ಲಾಠಿಚಾರ್ಜ್” ಮಾಡಲಾಯಿತು ಎಂದು ಸಮರ್ಥಿಸಿಕೊಂಡರು. ಆದರೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಂಚಮಸಾಲಿ ಲಿಂಗಾಯತ ಧಾರ್ಮಿಕ ಮುಖ್ಯಸ್ಥ ಶ್ರೀ ಜಯಮೃತ್ಯುಂಜಯ ಸ್ವಾಮಿ ಅವರು, ಕಾನೂನು ಉಲ್ಲಂಘಿಸಿಲ್ಲ ಎಂದು ಪರಮೇಶ್ವರ್ ಅವರಿಗೆ ತಿರುಗೇಟು ನೀಡಿದರು. ತುಮಕೂರಿನ ಸಿದ್ದಗಂಗಾ ಮಠದ ಭಕ್ತ ಪರಮೇಶ್ವರ್ ಅವರು ಲಿಂಗಾಯತ ಪರ ಇದ್ದಾರೆ ಎಂದು ನಾವು ಭಾವಿಸಿದ್ದೇವೆ, ಅದಕ್ಕಾಗಿಯೇ ಅವರು ಸಮುದಾಯದ ಬೆಂಬಲದೊಂದಿಗೆ ಕೊರಟಗೆರೆ ಸ್ಥಾನವನ್ನು ಗೆದ್ದಿದ್ದಾರೆ. ಆದರೆ ಲಿಂಗಾಯತರು ಈಗ ಪಶ್ಚಾತ್ತಾಪ ಪಡುತ್ತಿದ್ದು ಅವರಿಗೆ ಪಾಠ ಕಲಿಸುತ್ತಾರೆ ಎಂದು ಅವರು ಹೇಳಿದರು.
ಕುರುಬ ಸಮುದಾಯದ ಐಕಾನ್ ಆಗಿರುವ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಪಂಚಮಸಾಲಿ ಲಿಂಗಾಯತರನ್ನು 2ಎ ಗೆ ಸೇರಿಸುವ ಸಾಧ್ಯತೆ ಕಡಿಮೆ. ವಾಸ್ತವವಾಗಿ ಕುರುಬರನ್ನು ಎಸ್ಟಿ ವರ್ಗಕ್ಕೆ ಸೇರಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು. ಸಾಂವಿಧಾನಿಕ ಹಸ್ತಕ್ಷೇಪವಿಲ್ಲದೆ, ಕೋಟಾವನ್ನು ಮರುಹಂಚಿಕೆ ಮಾಡಲು ಸಾಧ್ಯವಿಲ್ಲ ಎಂದು ಸಿಎಂಗೆ ತಿಳಿದಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.
ಬುಧವಾರ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಸಿದ್ದರಾಮಯ್ಯ ಅವರ ಬೆನ್ನಿಗೆ ಮುಗಿಬಿದ್ದಿದ್ದಾರೆ. ಪಂಚಮಸಾಲಿ ಲಿಂಗಾಯತರಿಗೆ 2ಎ ಟ್ಯಾಗ್ ನೀಡಬಾರದು, ಇದರಿಂದ 2ಎ ಕೋಟಾದಲ್ಲಿರುವ ಕುರುಬ ಸೇರಿದಂತೆ ಹಿಂದುಳಿದ ವರ್ಗಗಳ ಭವಿಷ್ಯಕ್ಕೆ ಧಕ್ಕೆಯಾಗಲಿದೆ ಎಂದು ಒತ್ತಾಯಿಸಿದ್ದಾರೆ.
ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರವು 2ಎ ಪ್ರವರ್ಗದಡಿ ಮುಸ್ಲಿಮರಿಗಿದ್ದ ಶೇ.4ರಷ್ಟು ಮೀಸಲಾತಿ ರದ್ದು ಮಾಡಿ 2ಸಿ, 2ಡಿ ಪ್ರವರ್ಗ ಸೃಷ್ಟಿಮಾಡುವ ನಿರ್ಧಾರ ಮಾಡಿತು. 2C ಮತ್ತು 2D ಅನ್ನು ರಚಿಸುವ ಮೂಲಕ ಒಕ್ಕಲಿಗರು (3A) ಮತ್ತು ಲಿಂಗಾಯತರು (3B) ನಡುವೆ ತಲಾ ಶೇ. 2ರಷ್ಟು ಹಂಚಿಕೆ ಹಂಚಿಕೊಂಡಿತ್ತು. ಆದರೆ ಮುಸ್ಲಿಮರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ಆದೇಶ ನೀಡಿತ್ತು. ಈ ಆದೇಶದ ನಂತರ ಬೊಮ್ಮಾಯಿ ಸರ್ಕಾರವು ಸುಪ್ರೀಂಕೋರ್ಟ್ ನಲ್ಲಿ ಈ ಕುರಿತು ಅಫಿಡವಿಟ್ ಸಲ್ಲಿಸಿತ್ತು.
ಈ ಕುರಿತು ಸಿದ್ದರಾಮಯ್ಯ ಅವರು ವಿವರಣೆ ನೀಡಲು ಬಯಸಿದ್ದು, ಪ್ರತಿಭಟನಾ ನಿರತ ಸಮುದಾಯವನ್ನು ಸಮಾಧಾನ ಪಡಿಸಲು ಸ್ವಾಮೀಜಿ ಸೇರಿದಂತೆ ಮಧ್ಯಸ್ಥಗಾರರ ಸಭೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 2013 ರಲ್ಲಿ, ಬೆಳಗಾವಿಯ ಸುವರ್ಣ ವಿಕಾಸ ಸೌಧದಲ್ಲಿ ಎಸ್ಸಿ ಕೋಟಾ ವರ್ಗೀಕರಣಕ್ಕೆ ಒತ್ತಾಯಿಸಿ ಎಸ್ಸಿ ಎಡ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿತ್ತು. ಈಗ ಇದೇ ಪರಿಸ್ಥಿತಿ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಬಹುದು ಎಂದು ವಿಶ್ಲೇಷಕರು ಹೇಳುತ್ತಾರೆ. ಈ ಘಟನೆ ನಡೆಯಬಾರದಿತ್ತು, ಮತ್ತು ಇದು ಈಗ ರಾಜಕೀಯ ತಿರುವನ್ನು ತೆಗೆದುಕೊಳ್ಳುತ್ತಿದೆ" ಎಂದು ಪಂಚಮಸಾಲಿ ಲಿಂಗಾಯತ ಸಮುದಾಯದ ಕಾಂಗ್ರೆಸ್ ನಾಯಕ ಒಪ್ಪಿಕೊಂಡಿದ್ದಾರೆ.