ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ 
ರಾಜಕೀಯ

ಲೋಕ ಸಮರದಲ್ಲಿ ಮುಂದುವರಿದ ವಂಶವಾಹಿ ರಾಜಕಾರಣ: ಚಿಕ್ಕೋಡಿಗೆ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿಯಿಂದ ಮೃಣಾಲ್ ಹೆಬ್ಬಾಳ್ಕರ್!

ಲೋಕೋಪಯೋಗಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿಯಿಂದ ಪಕ್ಷದ ಒಮ್ಮತದ ಅಭ್ಯರ್ಥಿಯಾಗು ಸಾಧ್ಯತೆಯಿದೆ.

ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಟಿಕೆಟ್‌ಗಾಗಿ ಹಲವು ಕಾಂಗ್ರೆಸ್ ಮುಖಂಡರು ಮತ್ತು ಹಲವು ಹೊಸಬರು ನಡೆಸುತ್ತಿದ್ದ ಲಾಬಿಗೆ ಅಂತ್ಯ ಹಾಡಲಾಗಿದೆ.

ಲೋಕೋಪಯೋಗಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿಯಿಂದ ಪಕ್ಷದ ಒಮ್ಮತದ ಅಭ್ಯರ್ಥಿಯಾಗಲಿದ್ದು, ಬೆಳಗಾವಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸ್ಪರ್ಧಿಸುವ ಸಾಧ್ಯತೆಯಿದೆ.

ಕಳೆದುಹೋಗಿರುವ ಭದ್ರಕೋಟೆಯನ್ನು ಮರಳಿ ಪಡೆಯಲು ಕಾಂಗ್ರೆಸ್ ಮುಂದಾಗಿದ್ದು, ಅಂತಿಮವಾಗಿ ಎರಡು ಪ್ರಭಾವಿ ರಾಜಕೀಯ ಕುಟುಂಬಗಳಾದ ಜಾರಕಿಹೊಳಿ ಮತ್ತು ಹೆಬ್ಬಾಳ್ಕರ್ ಅವರನ್ನು ಅವಲಂಬಿಸಿದೆ. ಬೆಳಗಾವಿ ಮತ್ತು ಚಿಕ್ಕೋಡಿಯಿಂದ ಮೃಣಾಲ್ ಮತ್ತು ಪ್ರಿಯಾಂಕಾ ಅಭ್ಯರ್ಥಿಗಳಾಗಬೇಕು ಎಂದು ಸ್ಥಳೀಯ ನಾಯಕರು ಒತ್ತಾಯಿಸುತ್ತಿದ್ದಾರೆ. ಆದರೆ, ಈ ಕುರಿತು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್‌ನ ಪ್ರಮುಖ ನಾಯಕರು ಹಾಗೂ ಪಕ್ಷದ ಹೈಕಮಾಂಡ್‌ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಹೆಬ್ಬಾಳ್ಕರ್‌ ಹೇಳಿದ್ದಾರೆ.

ಎರಡೂ ಸ್ಥಾನಗಳಿಂದ ಎರಡು ಕುಟುಂಬದ ಸದಸ್ಯರನ್ನು ಬಿಟ್ಟು ಬೇರೆ ಯಾರನ್ನೂ ಕಾಂಗ್ರೆಸ್ ಕಣಕ್ಕಿಳಿಸುವುದಿಲ್ಲ ಎಂಬ ಊಹಾಪೋಹಗಳು ಹರಿದಾಡುತ್ತಿದ್ದು, ಹೆಬ್ಬಾಳ್ಕರ್ ಅವರ ಹೊಸ ಹೇಳಿಕೆ ಅದಕ್ಕೆ ಪುಷ್ಟಿ ನೀಡಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವ ಸಾಮರ್ಥ್ಯವಿರುವ ನಾಯಕರ ಅನುಪಸ್ಥಿತಿಯಿಂದಾಗಿ ಈ ಎರಡು ಕುಟುಂಬಗಳ ಸದಸ್ಯರನ್ನೇ ಕಣಕ್ಕಿಳಿಸುವುದು ಕಾಂಗ್ರೆಸ್ ಪಕ್ಷಕ್ಕೆ ಅನಿವಾರ್ಯವಾಗಿದೆ. ಮೃಣಾಲ್ ಮತ್ತು ಪ್ರಿಯಾಂಕಾ ಅವರನ್ನು ಅಭ್ಯರ್ಥಿಗಳಾಗಿ ಕಣಕ್ಕಿಳಿಸುವುದು ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಿದಷ್ಟೇ ಒಳ್ಳೆಯದು ಎಂದು ಕಾಂಗ್ರೆಸ್ ನ ಮತ್ತೊಬ್ಬ ಹಿರಿಯ ನಾಯಕ ಹೇಳಿದ್ದಾರೆ.

ಇತ್ತೀಚೆಗಷ್ಟೇ ಬೆಳಗಾವಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಸತೀಶ್ ಜಾರಕಿಹೊಳಿ ಪುತ್ರಿಯನ್ನು ಚಿಕ್ಕೋಡಿಯಿಂದ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬ ಚರ್ಚೆ ನಡೆದಿದ್ದು ಎಂದು ಸತೀಶ್ ಸಮ್ಮತಿಸಿದ್ದಾರೆ ಎಂದು ತಿಳಿದು ಬಂದಿದೆ.

ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ ನಂತರವಷ್ಟೇ ಪ್ರಿಯಾಂಕಾ ಅವರನ್ನು ಚಿಕ್ಕೋಡಿಯಲ್ಲಿ ಅಭ್ಯರ್ಥಿಯನ್ನಾಗಿ ಮಾಡಬೇಕೇ ಎಂಬ ಬಗ್ಗೆ ನನ್ನ ಅಭಿಪ್ರಾಯ ತಿಳಿಸುವುದಾಗಿ ಸಿಎಂ ಮತ್ತು ಡಿಸಿಎಂಗೆ ತಿಳಿಸಿದ್ದೇನೆ. ಆದರೆ ಅದಕ್ಕೂ ಮೊದಲು, ಸಂಭವನೀಯ ಅಭ್ಯರ್ಥಿ (ಪ್ರಿಯಾಂಕಾ) ಚುನಾವಣೆಗೆ ಸ್ಪರ್ಧಿಸಲು ಸಿದ್ಧರಿದ್ದಾರೆಯೇ ಎಂದು ನೋಡಬೇಕು. ಆಕೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದರೆ ಕಠಿಣವಾಗುತ್ತದೆ ಎಂದು ಸತೀಶ್ ಹೇಳಿದರು.

ಕಾಂಗ್ರೆಸ್ ರಾಜ್ಯ ನಾಯಕತ್ವವು ಈಗಾಗಲೇ ಮೃಣಾಲ್ ಮತ್ತು ಪ್ರಿಯಾಂಕಾ ಅವರನ್ನು ಎರಡು ಸ್ಥಾನಗಳಿಗೆ ಅಭ್ಯರ್ಥಿಗಳಾಗಿ ಅಂತಿಮಗೊಳಿಸಿದೆ ಮತ್ತು ಈಗ ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡುವವರೆಗೆ ಕಾಯುತ್ತಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಮತ್ತೊಂದೆಡೆ, ಪಕ್ಷದ ಟಿಕೆಟ್‌ಗಾಗಿ ಹಲವು ಆಕಾಂಕ್ಷಿಗಳ ನಿರೀಕ್ಷೆ ಬಹುತೇಕ ಅಂತ್ಯಗೊಂಡಿದೆ.

ಬೆಳಗಾವಿಯಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ವಕೀಲ ಮೋಹನ್ ಕಾತರಕಿ, ಡಾ ಗಿರೀಶ್ ಸೋನವಾಲ್ಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ ಮತ್ತು ಯುವ ಕಾಂಗ್ರೆಸ್ ಮುಖಂಡ ಕಿರಣ ಸಾಧುನವರ್ ಸೇರಿದ್ದಾರೆ. ಚಿಕ್ಕೋಡಿಯಿಂದ ಲಕ್ಷ್ಮಣರಾವ್ ಚಿಂಗಳೆ ಮತ್ತು ಪ್ರಕಾಶ ಹುಕ್ಕೇರಿ ಪ್ರಬಲ ಆಕಾಂಕ್ಷಿಗಳಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT