ಅರವಿಂದ್ ಬೆಲ್ಲದ್ - ಸಿದ್ದರಾಮಯ್ಯ  
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ಹೇಳಿಕೆಗೆ ಕ್ಷಮೆಯಾಚಿಸಿದ ಅರವಿಂದ್ ಬೆಲ್ಲದ್; ಬಿಜೆಪಿ ಶಾಸಕನ ಕ್ಷಮಾಪಣೆ ಪತ್ರಕ್ಕೆ ಸಿಎಂ ಶ್ಲಾಘನೆ

ಸಿದ್ದರಾಮಯ್ಯ ಅವರ ‘ಅಪ್ಪನ ಮನೆ ಆಸ್ತಿನಾ’ ಎಂಬ ಪದ ಪ್ರಯೋಗ ಮಾಡಿದ ಕಾರಣಕ್ಕಾಗಿ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಕ್ಷಮೆಯಾಚಿಸಿದ್ದಾರೆ.

ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ನೀಡುವ ಸಂಪುಟ ತೀರ್ಮಾನದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಅವರು ಮಂಗಳವಾರ ಸಿದ್ದರಾಮಯ್ಯನವರ ಬಳಿ ಕ್ಷಮೆಯಾಚಿಸಿದ್ದಾರೆ.

ಸಿದ್ದರಾಮಯ್ಯ ಅವರ ‘ಅಪ್ಪನ ಮನೆ ಆಸ್ತಿನಾ’ ಎಂಬ ಪದ ಪ್ರಯೋಗ ಮಾಡಿದ ಕಾರಣಕ್ಕಾಗಿ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಕ್ಷಮೆಯಾಚಿಸಿದ್ದಾರೆ.

ಜಿಂದಾಲ್ ಗೆ ಭೂಮಿ ಕೊಟ್ಟಿರೋ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅರವಿಂದ್ ಬೆಲ್ಲದ್, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ ಎಂದು ವಾಗ್ದಾಳಿ ನಡೆಸಿದ್ದರು. ಇದೀಗ ಸಿದ್ದರಾಮಯ್ಯ ಅವರಿಗೆ ಕ್ಷಮಾಪಣಾ ಪತ್ರವನ್ನು ಬರೆದಿರುವ ಅರವಿಂದ ಬೆಲ್ಲದ್, ನಾನು ಬಳಿಸಿದ ಪದ ಶೋಭೆ ತರುವಂತದಲ್ಲ. ಹೀಗಾಗಿ ನಾನು ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.

ಬೆಲ್ಲದ್​ ನಡೆ ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ

ಇನ್ನು ಅರವಿಂದ್ ಬೆಲ್ಲದ್ ಅವರ ಕ್ಷಮಾಪಣಾ ಪತ್ರಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ.

ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ.

ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ.

ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ.

ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ.

ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT