ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪಕ್ಷಾತೀತಾ ನಾಯಕರಾಗಿದ್ದಾರೆ. ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ಯಾರೂ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ವರ್ಷಾಂತ್ಯದಲ್ಲಿ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾಗಬಹುದು ಎಂಬ ಊಹಾಪೋಹಗಳ ನಡುವೆಯೇ ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರವನ್ನು ಉಳಿಸಿಕೊಳ್ಳಲು ಸಿದ್ದರಾಮಯ್ಯ ಅವರ ನಾಯಕತ್ವ ನಿರ್ಣಾಯಕವಾಗಿದ್ದು, ಸಿದ್ದರಾಮಯ್ಯ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿರಬೇಕು ಎನ್ನುವ ಪಕ್ಷದ ಒಂದು ವರ್ಗದ ಮುಖಂಡರು ಒತ್ತಾಯಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದು, ಸಿಎಂ ಆಗುವ ಮಹತ್ವಾಕಾಂಕ್ಷೆಯನ್ನು ಪದೇ ಪದೆ ವ್ಯಕ್ತಪಡಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಬೇಕಾದರೆ ಸಿದ್ದರಾಮಯ್ಯ ಪಕ್ಷಕ್ಕೆ ಅನಿವಾರ್ಯ ಎಂಬ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, 'ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ, ಅವರೇ ನಮ್ಮ ನಾಯಕರು, ಎಲ್ಲ ಚುನಾವಣೆಗಳಿಗೂ ಅವರೇ ಬೇಕು. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ವಿಧಾನಸಭೆ, ಸಂಸತ್ ಚುನಾವಣೆಗೆ ಅವರೇ ಬೇಕು. ಅವರೇ ನಮ್ಮ ನಾಯಕರು' ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರನ್ನು ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ. ಹೀಗಾಗಿ, ಯಾರೊಬ್ಬರೂ ಅವರ ಹೆಸರನ್ನು ದುರುಪಯೋಗಪಡಿಸಿಕೊಳ್ಳುವ ಅಗತ್ಯವಿಲ್ಲ. ಅವರು ನಮ್ಮ ನಾಯಕರು, ಕಾಂಗ್ರೆಸ್ ಪಕ್ಷದ ಪ್ರಶ್ನಾತೀತ ನಾಯಕ. ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರು ಮಾಧ್ಯಮಗಳಿಗೆ (ಊಹಾಪೋಹಗಳಿಗೆ) ಆಹಾರವಾಗುವುದು ನನಗೆ ಇಷ್ಟವಿಲ್ಲ' ಎಂದು ತಿಳಿಸಿದರು.
ಪಕ್ಷದ ನಾಯಕರ ಹೇಳಿಕೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಯಾವುದೇ ಗೊಂದಲವಿಲ್ಲ, ಕಾಂಗ್ರೆಸ್ ಪಕ್ಷವು ಪ್ರತಿ ದಿನ ಎಲ್ಲವನ್ನೂ ಗಮನಿಸುತ್ತಿದೆ ಎಂದರು.
ಆಡಳಿತಾರೂಢ ಕಾಂಗ್ರೆಸ್ನ ವಿಧಾನಸಭಾ ಚುನಾವಣೆಯ ಗೆಲುವಿನ ನಂತರ 2023ರ ಮೇ ತಿಂಗಳಿನಿಂದ ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ 2013-18ರವರೆಗೆ ಐದು ವರ್ಷಗಳ ಕಾಲ ಸಿಎಂ ಆಗಿದ್ದರು.