ರಾಜಕೀಯ

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಕರ ಜೊತೆ ಬಿಜೆಪಿಗರ ನಂಟು: ಪ್ರಿಯಾಂಕ್ ಖರ್ಗೆ ಆರೋಪ

Nagaraja AB

ಬೆಂಗಳೂರು: ಹೈದ್ರಾಬಾದ್ ನಲ್ಲಿ ಪತ್ತೆಯಾದ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಈ ಪ್ರಕರಣದ ಎಫ್ಐಆರ್ ಪ್ರಕಾರ ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬ ಇಬ್ಬರು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾಗುತ್ತದೆ. ಇವರಿಬ್ಬರೂ ಪೊಲೀಸರ ವಶದಲ್ಲಿದ್ದು,  ಬಿಜೆಪಿಯ ಸಕ್ರಿಯ ಕಾರ್ಯಕರ್ತರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ಇವರು ಯೋಗಿ ಆದಿತ್ಯನಾಥ್ ತೆಲಂಗಾಣ ಶಾಸಕ ರಾಜಾ ಸಿಂಗ್ ಅವರ ಒಡನಾಡಿಗಳಿದ್ದಾರೆ. ಇಷ್ಟೇಲ್ಲಾ ಒಡನಾಟ ಇಟ್ಟುಕೊಂಡಿರುವವರ ಜತೆ ರಾಜ್ಯ ಬಿಜೆಪಿ ನಾಯಕರು ಸಂಪರ್ಕ ಹೊಂದಿರುವುದಿಲ್ಲವೇ? ಎಂದು ಪ್ರಶ್ನಿಸಿದರು. 

ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್, ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ಪುತ್ರ ವಿಠಲ್ ನಾಯಕ್ ಜತೆ ಒಡನಾಟ ಇಟ್ಟುಕೊಂಡಿದ್ದಾರೆ. ನಮ್ಮ ಸರ್ಕಾರ ಈ ವಿಚಾರದಲ್ಲಿ ಎಚ್ಛೆತ್ತು ಎಫ್ ಐಆರ್ ದಾಖಲಿಸಲಾಗಿದೆ. ನಮ್ಮ ಅಧಿಕಾರಿಗಳು ಹೈದರಾಬಾದ್ ನಲ್ಲಿದ್ದು, ತೆಲಂಗಾಣ ಉಪಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ತನಿಖೆಗೆ ಸಹಕಾರ ನೀಡುವಂತೆ ಕೋರಿದ್ದೇವೆ ಎಂದು ತಿಳಿಸಿದರು. 

ಬಿಜೆಪಿ ಶಾಸಕರಾಗಿದ್ದ ಮಾಡಾಲ್ ವಿರುಪಾಕ್ಷಪ್ಪ ಅವರ ಮನೆಯಲ್ಲಿ 7 ಕೋಟಿ ಹಣ ಸಿಕ್ಕಿತ್ತು. ಅವರು ಇದೇ ಸಂಸ್ಥೆಯ ಜವಾಬ್ದಾರಿ ಹೊತ್ತಿದ್ದರು. ಆ ಪ್ರಕರಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದ್ದರೂ ಅವರ ಪುತ್ರನ ಹೆಸರು ಹಾಗೇ ಇದೆ. ಈ ಅಕ್ರಮದಲ್ಲೂ ಅವರ ಕೈವಾಡ ಇಲ್ಲವೇ? ಈ ಬಗ್ಗೆ ತನಿಖೆಯಾಗಬೇಕಲ್ಲವೇ? ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಉತ್ತರ ನೀಡಬೇಕು. ಇವರನ್ನು ಕೂಡ ರಾಮಭಕ್ತರು ಎಂದು ಹೇಳಿ ಬೀದಿಗಿಳಿದು ಹೋರಾಟ ಮಾಡುತ್ತೀರಾ? ಅಥವಾ ಇವರನ್ನು ಪಕ್ಷದಿಂದ ವಜಾ ಮಾಡಿ ರಾಜ್ಯದ ಜನರಿಗೆ ಉತ್ತರ ನೀಡುತ್ತೀರಾ? ಎಂದು ಕೇಳಿದರು. 

SCROLL FOR NEXT