ರಾಜಕೀಯ

ಮಂಡ್ಯ ಲೋಕಸಭೆ ಟಿಕೆಟ್ ಜೆಡಿಎಸ್ ಗೆ ಫಿಕ್ಸ್?: ತೀವ್ರ ಕುತೂಹಲ ಮೂಡಿಸಿದ ದೇವೇಗೌಡರ ಮಹತ್ವದ ಸಭೆ

Sumana Upadhyaya

ಬೆಂಗಳೂರು: ಕಳೆದ 2019ರ ಲೋಕಸಭೆ ಚುನಾವಣೆಯಂತೆ ಈ ಬಾರಿ ಕೂಡ ಮಂಡ್ಯ ಲೋಕಸಭಾ ಚುನಾವಣ ಕಣದಲ್ಲಿ ತೀವ್ರ ಜಿದ್ದಾಜಿದ್ದಿ ಏರ್ಪಡುವ ಸಾಧ್ಯತೆಯಿದೆ. ಅದಕ್ಕೂ ಮೊದಲು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.

ಹಾಲಿ ಸಂಸದೆ ಸುಮಲತಾ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರೂ ಜೆಡಿಎಸ್ ಕ್ಷೇತ್ರವನ್ನು ಬಿಟ್ಟುಕೊಡುವ ಸಾಧ್ಯತೆಯಿಲ್ಲ, ಈ ಬಾರಿಯ ಟಿಕೆಟ್ ಜೆಡಿಎಸ್ ಗೆ ಎಂದು ಕೇಳಿಬರುತ್ತಿರುವ ವದಂತಿಗೆ ಪುಷ್ಠಿ ನೀಡುವಂತೆ ಇಂದು ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆದಿದೆ. 

ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ತಯಾರಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರ ನಿವಾಸದಲ್ಲಿ ಇಂದು ಮಹತ್ವದ ಸಭೆ ನಡೆದಿದೆ ಎಂದು ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಭೆಯಲ್ಲಿ ಅವರು ಕೂಡ ಭಾಗವಹಿಸಿದ್ದು, ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ವಿಸ್ತೃತ ಸಮಾಲೋಚನೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ದೇವೇಗೌಡರು ಮಹತ್ವದ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.

ಸಭೆಯಲ್ಲಿ ಮಾಜಿ ಸಚಿವ ಮತ್ತು ಜೆ.ಡಿ.ಎಸ್ ಪಕ್ಷದ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ. ಟಿ. ದೇವೇಗೌಡ, ಮಾಜಿ ಸಚಿವರಾದ ಸಿ. ಎಸ್. ಪುಟ್ಟರಾಜು, ಡಿ. ಸಿ. ತಮ್ಮಣ್ಣ ಪಾಲ್ಗೊಂಡಿದ್ದರು. ಶಾಸಕ ಎಚ್. ಟಿ. ಮಂಜುನಾಥ್, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಡಾ. ಕೆ. ಅನ್ನದಾನಿ, ಮಾಜಿ ವಿಧಾನ ಪರಿಷತ್ ಸದಸ್ಯ ಕೆ. ಟಿ. ಶ್ರೀಕಂಠೇಗೌಡ, ಮಂಡ್ಯದ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಸಹ ಭಾಗಿಯಾಗಿದ್ದರು.

ಮಂಡ್ಯ ಸೀಟಿನ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ ದೇವೇಗೌಡರು ಜಿಲ್ಲೆಯ ಜೆಡಿಎಸ್ ಶಾಸಕರ ಜೊತೆ ಸಭೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. 

SCROLL FOR NEXT