ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಪಟ್ಟಿ ಈಗಾಗಲೇ ತಯಾರಾಗಿದ್ದು ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ಪಟ್ಟಿ ಪ್ರಕಟವಾಗಬಹುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಎಲ್ಲವೂ ಅಂತಿಮವಾಗಿದೆ. ಈ ಸೆಕೆಂಡ್ನಲ್ಲೇ ನಿಗಮ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆ ಆಗಬಹುದು. ನಿನ್ನೆಯೂ ಹೇಳಿದ್ದೆ, ಇವತ್ತೂ ಅದನ್ನೇ ಹೇಳುತ್ತಿದ್ದೇನೆ. ಯಾವುದೇ ಕ್ಷಣದಲ್ಲಾದರೂ ಪಟ್ಟಿ ಬಿಡುಗಡೆ ಆಗಬಹುದು. 36 ಶಾಸಕರು, 39 ಕಾರ್ಯಕರ್ತರ ಹೆಸರನ್ನು ಪ್ರಕಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಸಚಿವರ ನಿರಾಕರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಪಕ್ಷದ ಹೈಕಮಾಂಡ್ ಹೇಳುವುದನ್ನು ನಾನು ಕೇಳಬೇಕು, ಸಚಿವರು ಕೇಳಬೇಕಾಗುತ್ತದೆ. ಪಕ್ಷ ಹೇಳಿದಂತೆ ಎಲ್ಲರೂ ಕೇಳಬೇಕು ಎಂದು ಪರೋಕ್ಷವಾಗಿ ಸಚಿವರು ಕೂಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: ಯತೀಂದ್ರ ಹೇಳಿಕೆ ಒಕ್ಕಲಿಗ ಸಮುದಾಯಕ್ಕೆ ಮಾಡಿದ ವಿದ್ರೋಹ: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಬಿಜೆಪಿ ಮುಖಂಡರು!
ನಾಳೆ ಕಾಂಗ್ರೆಸ್ ಭಾರತ್ ಜೋಡೋ ಭವನದಲ್ಲಿ ಮೀಟಿಂಗ್ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಕ್ಕೆ ಬರ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಆ ಸಂದರ್ಭದಲ್ಲಿ ಅಲ್ಲಿ ಇರಬೇಕಾಗುತ್ತದೆ. ಹೀಗಾಗಿ ಸಂಜೆ 4.30ರ ಬಳಿಕ ಮೀಟಿಂಗ್ ನಡೆಯಲಿದೆ. ಲೋಕಸಭಾ ಚುನಾವಣೆ ಬಗ್ಗೆ ಮೊದಲ ಮೀಟಿಂಗ್ ಇದು. ಈಗಾಗಲೇ ವೀಕ್ಷಕರು ಲಿಸ್ಟ್ ಕೊಟ್ಟಿದ್ದಾರೆ. ಅದರ ಬಗ್ಗೆ ಚರ್ಚೆ ಮಾಡುತ್ತೇವೆ? ಎಂದರು.