ರಾಜಕೀಯ

ಬಿಜೆಪಿಗಿಂತ ಕಾಂಗ್ರೆಸ್‌ನಲ್ಲೇ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ: ಸ್ವಪಕ್ಷ ನಾಯಕ ಶಿವರಾಮ್ ಹೇಳಿಕೆಗೆ ಡಿಕೆಶಿ ಸಿಡಿಮಿಡಿ, ಶಿಸ್ತು ಕ್ರಮದ ಎಚ್ಚರಿಕೆ

Manjula VN

ಬೆಂಗಳೂರು: ಬಿಜೆಪಿಗಿಂತಲೂ ಕಾಂಗ್ರೆಸ್‌ನಲ್ಲೇ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಸ್ವಪಕ್ಷದ ನಾಯಕ ಬಿ.ಶಿವರಾಮ್ ಅವರ ಹೇಳಿಕೆಗೆ ಕೆಂಡಾಮಂಡಲಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ್ದ ಶಿವರಾಮ್ ಅವರು, ಬಿಜೆಪಿಗಿಂತ ಕಾಂಗ್ರೆಸ್‌ನಲ್ಲೇ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ. ಹಾಸನ ಜಿಲ್ಲೆಯಲ್ಲಿ ಶೇ.40 ಕಮಿಷನ್ ಮೀರಿ ಲಂಚ ನಡೆಯುತ್ತಿದೆ ನಾವು ಅಧಿಕಾರಕ್ಕೆ ಬರುವಾಗ ಬಿಜೆಪಿ ವಿರುದ್ಧ ಕಮಿಷನ್ ಆರೋಪ ಮಾಡಿದ್ದೆವು. ಆದರೆ ಈಗ ಜಿಲ್ಲೆಯಲ್ಲಿ ಅದಕ್ಕಿಂತ ಹೆಚ್ಚಾಗಿ ಭ್ರಷ್ಟಾಚಾರ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಿ ಎಂದು ನಾನೇ ಹೇಳಿದ್ದೇನೆ ಎಂದು ಹೇಳಿದ್ದರು.

ಶಿವರಾಮ್ ಅವರ ಈ ಹೇಳಿಕೆಗೆ ಕೆಂಡಾಮಂಡಲಗೊಂಡಿರುವ ಡಿಕೆ.ಶಿವಕುಮಾರ್ ಅವರು. (ಶಿವರಾಮ್) ಅವರಿಗೆ ಯಾವುದೇ ಸಮಸ್ಯೆಗಳಿದ್ದರೆ ನಮ್ಮೊಂದಿಗೆ ಮಾತನಾಡಬೇಕು ಮತ್ತು ಮಾಧ್ಯಮಗಳ ಮುಂದೆ ಮಾತನಾಡಬಾರದು. ಅಂತಹ ಹೇಳಿಕೆ ನೀಡಿದರೆ ಶಿವರಾಂ ಸೇರಿದಂತೆ ಯಾವುದೇ ನಾಯಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು' ಎಂದು ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿ, ಈ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಮಾಧ್ಯಮದವರು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕುರಿತು (ಮಾಧ್ಯಮಗಳು) ಮೊದಲು ಬರೆಯಿರಿ ಎಂದರು.

SCROLL FOR NEXT