ಬೆಳಗಾವಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿರುವುದು ಹಾಲಿ ಸಂಸದೆ ಮಂಗಳಾ ಅಂಗಡಿ ಅವರ ಪುತ್ರಿ ಶ್ರದ್ಧಾ ಶೆಟ್ಟರ್ (ಜಗದೀಶ್ ಶೆಟ್ಟರ್ ಸೊಸೆ) ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬೆಳಗಾವಿ ಲೋಕಸಭೆಗೆ ಬಿಜೆಪಿಯ ಒಮ್ಮತದ ಅಭ್ಯರ್ಥಿಯಾಗಿ ಹೊರಹೊಮ್ಮುವ ಸಾಧ್ಯತೆ ಹೆಚ್ಚಿದೆ.
ಮತ್ತೊಂದೆಡೆ, ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿರುವುದು ಕಾಂಗ್ರೆಸ್ನಲ್ಲಿ ಚರ್ಚೆಗೆ ಕಾರಣವಾಗಿದ್ದು, 'ಗೆಲ್ಲುವ ' ಅಭ್ಯರ್ಥಿಯನ್ನು ಕಣಕ್ಕಿಳಿಸುವ ಒತ್ತಡದಲ್ಲಿದೆ. ಹೀಗಾಗಿ ಪ್ರಬಲ ಎದುರಾಳಿಯನ್ನು ಕಣಕ್ಕಿಳಿಸಲು ಪಕ್ಷವು ಜಾರಕಿಹೊಳಿ ಅಥವಾ ಹೆಬ್ಬಾಳ್ಕರ್ ಅವರ ಮೇಲೆ ಅವಲಂಬಿತವಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜಕೀಯವಾಗಿ ಪ್ರಭಾವಿ ಕುಟುಂಬಗಳ ಪೈಕಿಯಿಂದ ಒಬ್ಬರನ್ನು ಕಣಕ್ಕಿಳಿಸಬಹುದು ಎಂದು ಮೂಲಗಳು ತಿಳಿಸಿವೆ.
ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ನಲ್ಲಿದ್ದಾಗ, ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಮೋಹನ್ ಕಾತರಕಿ, ಯುವ ಮುಖಂಡರಾದ ಕಿರಣ್ ಸಾಧುನವರ್, ಡಾ ಗಿರೀಶ್ ಸೋನ್ವಾಲ್ಕರ್ ಮತ್ತು ವಿನಯ್ ನಾವಲಗಟ್ಟಿ ಅವರಂತಹ ನಾಯಕರೊಬ್ಬರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ಯೋಚಿಸುತಿತ್ತು, ಆದರೆ ಈಗ ಸುರೇಶ್ ಅಂಗಡಿ ಕುಟುಂಬದ ಸದಸ್ಯರೊಬ್ಬರೇ ಬಿಜೆಪಿ ಅಭ್ಯರ್ಥಿಯಾಗಲಿರುವ ಕಾರಣ, ಕಾಂಗ್ರೆಸ್ ತನ್ನ ಕಾರ್ಯತಂತ್ರವನ್ನು ಬದಲಾಯಿಸಬಹುದು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮಾತೃ ಪಕ್ಷಕ್ಕೆ ಮರಳಿದ ಮಾಜಿ ಸಿಎಂ: ಬೆಳಗಾವಿಯಿಂದ ಶೆಟ್ಟರ್ ಸೊಸೆ ಶ್ರದ್ಧಾ; ಹಾವೇರಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಪುತ್ರ ಮೃಣಾಲ್ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮ್ಮ ಪುತ್ರ ಅಥವಾ ಕಾಂಗ್ರೆಸ್ ಹೈಕಮಾಂಡ್ ಯಾರನ್ನೆ ಕಣಕ್ಕಿಲಿಸಿದರೂ ಪಕ್ಷದ ಅಭ್ಯರ್ಥಿಯ ಪರವಾಗಿ ತಾವು ಕೆಲಸ ಮಾಡುವುದಾಗಿ ಲಕ್ಷಿ ಹೆಬ್ಬಾಳ್ಕರ್ ಭಾನುವಾರ ಹೇಳಿದ್ದಾರೆ, ಆದರೆ ಸಮೀಕ್ಷಾ ವರದಿ ಬಂದ ನಂತರವೇ ಅಂತಿಮ ಆಯ್ಕೆ ಮಾಡಲಾಗುವುದು ಎಂದು ಹೇಳಲಾಗಿದೆ.
ಕೆಲವು ವಾರಗಳ ಹಿಂದೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಅಥವಾ ಹೆಬ್ಬಾಳ್ಕರ್ ಕುಟುಂಬದ ಯಾವುದೇ ಸದಸ್ಯರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಬೆಳಗಾವಿಗೆ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಕುರುಬ ಸಮುದಾಯದ ನಾಯಕರನ್ನು ಪಕ್ಷ ಆಯ್ಕೆ ಮಾಡಬಹುದು ಎಂದು ಅವರು ಹೇಳಿದ್ದಾರೆ.
ಬಹಳ ದಿನಗಳಿಂದ, ಬೆಳಗಾವಿಯ ಅಭ್ಯರ್ಥಿಯಾಗಿ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸಬೇಕೆಂದು ಹಲವು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ತಮ್ಮ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸಲು ಜಾರಕಿಹೊಳಿ ವಿರೋಧ ವ್ಯಕ್ತಪಡಿಸಿದ್ದರು, ಆದರೆ ಬದಲಾಗುತ್ತಿರುವ ರಾಜಕೀಯ ಸನ್ನಿವೇಶದ ಹಿನ್ನೆಲೆಯಲ್ಲಿ ಅವರು ತಮ್ಮ ನಿಲುವು ಬದಲಿಸುತ್ತಾರೆಯೇ ಎಂಬುದು ಕಾದು ನೋಡಬೇಕಾಗಿದೆ.