ವಿ ಸೋಮಣ್ಣ
ವಿ ಸೋಮಣ್ಣ 
ರಾಜಕೀಯ

ತುಮಕೂರು ಲೋಕಸಭಾ ಕ್ಷೇತ್ರದಿಂದ ಎಚ್‌ಡಿ ಕುಮಾರಸ್ವಾಮಿ ಕಣಕ್ಕಿಳಿಸಲು ಚಿಂತನೆ? ಅತಂತ್ರದಲ್ಲಿ ವಿ ಸೋಮಣ್ಣ!

Ramyashree GN

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಅಳಿಯ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಸ್ಥಾನದಿಂದ ಸ್ಪರ್ಧಿಸಲು ಯೋಗ್ಯ ಅಭ್ಯರ್ಥಿ ಎಂದು ಹೇಳಲಾಗಿದ್ದು, ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ತೀರ್ಮಾನಕ್ಕೆ ಬರಲು ಕಷ್ಟವಾಗುತ್ತಿದೆ.

ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಲು ಮಾಜಿ ಸಚಿವ ವಿ ಸೋಮಣ್ಣ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದ್ದರೂ, ಸ್ಥಳೀಯ, ರಾಜ್ಯ ಮತ್ತು ರಾಷ್ಟ್ರೀಯ ನಾಯಕತ್ವವು ಅವರು ಚುನಾವಣೆಯಲ್ಲಿ ಗೆಲ್ಲುತ್ತಾರೆ ಎನ್ನುವ ವಿಶ್ವಾಸವನ್ನು ಹೊಂದಿಲ್ಲ. ಅಲ್ಲದೆ, ಸಮೀಕ್ಷೆಗಳು ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಹೇಳಿವೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಸಂಸದ ಎಸ್‌ಪಿ ಮುದ್ದಹನುಮೇಗೌಡ ಅವರನ್ನು ಒಕ್ಕಲಿಗ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಿಸಿದ್ದು, ಸೋಮಣ್ಣ ಅವರನ್ನು ಬಿಜೆಪಿ ಅಥವಾ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಕುರಿತು ಮೈತ್ರಿಕೂಟದೊಳಗೆ ಮಾತುಕತೆ ನಡೆದಿದೆ. ಆದರೆ, ಬಿಜೆಪಿ ನಾಯಕತ್ವವು ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಮುಂದಾಗಿದೆ ಎಂದು ಜೆಡಿಎಸ್ ಮುಖಂಡರೊಬ್ಬರು ತಿಳಿಸಿದ್ದಾರೆ.

ಲಿಂಗಾಯತ ಸಮುದಾಯಕ್ಕೆ ಸೇರಿರುವ ಸೋಮಣ್ಣ ಅವರು ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದರೆ, ಒಕ್ಕಲಿಗ ಮತಗಳನ್ನು ಪಡೆಯುವ ಸಾಧ್ಯತೆ ಕಡಿಮೆಯಿದೆ. ಅಲ್ಲದೆ, ಒಕ್ಕಲಿಗರ ಆಪ್ತ ಪಕ್ಷವಾದ ಜೆಡಿಎಸ್‌ ಟಿಕೆಟ್‌ನಿಂದ ಸ್ಪರ್ಧಿಸಲು ಅವರನ್ನು ಕೇಳಬಹುದು. ಆದರೆ, ಆಗಲೂ ಸೋಮಣ್ಣ ಅವರು ಒಕ್ಕಲಿಗ ಪ್ರಬಲ ನಾಯಕರಾಗಿರುವ ಮುದ್ದಹನುಮೇಗೌಡರ ವಿರುದ್ಧ ಸ್ಪರ್ಧಿಸುವುದರಿಂದ ಹೆಚ್ಚಿನ ಒಕ್ಕಲಿಗರ ಬೆಂಬಲ ಸಿಗದಿರುವ ಸಾಧ್ಯತೆಯಿದೆ.

ಅದಕ್ಕಾಗಿಯೇ ಜೆಡಿಎಸ್ ಮತ್ತು ಬಿಜೆಪಿ ರಾಷ್ಟ್ರೀಯ ನಾಯಕತ್ವವು ಪ್ರಬಲ ಒಕ್ಕಲಿಗ ನಾಯಕನಾಗಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ನೋಡುತ್ತಿದೆ. ಈ ಮೂಲಕ ಒಕ್ಕಲಿಗ ಮತಗಳು ಮೈತ್ರಿ ಅಭ್ಯರ್ಥಿಗೆ ಸುಲಭವಾಗಿ ದಕ್ಕುವ ಸಾಧ್ಯತೆ ಇರುವುದರಿಂದ ಅವರನ್ನೇ ಕಣಕ್ಕಿಳಿಸಲು ಮುಂದಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ. ಕುಮಾರಸ್ವಾಮಿ ತುಮಕೂರಿನಿಂದ ಸ್ಪರ್ಧಿಸುವುದರಿಂದ ಪಕ್ಕದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿಗೆ ನೆರವಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಿದರು.

SCROLL FOR NEXT