ಎನ್ ಚೆಲುವರಾಯಸ್ವಾಮಿ 
ರಾಜಕೀಯ

ಮಂಡ್ಯ ಲೋಕಸಭೆ: ಬಿಜೆಪಿ ನಾಯಕ ಕೆಸಿ ನಾರಾಯಣ ಗೌಡ ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ; ಎನ್ ಚೆಲುವರಾಯಸ್ವಾಮಿ

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ವಿಚಾರವಾಗಿ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿರುವ ಕುರಿತಾದ ವರದಿಗಳ ನಡುವೆ, ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಸೋಮವಾರ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಕೆಸಿ ನಾರಾಯಣ ಗೌಡ ಅವರು ಕಾಂಗ್ರೆಸ್‌ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ವಿಚಾರವಾಗಿ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿರುವ ಕುರಿತಾದ ವರದಿಗಳ ನಡುವೆ, ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಸೋಮವಾರ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಕೆಸಿ ನಾರಾಯಣ ಗೌಡ ಅವರು ಕಾಂಗ್ರೆಸ್‌ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಜೊತೆಗಿನ ಸೀಟು ಹಂಚಿಕೆ ಒಪ್ಪಂದದ ಭಾಗವಾಗಿ ಜೆಡಿಎಸ್‌ಗೆ ಕೋಲಾರ, ಹಾಸನ ಮತ್ತು ಮಂಡ್ಯ ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆದ್ದಿದ್ದರು.

'ಹೌದು, ನಾವು ನಾರಾಯಣ ಗೌಡ ಅವರೊಂದಿಗೆ ಮಾತನಾಡಿದ್ದೇವೆ. ಅವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಜೆಡಿಎಸ್‍ನ ಮಾಜಿ ಶಾಸಕರು ಹಾಗೂ ಕೆಆರ್ ಪೇಟೆಯ ದಿವಂಗತ ಕೃಷ್ಣ ಅವರ ಬೆಂಬಲಿಗರು ಕಾರಣಾಂತರಗಳಿಂದ ನಾರಾಯಣ ಗೌಡ ಅವರೊಂದಿಗೆ ಪಕ್ಷ ಬಿಟ್ಟಿದ್ದರು. ಇದೀಗ ಅವರು ಕಾಂಗ್ರೆಸ್ ಸೇರುವುದು ಖಚಿತವಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಷರತ್ತುಗಳಿಲ್ಲದೆ ಮತ್ತು ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಅವರು ಕಾಂಗ್ರೆಸ್‌ಗೆ ಬರಬಹುದು ಮತ್ತು ಸೇರ್ಪಡೆಯಾದ ನಂತರ ಪಕ್ಷವು ಯಾರಿಗೆ ಯಾವ ಜವಾಬ್ದಾರಿಯನ್ನು ನೀಡಬೇಕೆಂದು ನಿರ್ಧರಿಸುತ್ತದೆ ಎಂದರು.

ಯಾವುದೇ ಷರತ್ತುಗಳ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಮೊದಲ ಸುತ್ತಿನ ಚರ್ಚೆಗಳು ನಡೆದಿವೆ. ಅವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಈ ಚರ್ಚೆಗಳು ಪಕ್ಷ ಸೇರುವ ದಿನಾಂಕವನ್ನು ನಿರ್ಧರಿಸುವ ಹಂತವನ್ನು ತಲುಪಿಲ್ಲ ಎಂದು ಅವರು ಹೇಳಿದರು.

ನಾರಾಯಣ ಗೌಡ ಅವರು ಈ ಹಿಂದೆ ಜೆಡಿಎಸ್‌ನಲ್ಲಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಹೊರಬಂದು ಬಿಜೆಪಿ ಸೇರಿದ 17 ಶಾಸಕರಲ್ಲಿ ಒಬ್ಬರಾಗಿದ್ದಾರೆ. ಈ ಪಕ್ಷಾಂತರವು 2019ರ ಜುಲೈನಲ್ಲಿ ಆಗಿನ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಯಿತು. ನಂತರ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದು ಹಿಂದಿನ ಕೇಸರಿ ಪಕ್ಷದ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಸುಮಲತಾ ಅವರು ಹಿಂದಿನ ಚುನಾವಣೆಯಲ್ಲಿ ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದರು. ಕ್ಷೇತ್ರದಿಂದ ಮರು ಆಯ್ಕೆ ಬಯಸಿದ್ದ ಅವರು ಈ ಬಾರಿ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದರು.

ನಾರಾಯಣ ಗೌಡ, ಕೆಲವು ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಸುಮಲತಾ ಅವರನ್ನು ಕಣಕ್ಕಿಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಬಿಜೆಪಿಯು ಜೆಡಿಎಸ್‌ಗೆ ಕ್ಷೇತ್ರವನ್ನು ಬಿಟ್ಟುಕೊಡಬಾರದು ಎಂದು ಬಹಿರಂಗವಾಗಿ ಒತ್ತಾಯಿಸಿದ್ದಾರೆ.

ಮಂಡ್ಯ ಜಿಲ್ಲೆಯು ಒಕ್ಕಲಿಗ ಭದ್ರಕೋಟೆಯಾಗಿದ್ದು, 2019ರ ವಿಧಾನಸಭಾ ಉಪಚುನಾವಣೆಯಲ್ಲಿ (ಕೃಷ್ಣರಾಜಪೇಟೆಯಲ್ಲಿ) ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ನಾರಾಯಣ ಗೌಡ ಅವರು ಗೆಲುವು ಸಾಧಿಸುವ ಮೂಲಕ ಇತಿಹಾಸ ಬರೆದಿದ್ದರು. ಆದರೆ, 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು.

ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಕರ್ನಾಟಕ ಚುನಾವಣಾ ಉಸ್ತುವಾರಿಯಾದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಶನಿವಾರ ಹೇಳಿದ್ದಾರೆ.

ಜೆಡಿಎಸ್‌ನ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂಬ ಊಹಾಪೋಹಗಳು ಈಗ ಹರಿದಾಡುತ್ತಿವೆ. ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಂಸದ ಸಿಎಸ್ ಪುಟ್ಟರಾಜು ಅವರ ಹೆಸರುಗಳೂ ಹರಿದಾಡುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT