ಸಂಗ್ರಹ ಚಿತ್ರ 
ರಾಜಕೀಯ

ಉಪಚುನಾವಣೆಯಲ್ಲಿ ಹೀನಾಯ ಸೋಲು: ಪದಾಧಿಕಾರಿಗಳ ಬದಲಾವಣೆ, ಬಂಡಾಯ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ BJP ಮುಂದು!

ಉಪಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕವು ರಾಜ್ಯ ಪದಾಧಿಕಾರಿಗಳ ಬದಲಾವಣೆ ಹಾಗೂ ಬಂಡಾಯ ನಾಯಕರನ್ನು ನಿಯಂತ್ರಿಸುವ ಕುರಿತು ಹೈಕಮಾಂಡ್'ಗೆ ಮನವಿ ಸಲ್ಲಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು, ಈ ಸೋಲಿಗೆ ಒಳಜಗಳ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ.

ಉಪಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕವು ರಾಜ್ಯ ಪದಾಧಿಕಾರಿಗಳ ಬದಲಾವಣೆ ಹಾಗೂ ಬಂಡಾಯ ನಾಯಕರನ್ನು ನಿಯಂತ್ರಿಸುವ ಕುರಿತು ಹೈಕಮಾಂಡ್'ಗೆ ಮನವಿ ಸಲ್ಲಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಡಿಸೆಂಬರ್‌ನಲ್ಲಿ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ತೀವ್ರ ಟೀಕೆ ನಡೆಸುತ್ತಿದ್ದು, ಈ ಕುರಿತು ವಿಜಯೇಂದ್ರ ಅವರು ಕೇಂದ್ರ ನಾಯಕರಿಗೆ ದೂರು ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಉಪಸಮರದ ಬೆನ್ನಲ್ಲೇ ವಿಜಯೇಂದ್ರ ರಾಜೀನಾಮೆಗೆ ಯತ್ನಾಳ್‌ ಮಾಡಿರುವ ಆಗ್ರಹ, ವಕ್ಫ್ ಬಗ್ಗೆ ಯತ್ನಾಳ್‌ ಬಣ ನಡೆಸುತ್ತಿರುವ ಅಭಿಯಾನ ವಿಜಯೇಂದ್ರ ಬಣವನ್ನು ತೀವ್ರವಾಗಿ ಕೆರಳಿಸಿದೆ. ಜೊತೆಗೆ ಪಕ್ಷ ವಿರೋಧಿ ಚಟುವಟಿಕೆಯನ್ನು ಹೆಚ್ಚಿಸುತ್ತಿರುವುದರಿಂದ ಅವರನ್ನು ಹಣಿಯುವುದಕ್ಕಾಗಿ ವಿಜಯೇಂದ್ರ ವರಿಷ್ಠರ ಭೇಟಿಗೆ ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಡಿಸೆಂಬರ್‌ನಲ್ಲಿ ಬಿಜೆಪಿಯ ಸಂಘಟನ ಪರ್ವ ಮುಕ್ತಾಯಗೊಳ್ಳುತ್ತದೆ. ಸಂಸತ್‌ ಹಾಗೂ ವಿಧಾನ ಮಂಡಲದ ಅಧಿವೇಶನವೂ ಸಮಾಪನಗೊಳ್ಳುತ್ತದೆ. ಹೀಗಾಗಿ ಡಿಸೆಂಬರ್‌ ಕೊನೆಯ ವಾರ ದೆಹಲಿ ತೆರಳಲು ನಿರ್ಧರಿಸಿದ್ದು, ಯತ್ನಾಳ್‌ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಆಗ್ರಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದರಂತೆ ಮುಂದಿನ ತಿಂಗಳು ಪಕ್ಷದ ಪದಾಧಿಕಾರಿಗಳ ಬದಲಾವಣೆ ಸೇರಿದಂತೆ ಕೆಲವರ ವಿರುದ್ದ ಶಿಸ್ತು ಕ್ರಮವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ವಿವರಿಸಿವೆ.

ಇತ್ತೀಚೆಗಷ್ಟೇ ನಡೆದ ಉಪಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮೈತ್ರಿಕೂಟದ ಪಾಲುದಾರ ಜೆಡಿಎಸ್ ಸೋಲನುಭವಿಸಿದ್ದರೆ, ಶಿಗ್ಗಾಂವಿ ಮತ್ತು ಸಂಡೂರಿನಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ.

2023ರಲ್ಲಿ ಶಿಗ್ಗಾಂವಿಯಿಂದ ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಚುನಾಯಿತರಾಗಿದ್ದರು. ಸೀಟು ಉಳಿಸಿಕೊಳ್ಳುವ ಸಂಪೂರ್ಣ ವಿಶ್ವಾಸದಲ್ಲಿದ್ದ ಬಿಜೆಪಿಗೆ ಉಪಚುನಾವಮೆ ಸೋಲು ದೊಡ್ಡ ಆಘಾತ ನೀಡಿದೆ.

ಈ ನಡುವೆ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅವರು, ಉಪಚುನಾವಣೆ ಸೋಲಿಗೆ ಕಾರಣ ಹುಡುಕಲು ರಾಜ್ಯ ಮಟ್ಟದ ಪಕ್ಷದ ಸಭೆ ಮಂಗಳವಾರ ನಡೆಯಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಜಯಭೇರಿ ಬಾರಿಸಿದೆ ಎಂದರೆ ರಾಜ್ಯದ ಜನತೆ ಅದರ ಭ್ರಷ್ಟ ಕೃತ್ಯಗಳನ್ನು ಒಪ್ಪಿಕೊಂಡಿದ್ದಾರೆ ಎಂದರ್ಥವಲ್ಲ. ಉಪಚುನಾವಣೆ ಫಲಿತಾಂಶಗಳು ಪಕ್ಷಕ್ಕೆ ಹಿನ್ನಡೆಯಾಗಿದೆ ಎಂಬುದನ್ನು ನಾನು ಅಲ್ಲಗಳೆಯುವುದಿಲ್ಲ. ಆದರೆ. ನಾವು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ಮೂರು ಕ್ಷೇತ್ರಗಳ ಫಲಿತಾಂಶವನ್ನು ಪರಿಶೀಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ವಿಜಯೇಂದ್ರ ನಾಯಕತ್ವದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ಕುರಿತು ಮಾತನಾಡಿದ ಅವರು, ಸಭೆಯಲ್ಲಿ ಈ ಬಗ್ಗೆಯೂ ಚರ್ಚಿಸಲಾಗುವುದು. ಡಿಸೆಂಬರ್ ಮೊದಲ ವಾರದಲ್ಲಿ ಬಿಜೆಪಿ ಕೇಂದ್ರ ನಾಯಕರು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT