ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದ ಆಡಳಿತರೂಢ ಕಾಂಗ್ರೆಸ್ ಗೆ 2024 ರ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಈ ಹಿನ್ನಲೆ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನಾದರೂ ಗೆಲ್ಲಲು ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲಾನ್ ಹಾಕಿಕೊಂಡಿದೆ.
ಮುಂಬರುವ ಲೋಕಸಭೆ ಚುನಾವಣೆ ಹಾಗೂ ಭಾರತ್ ನ್ಯಾಯ ಯಾತ್ರೆಗಾಗಿ ಪಕ್ಷದ ಸಿದ್ಧತೆ ಕುರಿತು ಚರ್ಚಿಸಲು ಕಾಂಗ್ರೆಸ್ ಮಹತ್ವದ ಸಭೆ ನಡೆಸುತ್ತಿದೆ. ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯುವ ಈ ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಕರೆದಿರುವ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದು, ರಾಜ್ಯದಲ್ಲಿ ಸಚಿವರು ಹಾಗೂ ಅವರ ಕುಟುಂಬ ಸದಸ್ಯರನ್ನು ಕಣಕ್ಕಿಳಿಸುವ ಪ್ರಮುಖ ವಿಷಯದ ಕುರಿತು ಸುದೀರ್ಘ ಚರ್ಚೆ ನಡೆಯುವ ಸಾಧ್ಯತೆ ಇದೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ. ಆದರೆ ಪಕ್ಷವು ರಾಜ್ಯದಲ್ಲಿ 10-12 ಸ್ಥಾನ ಗೆಲ್ಲು ಸಾಧ್ಯತೆಯಿದೆ ಎಂದು ರಾಜಕೀಯ ತಜ್ಞರು ಅಭಿಮತವಾಗಿದೆ, ಸದ್ಯ ಕಾಂಗ್ರೆಸ್ ಪಕ್ಷ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿದೆ.
ಇದನ್ನೂ ಓದಿ: ಅಂದುಕೊಂಡಷ್ಟು ಸುಲಭವಾಗಿಲ್ಲ ಗೆಲುವು: ಲೋಕಸಭೆ ಚುನಾವಣೆ ಸಿದ್ಧತೆಗಾಗಿ ಜನವರಿ 10 ರಂದು ಕಾಂಗ್ರೆಸ್ ಸಭೆ!
ಲೋಕಸಭೆ ಕ್ಷೇತ್ರಗಳಿಗೆ ವೀಕ್ಷಕರಾಗಿ ನೇಮಕಗೊಂಡ ಸಚಿವರು ಪ್ರತಿ ಕ್ಷೇತ್ರಕ್ಕೆ 3-4 ಹೆಸರುಗಳನ್ನು ಶಾರ್ಟ್ಲಿಸ್ಟ್ ಮಾಡಿ ಶಿವಕುಮಾರ್ಗೆ ವರದಿ ಸಲ್ಲಿಸಿದ್ದಾರೆ. ಕೋಲಾರಕ್ಕೆ ಕೆ.ಎಚ್.ಮುನಿಯಪ್ಪ, ಬಳ್ಳಾರಿಗೆ ಬಿ.ನಾಗೇಂದ್ರ, ಚಾಮರಾಜನಗರಕ್ಕೆ ಡಾ.ಎಚ್.ಸಿ.ಮಹದೇವಪ್ಪ, ಬೀದರ್ ಗೆ ಈಶ್ವರ್ ಖಂಡ್ರೆ ಅವರ ಹೆಸರುಗಳು ಅಂತಿಮ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೋಲಾರದ ಮೇಲೆ ಕಣ್ಣಿಟ್ಟಿರುವ ಮುನಿಯಪ್ಪ ಅವರು ಚಿತ್ರದುರ್ಗಕ್ಕೆ ಸ್ಥಳಾಂತರಗೊಳ್ಳಬಹುದು ಅಥವಾ ಎರಡು ವರ್ಷಗಳ ಕಾಲ ಅಧ್ಯಯನ ರಜೆಯಲ್ಲಿರುವ ಐಆರ್ಎಸ್ ಅಧಿಕಾರಿ ಎಂ.ನರಸಿಂಹರಾಜು ಅವರಿಗೆ ಟಿಕೆಟ್ ನೀಡಬಹುದು ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ಸದಸ್ಯರಾಗಿರುವ ಕಾರಣ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿಲ್ಲ, ಹೀಗಾಗಿ ಪಕ್ಷವು ಅವರ ಅಳಿಯ ರಾಧಾಕೃಷ್ಣ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿವೆ.
ಇದನ್ನೂ ಓದಿ: ಪುತ್ರನಿಗೆ ಬೆಂಗಳೂರು ಉತ್ತರ ಲೋಕಸಭಾ ಟಿಕೆಟ್ ಕೊಡಿಸಲು ಸೋಮಶೇಖರ್ ಕಸರತ್ತು! ಒಂದು ವೇಳೆ ಟಿಕೆಟ್ ಸಿಗದಿದ್ದರೆ...?
ಕಲಬುರಗಿ ಹೊರತಾಗಿ ಚಿತ್ರದುರ್ಗ ಕ್ಷೇತ್ರಕ್ಕೆ ಎಸ್ಸಿ ಸಮುದಾಯದ ಮುಖಂಡರಿಂದ ಭಾರೀ ಬೇಡಿಕೆ ವ್ಯಕ್ತವಾಗಿದ್ದು, ಜನವರಿ 28ರಂದು ಅಲ್ಲಿ ಸಿಎಂ ಸಿದ್ದರಾಮಯ್ಯ ಅಹಿಂದ ಸಮಾವೇಶ ನಡೆಸುತ್ತಿದ್ದಾರೆ.
ಹಳೇ ಮೈಸೂರು ಭಾಗದ ಒಕ್ಕಲಿಗ ಭದ್ರಕೋಟೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪ್ರಬಲ ಶಕ್ತಿಯಾಗಿರುವುದರಿಂದ ಒಕ್ಕಲಿಗ ನಾಯಕರನ್ನು ಕಣಕ್ಕಿಳಿಸಲು ಕಾಂಗ್ರೆಸ್ ವರಿಷ್ಠರು ಚಿಂತನೆ ನಡೆಸಿದ್ದು, ಶಿವಕುಮಾರ್ ಈಗಾಗಲೇ ಯೋಜನೆ ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.
ಬೆಂಗಳೂರು ಉತ್ತರ ಅಥವಾ ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಚಿವ, ಯಶವಂತಪುರ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಅವರ ಹೆಸರನ್ನು ಸೂಚಿಸಲಾಗಿದ್ದು, ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಮೈಸೂರು-ಕೊಡಗು ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಮಾಜಿ ಶಾಸಕ ಡಾ.ಯತೀಂದ್ರ ಅವರ ಹೆಸರು ಸಂಭಾವ್ಯ ಅಭ್ಯರ್ಥಿಯಾಗಿ ಹೊರಹೊಮ್ಮಿದೆ.
ಲೋಕಸಭಾ ಚುನಾವಣೆಯ ಚರ್ಚೆಯ ಹೊರತಾಗಿ, ಮಂಡಳಿ ಮತ್ತು ನಿಗಮಗಳಿಗೆ ನಾಮನಿರ್ದೇಶನದ ಬಗ್ಗೆಯೂ ಹೈಕಮಾಂಡ್ ಚರ್ಚಿಸುವ ಸಾಧ್ಯತೆಯಿದೆ. ಸಿಎಂ ಮತ್ತು ಡಿಸಿಎಂ ಕೇಂದ್ರ ಸಚಿವರನ್ನೂ ಭೇಟಿ ಮಾಡಲಿದ್ದಾರೆ.