ಅಮಿತ್ ಶಾ - ಎಚ್‌ಡಿ ಕುಮಾರಸ್ವಾಮಿ- ಡಿಕೆ ಶಿವಕುಮಾರ್ 
ರಾಜಕೀಯ

ಬಿಜೆಪಿ-ಜೆಡಿಎಸ್ ಕಾರ್ಯಕರ್ತರಲ್ಲಿ ಒಗ್ಗಟ್ಟಿಲ್ಲದ ಕಾರಣ ಚನ್ನಪಟ್ಟಣದಿಂದ ಅಮಿತ್ ಶಾ ರೋಡ್ ಶೋ: ಡಿಕೆ ಶಿವಕುಮಾರ್

ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಒಗ್ಗಟ್ಟಿಲ್ಲದ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚನ್ನಪಟ್ಟಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರೋಡ್‌ಶೋ ನಡೆಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಒಗ್ಗಟ್ಟಿಲ್ಲದ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚನ್ನಪಟ್ಟಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರೋಡ್‌ಶೋ ನಡೆಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ.

ಶಿವಕುಮಾರ್ ಅವರ ಸಹೋದರ ಮತ್ತು ಹಾಲಿ ಸಂಸದ ಡಿಕೆ ಸುರೇಶ್ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಬಿಜೆಪಿಯು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಅಳಿಯ, ಖ್ಯಾತ ಹೃದ್ರೋಗ ತಜ್ಞ ಡಾ. ಸಿಎನ್ ಮಂಜುನಾಥ್ ಅವರನ್ನು ಕಣಕ್ಕಿಳಿಸಿದೆ.

ಅಮಿತ್ ಶಾ ಅವರು ಏಪ್ರಿಲ್ 2 ರಂದು ಕರ್ನಾಟಕದಲ್ಲಿ ತಮ್ಮ ಪ್ರಚಾರವನ್ನು ಪ್ರಾರಂಭಿಸಲಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ.

'ಅವರು ಚನ್ನಪಟ್ಟಣವನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂದರೆ ಅಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿಲ್ಲ. ಅವರ ಕಾರ್ಯಕರ್ತರು ಅಲ್ಲಿ ಒಗ್ಗಟ್ಟಿನಿಂದಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಜಗಳವಾಡಿದರು. ಅವರು ಅಲ್ಲಿ ಒಗ್ಗಟ್ಟಾಗಿ ಕೆಲಸ ಮಾಡುತ್ತಿಲ್ಲ. ಹೀಗಾಗಿ ಅಮಿತ್ ಶಾ ಅಲ್ಲಿಂದಲೇ ಪ್ರಚಾರ ಆರಂಭಿಸುತ್ತಿದ್ದಾರೆ' ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಜೆಡಿಎಸ್ ಕಾರ್ಯಕರ್ತರು ಗೊಂದಲದಲ್ಲಿದ್ದು, ಡಿಕೆ ಸುರೇಶ್ ಮತ್ತು ಡಿಕೆ ಶಿವಕುಮಾರ್ ಬಗ್ಗೆ ಅಲ್ಲಿನ ಜನರಿಗೆ ಚೆನ್ನಾಗಿ ಗೊತ್ತಿದೆ. ಬಿಜೆಪಿ-ಜೆಡಿಎಸ್ ತಮ್ಮ ಶಕ್ತಿ ಪ್ರದರ್ಶಿಸಲು ಬಯಸಿದ್ದು, ಅಮಿತ್ ಶಾ ಅವರನ್ನು ಅಲ್ಲಿಗೆ ಕರೆತರುವ ಮೂಲಕ ಒಗ್ಗಟ್ಟಾಗಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಇಲ್ಲಿಯವರೆಗೂ ಏಕೆ ಎರಡೂ ಪಕ್ಷಗಳ ಜಂಟಿ ಕಾರ್ಯಕರ್ತರ ಸಭೆ ನಡೆಸಿಲ್ಲ? ಮುಖಂಡರು ಒಗ್ಗೂಡಿದ್ದಾರೆ ಎಂದ ಮಾತ್ರಕ್ಕೆ ಕಾರ್ಯಕರ್ತರು ಒಟ್ಟಾಗಿ ಬರುತ್ತಾರೆಯೇ?' ಎಂದು ಪ್ರಶ್ನಿಸಿದ ಅವರು, ಮತ್ತೊಮ್ಮೆ ತಮ್ಮ ಸಹೋದರ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.

2019ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದ ವೇಳೆ ಕಾಂಗ್ರೆಸ್‌ನ ಏಕೈಕ ಅಭ್ಯರ್ಥಿ ಡಿಕೆ ಸುರೇಶ್‌ ಮಾತ್ರ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.

ರಾಮನಗರ ಮತ್ತು ಮಂಡ್ಯ ಜಿಲ್ಲೆಗಳ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ ವಿಚಿತ್ರ ಎನಿಸುತ್ತಿದೆ ಎಂದು ಹೇಳಿದ ಶಿವಕುಮಾರ್, 'ಈ ಹಿಂದೆ ಪರಸ್ಪರ ವಾಗ್ದಾಳಿ ನಡೆಸಿದ್ದ ಬಿಜೆಪಿ-ಜೆಡಿಎಸ್ ನಾಯಕರು ಈಗ ಒಂದಾಗಿದ್ದಾರೆ. ಕುಮಾರಸ್ವಾಮಿ ಈಗ ಎಲ್ಲರ (ಬಿಜೆಪಿ ನಾಯಕರು) ಮನೆ ಬಾಗಿಲಿಗೆ ಹೋಗುತ್ತಿದ್ದಾರೆ. ಅವರಲ್ಲಿ ತುಂಬಾ ಬದಲಾವಣೆಯಾಗಿದೆ. ಅವರ ಸರ್ಕಾರದ (ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ) ಪತನಕ್ಕೆ ಅಡಿಪಾಯ ಹಾಕಿದ ಯಡಿಯೂರಪ್ಪ, ಅಶೋಕ, ಅಶ್ವತ್ಥ್ ನಾರಾಯಣ ಅವರನ್ನು ಈಗ ಅಪ್ಪಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಜನರು ನಿರ್ಧರಿಸಬೇಕು' ಎಂದು ಅವರು ಹೇಳಿದರು.

ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದರು, ರಾಜಕೀಯವಾಗಿ ವಿಷವನ್ನಿಟ್ಟರು ಎಂಬ ಎಚ್‌ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ಅದನ್ನು ಜನರ ಮುಂದೆ ಹೇಳಲಿ. ಕೇವಲ 38 ಶಾಸಕರನ್ನು ಹೊಂದಿದ್ದ ಅವರನ್ನು (2018ರಲ್ಲಿ) ಕಾಂಗ್ರೆಸ್‌ ಪಕ್ಷವು ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ವಿಷವೇ? ಮಳೆ, ಬಿಸಿಲೆನ್ನದೆ ನಾನು ಅವರ ಸರ್ಕಾರದ ಸ್ಥಿರತೆಗಾಗಿ ಹೋರಾಡಿದ್ದು ವಿಷವೇ? ಆತ್ಮಸಾಕ್ಷಿಯೇ ನಾನು ನಂಬಿರುವ ಶಕ್ತಿ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ನಾನು ಏನು ಮಾಡಿದ್ದೇನೆ ಎಂಬ ಅರಿವಿದೆ. ಅವರು (ಕುಮಾರಸ್ವಾಮಿ) ಅದನ್ನು ನೆನಪಿಸಿಕೊಳ್ಳದಿದ್ದರೆ ಪರವಾಗಿಲ್ಲ ಎಂದರು.

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಖಂಡನೆ

ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಬಗ್ಗೆ ಪಕ್ಷದ ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಹೇಳಿಕೆಯನ್ನು ಖಂಡಿಸಿದ ಶಿವಕುಮಾರ್, ಮಹಿಳೆ ಕುಟುಂಬದ ಕಣ್ಣು ಎಂಬ ಸತ್ಯವನ್ನು ನಾನು ಮತ್ತು ಕಾಂಗ್ರೆಸ್ ನಂಬಿದೆ. ಅವರು (ಶಿವಶಂಕರಪ್ಪ) ವಯಸ್ಸಾದವರು ಮತ್ತು ಅವರು ಯಾವುದೋ ಲೆಕ್ಕಾಚಾರದಿಂದ ಮಾತನಾಡಿರಬಹುದು. ಆದರೆ, ನಾವು ಮಹಿಳೆಯರ ಪರವಾಗಿದ್ದೇವೆ. ನಾವು ಆರು ಮಹಿಳೆಯರಿಗೆ ಟಿಕೆಟ್ ನೀಡಿದ್ದೇವೆ. ಶಿವಶಂಕರಪ್ಪ ಅವರ ಸೊಸೆ ಸೇರಿದಂತೆ ಆರು ಮಹಿಳೆಯರು ಕರ್ನಾಟಕ ಕಾಂಗ್ರೆಸ್ ಇತಿಹಾಸದಲ್ಲಿ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದು, ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ನಾವು ಕಾರ್ಯಕ್ರಮಗಳನ್ನು ಪರಿಚಯಿಸಿದ್ದೇವೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್‌ಡಿಎ ಗೆಲುವು ಸಾಧಿಸುವುದಿಲ್ಲ ಎಂದು ಹಲವು ಚಾನೆಲ್‌ಗಳ ಸಮೀಕ್ಷೆಗಳು ಹೇಳಿವೆ ಎಂದು ಶಿವಕುಮಾರ್ ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು. ನಾವು ಕಣಕ್ಕಿಳಿಸಿರುವ ಅಭ್ಯರ್ಥಿಗಳು, ನಾವು ನೀಡಿದ ಕಾರ್ಯಕ್ರಮಗಳು ಮತ್ತು ನಾವು ತೋರಿದ ಒಗ್ಗಟ್ಟನ್ನು, ನೀವು ದೇಶದಲ್ಲಿ ಹೊಂದಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಮಾಜಿ ಸಚಿವ ಹಾಗೂ ಚನ್ನಪಟ್ಟಣದ ಬಿಜೆಪಿ ಮುಖಂಡ ಸಿಪಿ ಯೋಗೇಶ್ವರ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಅವರು ತಮ್ಮನ್ನು ಭೇಟಿಯಾಗಲು ಬಂದಿದ್ದರು ಮತ್ತು ಅವರ ಬಗ್ಗೆ ನನಗೆ ಸಹಾನುಭೂತಿ ಇದೆ. ಆದರೆ, ರಾಜಕೀಯಕ್ಕಾಗಿ ಮಗಳು ಮತ್ತು ತಂದೆಯನ್ನು ಬೇರ್ಪಡಿಸಿದ ಕೆಟ್ಟ ಹೆಸರು ನನಗೆ ಬೇಡ. ಕಾಂಗ್ರೆಸ್‌ಗಾಗಿ ಕೆಲಸ ಮಾಡುವ ಇಷ್ಟವಿದ್ದರೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಚನ್ನಪಟ್ಟಣ ಕ್ಷೇತ್ರದಲ್ಲಿ ಯೋಗೇಶ್ವರ್ ಅವರು ತಮ್ಮ ಭವಿಷ್ಯದ ಬಗ್ಗೆ "ಕನಸು" ಕಾಣುತ್ತಿದ್ದಾರೆ. ಆದರೆ, ಅಲ್ಲಿ ಅವರು ಮತ್ತು ಅವರ ಬೆಂಬಲಿಗರಿಗೆ ಏನಾಗಬಹುದು ಎಂಬ ಬಗ್ಗೆ ಅವರಿಗೆ ತಿಳಿದಿಲ್ಲ. ಏಕೆಂದರೆ ಅವರಿಗೆ ಅನುಭವದ ಕೊರತೆಯಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT