ಬೆಂಗಳೂರು: ಕೇರಳ ಸಿಎಂ, ಕೇರಳ ಸರಕಾರ ಕರ್ನಾಟಕ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದ್ದೇನೆಯೇ ಹೊರತು, ಕೇರಳಿಗರ ಬಗ್ಗೆ ನಾನು ಮಾತನಾಡಿಲ್ಲ. ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ನನ್ನ ಹೇಳಿಕೆಯನ್ನು ತಿರುಚುತ್ತಿದ್ದು, ಜನರ ದಾರಿ ತಪ್ಪಿಸುತ್ತಿದ್ದಾರೆಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದ ಜನರು ಹಾಗೂ ನನ್ನ ನಡುವೆ ಉತ್ತಮ ಬಾಂಧವ್ಯವಿದೆ. ಕೇರಳ ಜನ ನನ್ನನ್ನು ಬಹಳ ಪ್ರೀತಿಸುತ್ತಾರೆ. ನನಗೂ ಅವರ ಮೇಲೆ ಗೌರವವಿದೆ. ಕೇರಳ ಚುನಾವಣೆ ಪ್ರಚಾರಕ್ಕೆ ನಾನು ಹೋಗುತ್ತೇನೆ. ಅಲ್ಲಿ ನಮ್ಮ ಸರ್ಕಾರ ಬರಲಿದೆ. ಹೀಗಾಗಿ ಬಿಜೆಪಿಯವರು ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ. ಬಿಜೆಪಿಗರು ಈ ರೀತಿ ಹುಳಿ ಹಿಂಡುವ ಕೆಲಸ ಮಾಡಬಾರದು. ನಮ್ಮ ಪಕ್ಷದ ನಾಯಕರು ನಮಗೆ ಸಲಹೆ ನೀಡಿದ್ದು, ನಾವು ಅದನ್ನು ಸ್ವೀಕರಿಸುತ್ತೇವೆ ಎಂದು ಹೇಳಿದರು.
ಇಂದು ಕರ್ನಾಟಕ ನೀರಾವರಿ ನಿಗಮ ಹಾಗೂ ಕೃಷ್ಣ ಭಾಗ್ಯ ಜಲ ನಿಗಮದ ನಿರ್ದೇಶಕರ ಮಂಡಳಿ ಸಭೆ ಮಾಡಿದೆವು. ಈ ನಿಗಮಗಳಲ್ಲಿ 5 ಸಾವಿರ ಕೋಟಿ ರೂಪಾಯಿಯಷ್ಟು ಕಾಮಗಾರಿ ತೆಗೆದುಕೊಳ್ಳುತ್ತಿದ್ದೇವೆ. ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ನಾವು ಯುಕೆಪಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಇದಕ್ಕೆ 70 ಸಾವಿರ ಕೋಟಿ ಹಣ ನೀಡಬೇಕಾಗಿದೆ. ಹೀಗಾಗಿ ಇತರೆ ಕೆಲಸಗಳನ್ನು ಮುಂದಿನ ಹಂತದಲ್ಲಿ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದರು.
ಮುಂದಿನ ವರ್ಷ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿದ್ದು, ಗ್ಯಾರಂಟಿ ಯೋಜನೆಗಳು ಮುಂದುವರಿಯಲಿದೆ. ಜನರಿಗೆ ಬಲ ತುಂಬಲಿವೆ ಎಂದು ತಿಳಿಸಿದರು.
ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಉತ್ತಮ ಆಡಳಿತ ಮುಂದುವರಿಯುತ್ತದೆ. ಈ ಆಡಳಿತ ಮುಂದಿನ ಏಳೂವರೆ ವರ್ಷಗಳ ಕಾಲ ಮುಂದುವರಿಯುತ್ತದೆ. ಇದರ ಬಗ್ಗೆ 2026 ರಲ್ಲಿ ಮಾತನಾಡುತ್ತೇನೆಂದು ಹೇಳಿದರು.