ಬೆಂಗಳೂರು: ಮುಂಬರುವ ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಯೋಜನೆಗಳ ಕ್ಯಾಲೆಂಡರ್ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕವನ್ನು ನಿಗದಿ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರ ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಪಂಚ ಗ್ಯಾರಂಟಿಳಿಗೆ ಆಯಸ್ಸು ಕಡಿಮೆಯಾಗಿದೆ. ಸ್ವತಃ ಮಾನ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರೇ ಗ್ಯಾರಂಟಿಯಿಂದ ಹೊರೆಯಾಗುತ್ತಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಈಗಾಗಲೇ ಪರಿಷ್ಕರಣೆ ನೆಪದಲ್ಲಿ ಲಕ್ಷಾಂತರ ಬಿಪಿಎಲ್ ಕಾರ್ಡ್ ರದ್ದುಪಡಿಸಿ ಬಡವರ ತುತ್ತು ಅನ್ನಕ್ಕೆ ಕಲ್ಲುಹಾಕಲಾಗಿದೆ. ಮತ್ತೊಂದು ಕಡೆ ಗ್ಯಾರಂಟಿಗಳಿಗೆ ಮುಂದುವರೆಯುವ ಗ್ಯಾರಂಟಿ ಇಲ್ಲ. ಮೂರು ನಾಲ್ಕು ತಿಂಗಳಿಗೊಮ್ಮೆ ಹಣ ಜಮಾ ಮಾಡೋ ಗೃಹಲಕ್ಷ್ಮಿ ಮತ್ತು ಯುವನಿಧಿ ಫಲಾನುಭವಿಗಳಿಗೆ ಸಹಾಯ ಮಾಡ್ತಿಲ್ಲ. ಸಿಎಂ ಸಿದ್ದರಾಮಯ್ಯ ನವರು ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಜಮಾ ದಿನಾಂಕ ತಿಳಿಸಬೇಕೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿಮತ್ತು ಯುವ ನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು, ಪ್ರತೀ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು.
ಮುಖ್ಯಮಂತ್ರಿಗಳು ಹಾಗು ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ನವರು 74 ಲಕ್ಷ ಕೋಟಿ ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ಆದರೆ, ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ "ಮ್ಯಾಜಿಕ್"ಆಗಿ ಹಣ ಜಮವಾಗುತ್ತದೆ. ಪ್ರತಿ ಬಾರಿಯೂ ತಾಂತ್ರಿಕ ಸಮಸ್ಯೆಯ ನೆಪ ಒಡ್ಡುವುದು ನಿಜಕ್ಕೂ ಹಾಸ್ಯಾಸ್ಪದವಾಗಿದೆ. ಬೆಂಗಳೂರು, ಭಾರತದ ಸಿಲಿಕಾನ್ ಕ್ಯಾಪಿಟಲ್, ಜಾಗತಿಕ ತಂತ್ರಜ್ಞಾನ ಕೇಂದ್ರದಲ್ಲಿ DBT ವರ್ಗಾವಣೆ ಸರಿಪಡಿಸಲಾಗುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.