ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ 
ರಾಜಕೀಯ

ಪಕ್ಷದ ವಿರುದ್ಧ ಕೆಎಸ್ ಈಶ್ವರಪ್ಪ ಬಂಡಾಯ: ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಘೋಷಣೆ!

Vishwanath S

ಶಿವಮೊಗ್ಗ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಇದೀಗ ಲೋಕಸಭೆ ಚುನಾವಣೆಯಲ್ಲೂ ತಮ್ಮ ಪುತ್ರನಿಗೆ ಟಿಕೆಟ್ ಸಿಗದ್ದಿದ್ದಕ್ಕೆ ಬಿಜೆಪಿ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ಅಲ್ಲದೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.

ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಪುತ್ರನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಈಶ್ವರಪ್ಪ ಇದೀಗ ಅಖಾಡಕ್ಕಿಳಿದಿದ್ದಾರೆ. ಇಂದು ಬೆಂಬಲಿಗರು, ಹಿತೈಷಿಗಳು, ಅಭಿಮಾನಿಗಳೊಂದಿಗೆ ನಗರದ ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ ಸಭೆ ನಡೆಸಿದ ಈಶ್ವರಪ್ಪ, ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದೇನೆ ಹೊರತು ಮೋದಿ ಹಾಗೂ ಬಿಜೆಪಿ ವಿರುದ್ಧ ಹೋಗುತ್ತಿಲ್ಲ. ಬಿಜೆಪಿ ಪಕ್ಷ ಒಂದು ಕುಟುಂಬದ ಕೈಯಲ್ಲಿ ಸಿಲುಕಿದೆ. ಅದನ್ನು ತಪ್ಪಿಸಲು ಸ್ಪರ್ಧೆಗೆ ಮುಂದಾಗಿದ್ದೇನೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು ಪ್ರಾಣ ಹೋದರೂ ನಾನು ನರೇಂದ್ರ ಮೋದಿ ವಿರುದ್ಧ ಹೋಗುವುದಿಲ್ಲ. ಮೋದಿ ಪ್ರಧಾನಿ ಆಗುವ ಮೊದಲು ಎಲ್ಲಾ ದೇಶಗಳು ಪಾಕಿಸ್ತಾನ ಜೊತೆಗಿದ್ದವು. ಆದರೆ, ಮೋದಿ ಪ್ರಧಾನಿ ಆದ ನಂತರ ಜಗತ್ತಿನ ಬಲಿಷ್ಠ ದೇಶಗಳು ಭಾರತದ ಜೊತೆಗಿವೆ. ಮುಸ್ಲಿಂ ರಾಷ್ಟ್ರಗಳು ಕೂಡ ಮೋದಿಗೆ ರತ್ನಗಂಬಳಿ ಹಾಕಿ ನಮ್ಮ ದೇಶಕ್ಕೆ ಬನ್ನಿ ಎಂದು ಮೋದಿಗೆ ದುಂಬಾಲು ಬೀಳುತ್ತಿವೆ ಎಂದರು.

ಈ ನಿರ್ಧಾರ ಬಿಜೆಪಿ ವಿರುದ್ಧವಾಗಿದ್ದು, ಒಂದೇ ಕುಟುಂಬದವರ ಕಪಿಮುಷ್ಠಿಗೆ ಒಳಗಾಗಬಾರದು. ನಾನು ಬಿಜೆಪಿಯ ಸಿದ್ಧಾಂತಕ್ಕಾಗಿ ಹೋರಾಡುತ್ತಿದ್ದೇನೆಯೇ ಹೊರತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಲ್ಲ, ಮೋದಿಯವರ ಕಟ್ಟಾ ಅನುಯಾಯಿಯಾಗಿರುವ ನಾನು ಪಕ್ಷದಲ್ಲೇ ಇರುತ್ತೇನೆ ಎಂದು ಹೇಳಿದರು.

SCROLL FOR NEXT