ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ಲೋಕಸಭಾ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸ್ವಕ್ಷೇತ್ರದಲ್ಲೇ ಅಂತಿಮಗೊಳ್ಳದ ಅಭ್ಯರ್ಥಿ, ಕಾಂಗ್ರೆಸ್‌ಗೆ ತಲೆನೋವು

Ramyashree GN

ಬೆಂಗಳೂರು: ಕಾಂಗ್ರೆಸ್ ಚುನಾವಣಾ ಸಮಿತಿಯು (ಸಿಇಸಿ) ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದರೂ, ಇನ್ನು ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಅಂತಿಮಗೊಂಡಿಲ್ಲ. ವಿಶೇಷವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರು ಕ್ಷೇತ್ರ ಕಲಬುರಗಿಯಲ್ಲಿಯೂ ಅಭ್ಯರ್ಥಿ ಯಾರೆಂಬುದು ಇನ್ನೂ ಅಂತಿಮಗೊಂಡಿಲ್ಲ.

ಖರ್ಗೆ ಅವರು ದೇಶದಾದ್ಯಂತ ವ್ಯಾಪಕ ಪ್ರಚಾರ ನಡೆಸಬೇಕಿರುವ ಕಾರಣ ಲೋಕಸಭೆ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿರುವುದರಿಂದ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ಕಲಬುರಗಿಯಿಂದ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಧಾಕೃಷ್ಣ ಅವರನ್ನು ಕಲಬುರಗಿ ಕ್ಷೇತ್ರದಿಂದ ಘೋಷಿಸಿದ್ದರೆ, ಪಕ್ಷದ ಇತರ ಪ್ರಮುಖ ಪರಿಶಿಷ್ಟ ಜಾತಿ ನಾಯಕರು ತಮ್ಮ ನಿಕಟ ಸಂಬಂಧಿಗಳನ್ನು ಕಾಂಗ್ರೆಸ್ ಪಟ್ಟಿಯಲ್ಲಿ ಸೇರಿಸಲು ಮುಂದಾಗುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ತಮ್ಮ ಪುತ್ರಿ ಹಾಗೂ ಕೆಜಿಎಫ್ ಶಾಸಕಿ ರೂಪಕಲಾ ಎಂ ಅವರಿಗೆ ಕೋಲಾರದಿಂದ, ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ಪುತ್ರ ವಿನಯ್‌ಗೆ ಚಿತ್ರದುರ್ಗದಿಂದ ಹಾಗೂ ಸಮಾಜ ಕಲ್ಯಾಣ ಸಚಿವ ಡಾ. ಎಚ್‌ಸಿ ಮಹದೇವಪ್ಪ ಅವರಿಗೆ ಚಾಮರಾಜನಗರದಿಂದ ಪಕ್ಷದ ಟಿಕೆಟ್ ನೀಡುವಂತೆ ಕೇಳಿದ್ದಾರೆ.

ಹೀಗಾಗಿ ಕಲಬುರಗಿ ಕ್ಷೇತ್ರದ ಅಭ್ಯರ್ಥಿ ಘೋಷಿಸುವ ನಿರ್ಧಾರವನ್ನು ತಡೆಹಿಡಿಯಲು ಹೈಕಮಾಂಡ್ ನಿರ್ಧರಿಸಿದೆ. ಆದರೆ, ಲೋಕಸಭೆ ಚುನಾವಣೆಗೆ ಸಿದ್ಧತೆಯ ಭಾಗವಾಗಿ ರಾಧಾಕೃಷ್ಣ ಅವರು ಈಗಾಗಲೇ ಕಲಬುರಗಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಲು ಪ್ರಾರಂಭಿಸಿದ್ದಾರೆ. ಏಕೆಂದರೆ, ಚುನಾವಣಾ ಆಯೋಗವು ಯಾವುದೇ ಸಮಯದಲ್ಲಿ ಅಧಿಸೂಚನೆಯನ್ನು ಹೊರಡಿಸಲಿರುವ ಸಾಧ್ಯತೆ ಇರುವುದರಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಿತ್ರದುರ್ಗ ಕ್ಷೇತ್ರಕ್ಕೆ ಮಾಜಿ ಸಂಸದ ಬಿಎನ್ ಚಂದ್ರಪ್ಪ ಅವರನ್ನು ಆಯ್ಕೆ ಮಾಡಲಾಗಿತ್ತಾದರೂ, ಘೋಷಣೆಯನ್ನು ತಡೆಹಿಡಿಯಲಾಗಿದೆ. ಶನಿವಾರ ತಿಮ್ಮಾಪುರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಚಂದ್ರಪ್ಪ ಅವರು ಎಸ್‌ಸಿ (ಎಡ) ಸಮುದಾಯದವರಲ್ಲ ಮತ್ತು ಅದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿವೆ ಎಂದು ಆರೋಪಿಸಿದ್ದು, ಚಂದ್ರಪ್ಪ ಅವರಿಗೆ ಟಿಕೆಟ್ ನೀಡದಿರುವಂತೆ ಒತ್ತಾಯಿಸಿದ್ದಾರೆ.

ಇದೇ ವೇಳೆ ಮುನಿಯಪ್ಪ ಅವರ ಪುತ್ರಿ ರೂಪಕಲಾ ಅವರು ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಕೋಲಾರದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಇದನ್ನು ವಿರೋಧಿಸಿದ್ದಾರೆ. ಪಕ್ಷದ ಯಾವುದೇ ಸಮೀಕ್ಷೆಗಳು ಕೋಲಾರದಲ್ಲಿ ಮುನಿಯಪ್ಪ ಅಥವಾ ರೂಪಕಲಾ ಪರವಾಗಿ ಫಲಿತಾಂಶ ಸಿಗಲಿದೆ ಎಂದು ಹೇಳಿಲ್ಲ. ಅವರ ಕುಟುಂಬದ ಯಾವುದೇ ಸದಸ್ಯರಿಗೆ ಟಿಕೆಟ್ ನೀಡಿದರೂ, ಪಕ್ಷ ಸೋಲುತ್ತದೆ ಎಂದು ಮುಖಂಡರೊಬ್ಬರು ಹೇಳಿದ್ದಾರೆ.

ಚಾಮರಾಜನಗರದಲ್ಲಿ ಮಹದೇವಪ್ಪ ಸ್ಪರ್ಧಿಸಲು ಇಚ್ಛಿಸದ ಹಿನ್ನೆಲೆಯಲ್ಲಿ ಪಕ್ಷವು ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದ್ದು, ಇದು ಅಚ್ಚರಿ ಮೂಡಿಸಿದೆ ಎಂದು ಮೂಲಗಳು ತಿಳಿಸಿವೆ. ವಿಜಯಪುರ (ಮೀಸಲು) ಲೋಕಸಭಾ ಸ್ಥಾನಕ್ಕೆ ರಾಜು ಆಲಗೂರ್ ಅವರನ್ನು ಅಭ್ಯರ್ಥಿಯನ್ನಾಗಿ ಪಕ್ಷ ಘೋಷಿಸಿದೆ. ಮಾರ್ಚ್ 14 ರಂದು ಮುಂದಿನ ಪಟ್ಟಿ ಪ್ರಕಟವಾಗವವರೆಗೆ, ಪಕ್ಷದ ಮುಖಂಡರು ತಮ್ಮವರನ್ನು ಅಭ್ಯರ್ಥಿಗಳನ್ನಾಗಿಸುವಂತೆ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಒತ್ತಡ ಹಾಕುವ ಸಾಧ್ಯತೆಯಿದೆ.

SCROLL FOR NEXT