ದಾವಣಗೆರೆಯಲ್ಲಿ ಕಾಂಗ್ರೆಸ್ ನಾಯಕರು. 
ರಾಜಕೀಯ

ಲಸಿಕೆ ತಯಾರಿಕಾ ಸಂಸ್ಥೆಯಿಂದಲೂ ಬಿಜೆಪಿ 52 ಕೋಟಿ ರೂಪಾಯಿ ದೇಣಿಗೆ ಪಡೆದಿದೆ: ಪ್ರಿಯಾಂಕಾ ಗಾಂಧಿ ಆರೋಪ

ಕೋವಿಡ್ -19 ಲಸಿಕೆ ವಿಚಾರ ಸಂಬಂಧ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ವಾಗ್ದಾಳಿ ನಡೆಸಿದ್ದು, ಲಸಿಕೆ ತಯಾರಿಕಾ ಸಂಸ್ಥೆಯಿಂದಲೂ ಬಿಜೆಪಿ ರೂ.52 ಕೋಟಿ ದೇಣಿಗೆ ಪಡೆದುಕೊಂಡಿದೆ ಎಂದು ಶನಿವಾರ ಆರೋಪಿಸಿದರು.

ದಾವಣಗೆರೆ: ಕೋವಿಡ್ -19 ಲಸಿಕೆ ವಿಚಾರ ಸಂಬಂಧ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ವಾಗ್ದಾಳಿ ನಡೆಸಿದ್ದು, ಲಸಿಕೆ ತಯಾರಿಕಾ ಸಂಸ್ಥೆಯಿಂದಲೂ ಬಿಜೆಪಿ ರೂ.52 ಕೋಟಿ ದೇಣಿಗೆ ಪಡೆದುಕೊಂಡಿದೆ ಎಂದು ಶನಿವಾರ ಆರೋಪಿಸಿದರು.

ದಾವಣಗೆರೆಯಲ್ಲಿ ಚುನಾವಣಾ ಪ್ರಚಾರದವಲ್ಲಿ ಮಾತನಾಡಿದ ಅವರು, ಬಿಜೆಪಿಗೆ ದೇಣಿಗೆ ನೀಡಿರುವ ಕಂಪನಿಯು ತಯಾರಿಸಿರುವ ಲಸಿಕೆ ಹಾಕಿಸಿಕೊಂಡು ದೇಶದ ಸಾವಿರಾರು ಜನ, ಅದರಲ್ಲೂ ವಿಶೇಷವಾಗಿ ಗಟ್ಟಿಮುಟ್ಟಾದ ಯುವಕರು ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗುತ್ತಿದ್ದಾರೆ’ ಎಂದು ಆರೋಪಿಸಿದರು.

‘ಕೆಲ ತಿಂಗಳ ಹಿಂದೆ ಗುಜರಾತ್‌ನಲ್ಲಿ ತೂಗು ಸೇತುವೆಯೊಂದು ಕುಸಿದು ಅನೇಕರು ಪ್ರಾಣ ಕಳೆದುಕೊಂಡರು. ಆ ಸೇತುವೆ ನಿರ್ಮಿಸಿದ್ದ ಗುತ್ತಿಗೆದಾರನೂ ಬಿಜೆಪಿಗೆ ದೇಣಿಗೆ ನೀಡಿದ್ದ. ಅದೇ ರೀತಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯು ಶ್ರೀಮಂತ ಉದ್ಯಮಿಗಳಿಂದ ರೂ.7,000 ಕೋಟಿ ಮೊತ್ತವನ್ನು ದೇಣಿಗೆ ರೂಪದಲ್ಲಿ ಪಡೆದು ಅತ್ಯಂತ ಶ್ರೀಮಂತ ಪಕ್ಷವೆಂದು ಹೆಸರಾಗಿದೆ’ ಎಂದು ವಾಗ್ದಾಳಿ ನಡೆಸಿದರು.

ವಿಪಕ್ಷಕ್ಕೆ ಸೇರಿರುವ ಅನೇಕ ರಾಜಕಾರಣಿಗಳ ಮನೆಗಳ ಮೇಲೆ ಆದಾಯ ತೆರಿಗೆ, ಇ.ಡಿ. ದಾಳಿ ನಡೆಸಿ, ಅವರನ್ನು ತನ್ನತ್ತ ಸೆಳೆಯುತ್ತಿರುವ ಬಿಜೆಪಿ, ಅವರಿಂದಲೂ ದೇಣಿಗೆ ಸಂಗ್ರಹಿಸಿದೆ. ಇದು ನಿಜಕ್ಕೂ ದೊಡ್ಡ ಭ್ರಷ್ಟಾಚಾರ.

ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳು ದೇಣಿಗೆ ಸಂಗ್ರಹಿಸಲು ಅವಕಾಶ ನೀಡಿದ್ದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ. ಆದರೆ, ಬಾಂಡ್‌ ಮೂಲಕವೇ ದೇಣಿಗೆ ಸಂಗ್ರಹಿಸಿದ ಕಾಂಗ್ರೆಸ್‌ ಪಕ್ಷದ ಬ್ಯಾಂಕ್‌ ಖಾತೆಯನ್ನು ಚುನಾವಣೆಯ ಸಂದರ್ಭವೇ ಸರ್ಕಾರ ಮುಟ್ಟುಗೋಲು ಹಾಕಿಕೊಂಡು ಖರ್ಚು ಮಾಡಲೂ ಹಣವಿಲ್ಲದಂತೆ ಮಾಡಿತು ಎಂದು ದೂರಿದರು.

ದೇಶದ ಅರ್ಥ ವ್ಯವಸ್ಥೆ ಹದಗೆಡಲಿದೆ ಎಂಬ ಸಬೂಬು ಹೇಳುತ್ತ ರೈತರ ಸಾಲಮನ್ನಾ ಮಾಡಲು ಹಿಂದೇಟು ಹಾಕುತ್ತಿರುವ ಪ್ರಧಾನಿ, ತನ್ನ ಉದ್ಯಮಿ ಸ್ನೇಹಿತರ ರೂ. 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಕೇವಲ ರೂ.10,000ದಷ್ಟು ಸಾಲ ಭರಿಸಲಾಗದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಅವರ ಸಾಲವನ್ನು ಮನ್ನಾ ಮಾಡದವರು ದೊಡ್ಡ ಉದ್ಯಮಿಗಳ ಸಾಲ ಮನ್ನಾ ಮಾಡಿದರೆ ಅರ್ಥ ವ್ಯವಸ್ಥೆ ಹಾಳಾಗುವುದಿಲ್ಲವೇ?’ ಎಂದು ಪ್ರಶ್ನಿಸಿದ ಅವರು, ಇದು ಅತ್ಯಂತ ದೊಡ್ಡ ಭ್ರಷ್ಟಾಚಾರ ಎಂದು ಕಿಡಿಕಾರಿದರು.

ಖಾಸಗಿಯವರಿಗೆ ನೆರವಾಗುವ ನಿಟ್ಟಿನಲ್ಲಿ ಸಾರ್ವಜನಿಕ ವಲಯದ ಉದ್ಯಮಗಳನ್ನು ಬಂದ್‌ ಮಾಡಲಾಗಿದೆ. ಹೆದ್ದಾರಿ, ಬಂದರು, ಕಲ್ಲಿದ್ದಲು, ವಿದ್ಯುತ್‌, ವಿಮಾನ ನಿಲ್ದಾಣ ಮತ್ತಿತರ ವಲಯದ ಉದ್ಯಮಗಳನ್ನು ಖಾಸಗಿಯವರಿಗೆ ವಹಿಸಲಾಗುತ್ತಿದೆ. ಉದ್ಯೋಗ ಕ್ಷೇತ್ರವು ಖಾಸಗಿಯವರ ವಶದಲ್ಲಿದೆ. ಆದರೆ, ಖಾಸಗಿ ವಲಯದಲ್ಲಿ ಮೀಸಲಾತಿ ದೊರೆಯುತ್ತಿಲ್ಲ’ ಎಂದು ವಿವರಿಸಿದರು.

ಚುನಾವಣೆಯ ಸಂದರ್ಭದಲ್ಲೇ ಎರಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಜೈಲಿಗೆ ಕಳುಹಿಸಲಾಗಿದೆ. ಈ ಕುರಿತು ಧ್ವನಿ ಎತ್ತುವವರನ್ನು ಹತ್ತಿಕ್ಕಲಾಗುತ್ತಿದೆ. ಶ್ರೀಮಂತ ಉದ್ಯಮಿಗಳು ಮಾಧ್ಯಮಗಳನ್ನು ತಮ್ಮ ವಶದಲ್ಲಿ ಇಟ್ಟುಕೊಂಡಿರುವುದರಿಂದ ಇಂಥ ವ್ಯವಸ್ಥೆಯ ವಿರುದ್ಧ ಮಾಧ್ಯಮಗಳೂ ಧ್ವನಿ ಎತ್ತದಂತಾಗಿದ್ದು ವಿಷಾದನೀಯ ಎಂದರು.

10 ವರ್ಷ ಅಧಿಕಾರದಲ್ಲಿರುವ ಮೋದಿ ಅವರು, ಅಭಿವೃದ್ಧಿಯ ಬಗ್ಗೆ ಮಾತನಾಡುವುದಿಲ್ಲ. ಆದರೆ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ನೋಟುಗಳ ಎಕ್ಸ್‌-ರೇ ಯಂತ್ರ ತಂದು, ಚಿನ್ನಾಭರಣ ಕದಿಯುತ್ತದೆಂದು, ನಿಮ್ಮ ಮನೆಯಲ್ಲಿ ಎರಡು ಎಮ್ಮೆಗಳಿದ್ದರೆ ಒಂದು ಎಮ್ಮೆ ಬಿಟ್ಟು, ಇನ್ನೊಂದು ಎಮ್ಮೆಯನ್ನು ಕಾಂಗ್ರೆಸ್ ಕಸಿಯುತ್ತದೆಂದು ಮೋದಿ ಹೇಳಿದ್ದಾರೆ. ಮೋದಿಯವರಿಂದ ಇಷ್ಟೊಂದು ಕೀಳುಮಟ್ಟದ ಅಪಪ್ರಚಾರ ನಿರೀಕ್ಷೆ ಮಾಡಿದ್ದಿರಾ ಎಂದು ಜನತೆಗೆ ಇದೇ ವೇಳೆ ಪ್ರಶ್ನಿಸಿದರು.

ಇದೇ ವೇಳೆ ದೇಶವನ್ನು ಸರಿಯಾದ ಹಾದಿಯಲ್ಲಿ ಕೊಂಡೊಯ್ಯಲು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿ ಕೂಟಕ್ಕೆ ಮತ ನೀಡಬೇಕೆಂದು ಮನವಿ ಮಾಡಿದರು.

ನಿಮ್ಮ ಭವಿಷ್ಯ, ಅಭಿವೃದ್ಧಿ ಬಗ್ಗೆ ಯೋಚಿಸಿ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಮಟ್ಟದಲಲಿ ಮತ ಚಲಾಯಿಸಿ. ದಾವಣಗೆರೆಯಲ್ಲಿ ಉತ್ತಮ ಅಭ್ಯರ್ಥಿಯನ್ನು ನೀಡಿದ್ದೇವೆ, ಅವರನ್ನು ಆಯ್ಕೆ ಮಾಡಿ ಸಂಸತ್ತಿಗೆ ಕಳುಹಿಸಿ ಎಂದು ಮತದಾರರನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT