ಚಿಕ್ಕಮಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಎಲ್ಲಾ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ,
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ದೇವರಾಜ ಶೆಟ್ಟಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ಹುಸಿ ಭರವಸೆಯಲ್ಲಿ ಕಾಂಗ್ರೆಸ್ ಇದೆ, ಆದರೆ ಕಾಂಗ್ರೆಸ್ ಗೆ ಅದು ಸಾಧ್ಯವಿಲ್ಲ ಎಂದಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವನ್ನು ಮತದಾರರು ಖಾತ್ರಿಪಡಿಸದಿದ್ದರೆ ಐದು ಭರವಸೆಗಳನ್ನು ನಿಲ್ಲಿಸಲಾಗುವುದು ಎಂಬ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಹೇಳಿಕೆಯನ್ನು ನೋಡಿದರೆ ಕಾಂಗ್ರೆಸ್ ತನ್ನ ಸೋಲನ್ನು ಈಗಾಗಲೇ ಒಪ್ಪಿಕೊಂಡಂತಿದೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ನೋಡಲು ಜನ ಕಾತರರಾಗಿದ್ದಾರೆ. ಮೋದಿ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಂದ ಕಾಂಗ್ರೆಸ್ ನಾಯಕರಿಗೆ ರಾತ್ರಿ ನಿದ್ದೆ ಇಲ್ಲದಂತಾಗಿದೆ ಎಂದು ವಿಜಯೇಂದ್ರ ಲೇವಡಿ ಮಾಡಿದ್ದಾರೆ.
ಇದನ್ನೂ ಓದಿ: ವಯಸ್ಸಾದ ತಂದೆಯ ಜೊತೆ ಬಿಜೆಪಿ ನಾಯಕರ ಮನೆ ಬಾಗಿಲಿಗೆ ಅಲೆಯುತ್ತಿರುವುದು ದುಸ್ಥಿತಿಯ ದ್ಯೋತಕವಲ್ಲವೇ, ಮಿಣಿ ಮಿಣಿ ಕುಮಾರಣ್ಣ?
ಬಿಜೆಪಿ ತನ್ನ ಸ್ವಂತ ತಪ್ಪುಗಳಿಂದಾಗಿ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದೆ ಎಂದು ಒಪ್ಪಿಕೊಂಡ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 130 ರಿಂದ 140 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಬರಗಾಲದಿಂದ ತತ್ತರಿಸಿದೆ. 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡಲು ಯಾವುದೇ ಯೋಜನೆ ರೂಪಿಸಿಲ್ಲ. ಕೇವಲ ಗ್ಯಾರಂಟಿ ಹೆಸರಿನಲ್ಲಿ ಜನರ ಮುಂದೆ ಹೋಗುತ್ತಿದೆ ಎಂದರು.
ಸಿಎಂ ಸಿದ್ದರಾಮಯ್ಯ ಜಾತಿ ಮತಗಳ ನಡುವೆ ಒಡಕು ಮೂಡಿಸುವ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದರು. ಅವರು ಕೇಸರಿ ಬಣ್ಣವನ್ನು ದ್ವೇಷಿಸುತ್ತಾರೆ. ಸಿದ್ದರಾಮಯ್ಯ ಅವರ ಹೆಸರಿನಲ್ಲಿ ರಾಮ ಇರಬಹುದು, ಆದರೆ ಅವರ ಹೃದಯದಲ್ಲಿ ಟಿಪ್ಪು ಇದ್ದಾನೆ ಎಂದು ಕಿಡಿಕಾರಿದರು.