ಬೆಂಗಳೂರು: ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ಮುಂದುವರಿಸಲು 2028ರಲ್ಲಿಯೂ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಭಾರತ್ ಜೋಡೋ ಭವನದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರು ಪ್ರಮಾಣವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ಮುಂದುವರಿಸಲು 2028ರಲ್ಲಿಯೂ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಸೌಮ್ಯಾ ರೆಡ್ಡಿ ಹಾಗೂ ಮಹಿಳಾ ಕಾಂಗ್ರೆಸ್ ಮುಖಂಡರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಸಲಹೆ ನೀಡಿದರು.
ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬಲು ಅನೇಕ ಕಾರ್ಯಕ್ರಮ ರೂಪಿಸಿದೆ. ಪಕ್ಷದ ಆಚಾರ ವಿಚಾರ ಹಾಗೂ ಯೋಜನೆಗಳನ್ನು ರಾಜ್ಯದ ಮೂಲೆ ಮೂಲೆಯಲ್ಲಿ ಪ್ರಚಾರ ಮಾಡಬೇಕು. ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಬೇಕು. ಆಗ 2028ರಲ್ಲೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ರಕ್ಷಣೆಗೆ ಮುಂದೆ ಬರಬೇಕಾದ ಮಹಿಳೆಯರಿಗೆ ಆರ್ಥಿಕ ಶಕ್ತಿಯನ್ನು ನೀಡುವ ಕಾರ್ಯಕ್ರಮವನ್ನು ಮುಂದುವರಿಸುತ್ತೇವೆ. ಜಾತ್ಯತೀತತೆ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ಮೌಲ್ಯಗಳ ಬಗ್ಗೆ ಸ್ಪಷ್ಟತೆ ನೀಡುವ ಮೂಲಕ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಮತ್ತು ಪಕ್ಷವನ್ನು ಸಂಘಟಿಸುವ ಮೂಲಕ ಈ ದಿಸೆಯಲ್ಲಿ ಮುಂದುವರಿಯುವ ಸಾಮರ್ಥ್ಯ ಸೌಮ್ಯಾರೆಡ್ಡಿ ಅವರಿಗೆ ಇದೆ ಎಂದು ಹೇಳಿದರು.
ನಮ್ಮ ಗ್ಯಾರಂಟಿ ಯೋಜನೆಗಳು ದೇಶವನ್ನು ನಾಶ ಮಾಡುತ್ತವೆ ಎಂದು ಬಿಜೆಪಿ ಇತರ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಿತ್ತು. ಆದರೆ, ಮಹಾರಾಷ್ಟ್ರದಲ್ಲಿ ಸರ್ಕಾರವು ಈಗಾಗಲೇ ಫಲಾನುಭವಿಗಳಿಗೆ ಮೂರು ತಿಂಗಳ ಹಣವನ್ನು ಠೇವಣಿ ಮಾಡಿದೆ.
ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರಾಗಿದ್ದು, ನಾವೆಲ್ಲರೂ ಅವರ ಕೈ ಬಲಪಡಿಸಬೇಕು. ನಮ್ಮ ಗುರಿ 2028ರ ಚುನಾವಣೆ. ನಂತರ 2029ರ ಲೋಕಸಭಾ ಚುನಾವಣೆ. ದೇಶದಲ್ಲಿ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರಬೇಕು. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ. ಆದರೆ. ಅಧಿಕಾರದಲ್ಲಿದ್ದಾಗ ನಾನು ಏನು ಮಾಡುತ್ತೇನೆ ಎಂಬುದು ಮುಖ್ಯವಾಗುತ್ತದೆ ಎಂದು ಡಿಕೆ.ಶಿವಕುಮಾರ್ ಅವರು ಹೇಳಿದರು. ಇದೇ ವೇಳೆ ಸಿಎಂ ಹಾಗೂ ಡಿಸಿಎಂ ಇಬ್ಬರೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಾಂಬಾ, ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ರಾಣಿ ಸತೀಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಎತ್ತಿ ಹೊರಹಾಕಬೇಕಾಗುತ್ತೆ ಹುಷಾರ್...
ಈ ನಡುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪುರುಷರು ಗದ್ದಲ ಉಂಟು ಮಾಡಿದ ಹಿನ್ನೆಲೆಯಲ್ಲಿ ತಾಳ್ಮೆ ಕಳೆದುಕೊಂಡ ಡಿಕೆ.ಶಿವಕುಮಾರ್ ಅವರು, ಇಲ್ಲಿ ಮಹಿಳೆಯರ ಕಾರ್ಯಕ್ರಮ ನಡೆಯುತ್ತಿದೆ. ನಿಮಗೆ ಇಲ್ಲಿ ಜಾಗ ಕೊಟ್ಟಿದ್ದೆ ಹೆಚ್ಚು. ಹಾಗಿರುವಾಗ ಕಿರುಚೋದು, ಕೂಗಾಡೋದು ಮಾಡಬೇಡಿ. ಎತ್ತಿ ಹೊರಗಡೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕೂಗೋದಿದ್ರೆ ಬಿಜೆಪಿ ಆಫೀಸ್ ಮುಂದೆ ಕೂಗಿ. ಇಲ್ಲಿ ಶಿಸ್ತು ಮುಖ್ಯ ಎಂದು ಹೇಳಿದರು. ಡಿಸಿಎಂ ಗದರಿದ ಬೆನ್ನಲ್ಲೇ ಪುರುಷ ಕಾರ್ಯಕರ್ತರೂ ಸೈಲೆಂಟಾದರು.