ಬೆಳಗಾವಿ: ಲೋಕಸಭೆ ಚುನಾವಣೆ ಫಲಿತಾಂಶ ವಿಚಾರವಾಗಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಅಥಣಿಯಲ್ಲಿ ಬಿಜೆಪಿಗೆ ಹೆಚ್ಚು ಮತ ಬಂದಿದ್ದಕ್ಕೆ ವಾಗ್ದಾಳಿ ನಡೆಸಿದ್ದರು.
ಸತೀಶ್ ಜಾರಕಿಹೊಳಿ ಆರೋಪಕ್ಕೆ ಇದೀಗ ಮೌನ ಮುರಿದಿರುವ ಶಾಸಕ ಲಕ್ಷ್ಮಣ ಸವದಿ, ಅಥಣಿ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಬರುವುದಕ್ಕೆ ಹಲವು ಕಾರಣಗಳಿವೆ ಎಂದು ಹೇಳಿದ್ದಾರೆ. ಅಥಣಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಹಿನ್ನಡೆ ಆಗಲು ಸತೀಶ ಜಾರಕಿಹೊಳಿ ಕೆಲ ನಿರ್ಧಾರಗಳೇ ಕಾರಣ. ನಿರ್ವಹಣೆಯಲ್ಲಿ ಎಡವಿದ್ದಾರೆ. ಅವುಗಳನ್ನು ಬಹಿರಂಗವಾಗಿ ಹೇಳಲು ಆಗದು. ಪಕ್ಷದ ವೇದಿಕೆಯಲ್ಲಿ ಚರ್ಚಿಸುವೆ ಎಂದು ಸವದಿ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೆಲ ಕ್ಷೇತ್ರಗಳಲ್ಲಿನ ಪಾರಂಪರಿಕ ಮತಗಳು ಆಯಾ ಪಕ್ಷ ಅಥವಾ ಆಯಾ ವ್ಯಕ್ತಿಗೆ ಮಾತ್ರ ಬರುತ್ತವೆ. ಇದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದರು.
2018ರ ವಿಧಾನಸಭೆ ಚುನಾವಣೆಯಲ್ಲಿ ನಾನು ಅಥಣಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತೆ. ಆದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಇದೇ ಕ್ಷೇತ್ರದಲ್ಲಿ ಬಿಜೆಪಿಗೆ 36 ಸಾವಿರ ಮತಗಳ ಮುನ್ನಡೆ ಸಿಕ್ಕಿತು. ಇದಕ್ಕೆ ಅವರು ಏನು ಹೇಳುತ್ತಾರೆ ಎಂದು ಅವರು ಪ್ರಶ್ನಿಸಿದರು.
2023 ವಿಧಾನಸಭಾ ಚುನಾವಣೆಯಲ್ಲಿ ನಾನು 76 ಸಾವಿರ ಮತಗಳ ಅಂತರದಿಂದ ಗೆದ್ದು, ಕಾಂಗ್ರೆಸ್ ಶಾಸಕನಾದೆ. ಈಗ ಕಾಂಗ್ರೆಸ್ಗೆ 7,000 ಮತಗಳು ಕಡಿಮೆ ಬಂದಿವೆ ಎಂಬುದು ಅವರ ಆರೋಪ. ಎಲ್ಲ ಚರ್ಚೆಗೆ ಪಕ್ಷದ ವೇದಿಕೆಯೇ ಸೂಕ್ತ ಎಂದರು.
ಬಿಜೆಪಿಯಿಂದ ಪಕ್ಷಕ್ಕೆ ಬಂದವರಿಂದ ಲೋಕಸಭೆ ಚುನಾವಣೆಯಲ್ಲಿ ಕೊನೆಯ ವರೆಗೂ ಸಮಸ್ಯೆಯಾಯಿತು ಎಂದು ಸವದಿ ವಿರುದ್ಧ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು.