ಬೆಂಗಳೂರು: ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ನಿಮ್ಮ ಅಧಿಕಾರದ ಲಾಲಸೆಗೆ, ದುರಾಡಳಿತಕ್ಕೆ ಜನಸಾಮಾನ್ಯರು ಇನ್ಯಾವ್ಯಾವ ರೀತಿ ಪರದಾಡಬೇಕು, ಇನ್ನೆಷ್ಟು ಕಷ್ಟ ಅನುಭವಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇದರ ಪರಿಣಾಮವಾಗಿ ರಾಜ್ಯಾದ್ಯಂತ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ.
ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಸ್ಸಿಲ್ಲ..ಬಸ್ಸಿಲ್ಲ, ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಬಸ್ಸಿಲ್ಲ. ನೌಕರರು, ಉದ್ಯೋಗಿಗಳು ಕೆಲಸಕ್ಕೆ ಹೋಗಲು ಬಸ್ಸಿಲ್ಲ. ನೆಂಟರಿಷ್ಟರ ಮನೆಗಳಿಗೆ, ಶುಭ ಸಮಾರಂಭಗಳಿಗೆ, ಸಾವು-ನೋವಿಗೆ ಹೋಗಲು ಬಸ್ಸಿಲ್ಲ. ಇದು ಬಹುಪಾಲು ಕನ್ನಡಿಗರ ಇವತ್ತಿನ ಬವಣೆ ಎಂದು ವಿವರಿಸಿದ್ದಾರೆ.
ರಾಜ್ಯದ ಖಜಾನೆ ಖಾಲಿ ಮಾಡಿ ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಚೆಲ್ಲಾಟ, ಜನಸಾಮಾನ್ಯರಿಗೆ ಪರದಾಟ, ಗೋಳಾಟ, ತೊಳಲಾಟ! ಸಿಎಂ ಸಿದ್ದರಾಮಯ್ಯ ನವರೇ, ನಿಮ್ಮ ಘನಂದಾರಿ ಆಡಳಿತದಿಂದ ಸಾರಿಗೆ ನಿಗಮಗಳನ್ನು ಸರ್ವನಾಶ ಮಾಡಿಬಿಟ್ಟರಲ್ಲ ಸ್ವಾಮಿ ಎಂದು ಕಿಡಿಕಾರಿದ್ದಾರೆ.
ಸಾರಿಗೆ ನೌಕರರ ಹಿಂಬಾಕಿ ಕೊಡಲು ದುಡ್ಡಿಲ್ಲ. ನೌಕರರ ವೇತನ ಹೆಚ್ಚಳ ಮಾಡಲು ದುಡ್ಡಿಲ್ಲ. ಹೊಸ ಬಸ್ ಖರೀದಿಗೆ ದುಡ್ಡಿಲ್ಲ. ಹಳೆ ಬಸ್ಸುಗಳ ರಿಪೇರಿಗೆ ದುಡ್ಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ನಿಮ್ಮ ಅಧಿಕಾರದ ಲಾಲಸೆಗೆ, ದುರಾಡಳಿತಕ್ಕೆ ಜನಸಾಮಾನ್ಯರು ಇನ್ಯಾವ್ಯಾವ ರೀತಿ ಪರದಾಡಬೇಕು, ಇನ್ನೆಷ್ಟು ಕಷ್ಟ ಅನುಭವಿಸಬೇಕು. ಸಿದ್ಧರಾಮಯ್ಯನವರೇ, ದಯವಿಟ್ಟು ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ. ಕನ್ನಡಿಗರಿಗೆ ನೆಮ್ಮದಿಯ ಜೀವನ ಮಾಡಲು ಬಿಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.