ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮತದಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರ ವಜಾಕ್ಕೆ ಆಗ್ರಹಿಸಿ ನಾಳೆ ರಾಜಭವನ ಚಲೋ ಆಯೋಜಿಸಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಬುಧವಾರ ಹೇಳಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಎಲ್ಲ ಶಾಸಕರು ಒಟ್ಟುಗೂಡಿ ಚರ್ಚೆ ಮಾಡಲಿದ್ದಾರೆ. ಬಳಿಕ ರಾಜಭವನಕ್ಕೆ ತೆರಳಿ ಸಚಿವ ನಾಗೇಂದ್ರರನ್ನು ವಜಾ ಮಾಡಲು ರಾಜ್ಯಪಾಲರಿಗೆ ಒತ್ತಾಯ ಮಾಡುವುದಾಗಿ ತಿಳಿಸಿದರು. ಇದೊಂದು ಕಿವುಡು ಸರಕಾರ ಎಂದು ರಾಜ್ಯಪಾರಿಗೆ ತಿಳಿಸಲಿದ್ದೇವೆ. ರಾಜ್ಯಪಾಲರು, ಸಂವಿಧಾನಾತ್ಮಕ ಅಧಿಕಾರ ಬಳಸಿ ಈ ಸಚಿವರನ್ನು ವಜಾ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇವೆ ಎಂದರು.
ಬ್ಯಾಂಕಿನ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಸ್ವಯಂಪ್ರೇರಿತವಾಗಿ ಎಫ್ಐಆರ್ ದಾಖಲಿಸಿದೆ. ಇದು ಸರಕಾರದ ಕಪಾಳಕ್ಕೆ ಹೊಡೆದ ಹಾಗೆ ಆಗಿದೆ ಎಂದು ವಿಶ್ಲೇóಷಿಸಿದರು. ಸಂವೇದನಾಶೀಲ ಸರಕಾರವು ತಾನು ಸಾಚಾ ಇರುವುದಾಗಿ ತೋರಿಸಲು ಸಿಬಿಐಗೆ ತನಿಖೆಯನ್ನು ವಹಿಸಬೇಕಿತ್ತು ಎಂದು ನುಡಿದರು. ಅದರಲ್ಲಿ ನಿರ್ಲಜ್ಜತೆ ತೋರಿದ ಪರಿಣಾಮವಾಗಿ ಇವತ್ತು ಸಿಬಿಐ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತಾಗಿದೆ ಎಂದರು. ಈ ಸರಕಾರ ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ಮುಳುಗಿದೆ; ಭ್ರಷ್ಟರ ರಕ್ಷಣೆಗೆ ಯಾವ ರೀತಿ ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತದೆ ಎಂಬುದಕ್ಕೆ ಇದು ಕನ್ನಡಿ ಹಿಡಿದಂತಿದೆ ಎಂದು ವಿವರಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಚುನಾವಣೆಗಾಗಿ ದುರ್ಬಳಕೆ ಮಾಡಿಕೊಂಡಿರುವುದು ಜಗಜ್ಜಾಹೀರಾಗಿದೆ. ಆದರೂ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ನಾಗೇಂದ್ರರ ರಾಜೀನಾಮೆ ಪಡೆಯುವ ವಿಚಾರದಲ್ಲಿ ಇಲ್ಲಿನವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದನ್ನು ಬಿಜೆಪಿ ಉಗ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು. ಬಿಜೆಪಿ ಈ ಸರಕಾರಕ್ಕೆ ಇದೇ 6ರವರೆಗೆ ಗಡುವು ನೀಡಿತ್ತು ಎಂದರು.
ಪರಿಶಿಷ್ಟ ವರ್ಗದವರಿಗೆ ಮೀಸಲಿಟ್ಟ 187 ಕೋಟಿ ದುರ್ಬಳಕೆ ಆಗಿದೆ. 187 ಕೋಟಿ ವಾಪಸ್ ತಂದು ಆ ವರ್ಗದವರಿಗೆ ಮುಟ್ಟಿಸುವವರೆಗೂ ಬಿಜೆಪಿ ತನ್ನ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.