ರಾಜಕೀಯ

ಲೋಕಸಭೆ ಚುನಾವಣೆ ಬಿಜೆಪಿಗೆ ಅಗ್ನಿಪರೀಕ್ಷೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

Manjula VN

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಬಿಜೆಪಿಗೆ ಅಗ್ನಿಪರೀಕ್ಷೆಯಾಗಿದ್ದು, ರಾಜ್ಯ ಬಿಜೆಪಿಗೂ ಮಹತ್ವದ ತಿರುವು ನೀಡಲಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಬಿಜೆಪಿ ಕಾರ್ಯಾಕಾರಿಣಿ ಸಭೆಯಲ್ಲಿ ಮಾತನಾಡಿರುವ ಅವರು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮುಂಬರುವ ಲೋಕಸಭಾ ಚುನಾವಣೆ ನಮಗೆಲ್ಲರಿಗೂ ಅಗ್ನಿ ಪರೀಕ್ಷೆಯಾಗಿದೆ. ಜನರ ದಿಕ್ಕು ತಪ್ಪಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಈಗಾಗಲೇ ಒಳಜಗಳ ಎದುರಿಸುತ್ತಿದ್ದು, ವ್ಯಾಪಕ ಭ್ರಷ್ಟಾಚಾರದಿಂದ ಆಡಳಿತ ಕುಸಿದಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಹೀಗಿದ್ದರೂ ಕಾಂಗ್ರೆಸ್ ತಪ್ಪು ಮಾರ್ಗಗಳನ್ನು ಅನುಸರಿಸಿ ಮತ ಗಳಿಸಲು ತಂತ್ರಗಳ ರೂಪಿಸುತ್ತಿದೆ. ವಾಸ್ತವದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಸವಾಲು ನಮ್ಮ ಮುಂದಿದೆ ಎಂದು ಹೇಳಿದರು.

ಜನರು ಈ ಸರ್ಕಾರದಿಂದ ಬೇಸತ್ತಿದ್ದಾರೆ. ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಬರಗಾಲದಲ್ಲಿ ರೈತರ ಕಣ್ಣೀರು ಒರೆಸಲು ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲ, ಮಹಿಳೆಯರ ಮಾನ ರಕ್ಷಣೆ ಮಾಡಿಲ್ಲ. ಅರಾಜಕತೆ ವಿಸ್ತರಿಸುತ್ತಿದೆ. ಇದನ್ನು ನೋಡಿಕೊಂಡು ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ. ಜನತೆ ಮತ್ತು ರಾಜ್ಯದ ಪರವಾಗಿ ಹೋರಾಡೋಣ ಎಂದು ಕರೆ ನೀಡಿದರು.

ಬಳಿಕ ರಾಮ ಮಂದಿರ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ದ್ವಂದ್ವ ನಿಲುವಿನ ಕುರಿತಂತೆಯೂ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದರು.

ರಾಜ್ಯ ಕಾಂಗ್ರೆಸ್ ನಾಯಕರು ತಮಗೆ ಆಹ್ವಾನವಿಲ್ಲ ಎಂದು ದೂರಿದ್ದರು. ಆದರೆ ಕೇಂದ್ರ ನಾಯಕರು ಆಹ್ವಾನವನ್ನು ಧಿಕ್ಕರಿಸಿದ್ದಾರೆ" ಎಂದು ಕಿಡಿಕಾರಿದರು.

SCROLL FOR NEXT