ರಾಜಕೀಯ

ಕೊನೆಯ ಉಸಿರು ಇರುವವರೆಗೂ ಕಾವೇರಿ ನೀರಿಗಾಗಿ ಹೋರಾಟ: ಹೆಚ್.ಡಿ. ದೇವೇಗೌಡ

Nagaraja AB

ಬೆಂಗಳೂರು: ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಮತ್ತೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿಯಿಂದ ಮಾತ್ರ ಕಾವೇರಿ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ 90 ವರ್ಷದ ಜೆಡಿಎಸ್ ವರಿಷ್ಠರು, ತಮ್ಮ ಕೊನೆಯ ಉಸಿರು ಇರುವವರೆಗೂ ಕಾವೇರಿ ನೀರಿಗಾಗಿ ಹೋರಾಟ ಮಾಡುವುದಾಗಿ ಪ್ರತಿಜ್ಞೆ ಮಾಡಿದರು. ಕರ್ನಾಟಕ ಎದುರಿಸುತ್ತಿರುವ ಕಾವೇರಿ ನೀರಿನ ಸಮಸ್ಯೆ ಬಗೆಹರಿಸುವ ಶಕ್ತಿ ಮೋದಿಗೆ ಮಾತ್ರ ಇದೆ ಎಂದರು. 

ಕಾವೇರಿ ನೀರು ಬಿಡುವಂತೆ ಪ್ರತಿ ವರ್ಷ ತಮಿಳುನಾಡು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುತ್ತದೆ. ನಮಗೆ ನೀರಿಲ್ಲದಿದ್ದರೂ,ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀರು ಕೊಡಿ ಎಂದು ಹೇಳುತ್ತಾರೆ, ನಮ್ಮ ಅಧಿಕಾರಿಗಳು ಎಷ್ಟೇ ವಾದಿಸಿದರೂ ಪ್ರಯೋಜನವಾಗಿಲ್ಲ. ಕಾವೇರಿ ಜಲಾಶಯಗಳಲ್ಲಿ ಎಷ್ಟು ನೀರಿದೆ ಎಂಬುದನ್ನು ನೋಡಲು ಸಿಡಬ್ಲ್ಯುಎಂಎ ಕರ್ನಾಟಕಕ್ಕೆ ಭೇಟಿ ನೀಡಿಲ್ಲ. ಮತ್ತೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿ ಅವರಿಂದ ಮಾತ್ರ ಕಾವೇರಿ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಹೇಳಿದರು.

"ಕಾವೇರಿ ಸಮಸ್ಯೆಗೆ ಪರಿಹಾರವಿದೆ, ನಮಗೆ ಆಗಿರುವ ಅನ್ಯಾಯದ ಬಗ್ಗೆ ಪ್ರಧಾನಿ ಮೋದಿಯವರಿಗೆ ಅರಿವು ಮೂಡಿಸಲು ನಾವು ಒಟ್ಟಾಗಿ ಹೋರಾಡಬೇಕು. ಇದರಲ್ಲಿ ಯಾವುದೇ ರಾಜಕೀಯ ಬೇಡ, ಈ ಕಾರಣಕ್ಕಾಗಿ ರಾಜಕೀಯ ಪಕ್ಷಗಳು ಒಟ್ಟಾಗಿ ಹೋರಾಡಬೇಕು" ಎಂದು ಎಲ್ಲಾ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು. ಇನ್ನು ಎರಡೂವರೆ ವರ್ಷ ರಾಜ್ಯಸಭೆಯಲ್ಲಿ ಇರುತ್ತೇನೆ, ಕೊನೆಯ ಉಸಿರು ಇರುವವರೆಗೂ ಕಾವೇರಿ ವಿಚಾರವಾಗಿ ಹೋರಾಟ ಮಾಡುತ್ತೇನೆ, ರಾಜ್ಯದ ಜನತೆಗೆ ನ್ಯಾಯ ಸಿಗುವವರೆಗೂ ಸುಮ್ಮನಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಫೆಬ್ರವರಿ 1 ರಂದು ರಾಜ್ಯಸಭೆಯ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋಗಲಿದ್ದು, ಸಂಸತ್ತಿನಲ್ಲಿ ಕಾವೇರಿ ವಿಷಯವನ್ನು ಪ್ರಸ್ತಾಪಿಸಲಾಗುವುದು, ಕಾವೇರಿ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಯವರಿಗೆ ಮನವಿ ಮಾಡುತ್ತೇನೆ ಎಂದು ಗೌಡರು ಹೇಳಿದರು.

SCROLL FOR NEXT