ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ.ದಿನೇಶ್ ಅವರನ್ನು ಅಮಾನತು ಮಾಡುವ ಮೂಲಕ ತಪ್ಪಾಗಿದೆ ಎಂದು ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದ್ದು, ಈಗಲಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲಾದರೂ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಚಿಸಿದ್ದ ತಾಂತ್ರಿಕ ಸಮಿತಿಯು ಮುಡಾದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ವರದಿ ನೀಡಿ 10 ತಿಂಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ತನಿಖೆಯ ಹಂತದಲ್ಲಿದ್ದರೂ ಅಧಿಕಾರಿಯನ್ನು ಅಮಾನತುಗೊಳಿಸುವ ಬದಲು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ನಿಯೋಜಿಸಲಾಗಿತ್ತು. ಹಗರಣ ಸಂಬಂದ ತೀವ್ರ ಟೀಕೆಗಳ ಬಳಿ ಸರ್ಕಾರ ಇದೀಗ ಅವರನ್ನು ಅಮಾನತುಗೊಳಿಸಲಾಗಿದೆ. ಈ ಮೂಲಕ ಸರ್ಕಾರ ಪರೋಕ್ಷವಾಗಿ ತನ್ನ ತಪ್ಪನ್ನು ಒಪ್ಪಿಕೊಂಡಿದೆ ಎಂದು ಹೇಳಿದರು.
ಸಿಎಂಗೆ 14 ಸೈಟ್ಗಳು ಏಕೆ ಬೇಕು ಎಂದು ಜನರು ಕೇಳುತ್ತಿದ್ದಾರೆ, ಆದರೆ, ಕಾಂಗ್ರೆಸ್ ಬಿಜೆಪಿ ನಾಯಕರು ಹಿಂದುಳಿದ ವರ್ಗದ ನಾಯಕನನ್ನು ಗುರಿಯಾಗಿಸಿಕೊಂಡಿದ್ದಾರೆಂದು ಆರೋಪ ಮಾಡುತ್ತಿದೆ. ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ್ದಕ್ಕಾಗಿ ರಾಜ್ಯಪಾಲರನ್ನೂ ಗುರಿಯಾಗಿಸಲಾಗುತ್ತಿದೆ. ತಪ್ಪು ಆರೋಪ ಹೊತ್ತಿರುವ ಸಿಎಂಗೆ ಆಯೋಗ ರಚನೆ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಮುಡಾ ಹಗರಣ ಪ್ರಕರಣ ಬಳಿಕ ಸಿಎಂ ಡಿಸ್ಟರ್ಬ್ ಆಗಿದ್ದಾರೆ ಎಂದು ಕಾಂಗ್ರೆಸ್ ನಲ್ಲಿ ಹಲವರು ಹೇಳುತ್ತಿದ್ದಾರೆ. ಈಗಲಾದರೂ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದರು.
ಕಾಂಗ್ರೆಸ್ ಸರಕಾರ ಹಗರಣಗಳಿಂದ ಕೋಮಾದಲ್ಲಿದೆ, ಅಭಿವೃದ್ಧಿ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಸಿಎಂ ರಾಜೀನಾಮೆ ನೀಡಿದ್ದರೆ ಅಭಿವೃದ್ಧಿ ಕೆಲಸಗಳು ನಿಲ್ಲುತ್ತಿರಲಿಲ್ಲ. ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಸರಕಾರ ಪರಿಹಾರ ನೀಡಿಲ್ಲ, ಮಳೆಯ ನಂತರ ರಸ್ತೆಗಳು ಹದಗೆಟ್ಟಿವೆ, ಗುಂಡಿ ಬಿದ್ದ ರಸ್ತೆಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಸಿಎಂ ಸ್ಥಾನಕ್ಕಾಗಿ ಪೈಪೋಟಿಗೆ ಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಗುತ್ತಿಗೆದಾರರು ತಮಗೆ ಬರಬೇಕಾದ 1,500 ಕೋಟಿ ರೂ.ಗಳನ್ನು ಬಿಡುಗಡೆ ಮಾಡದ ಕಾರಣ ಪ್ರತಿಭಟನೆ ನಡೆಸುತ್ತಿದ್ದಾರೆ, ನಗರದಾದ್ಯಂತ ಕಸ ಗಬ್ಬೆದ್ದು ನಾರುತ್ತಿದೆ, ಇದು ಬ್ರ್ಯಾಂಡ್ ಬೆಂಗಳೂರು ಎಂದು ವ್ಯಂಗ್ಯವಾಡಿದರು.
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸರಿಯಾದ ಕನ್ನಡ ಅನುವಾದವನ್ನು ಖಚಿತಪಡಿಸಿಕೊಳ್ಳಲು ಸಿದ್ದರಾಮಯ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಇದೇ ವೇಳೆ ಕಿಡಿಕಾರಿದರು.
ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, "ಅರೆಕಾಲಿಕ" ಬೆಂಗಳೂರು ಅಭಿವೃದ್ಧಿ ಮಂತ್ರಿ ವ್ಯಂಗ್ಯವಾಡಿದರು.
ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಮಾತನಾಡಿ, ಸಿಎಂ ರಾಜೀನಾಮೆ ನೀಡಿ 14 ನಿವೇಶನಗಳನ್ನು ಮುಡಾಕ್ಕೆ ಹಿಂದಿರುಗಿಸಬೇಕು. ಇದೊಂದು ದೊಡ್ಡ ಹಗರಣವಾಗಿದ್ದು, ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸದ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.