ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 
ರಾಜಕೀಯ

ಅಧಿಕಾರಿಗಳನ್ನು ಸಿಎಂ ಅವಮಾನಿಸಿದ್ದರು, ಆಗ IAS ಸಂಘ ಎಲ್ಲಿ ಹೋಗಿತ್ತು?: ಬಿ.ವೈ ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಬೆಳಗಾವಿಯಲ್ಲಿ ಬಹಿರಂಗ ಸಭೆಯಲ್ಲಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿಗೆ ಕಪಾಳಕ್ಕೆ ಹೊಡೆಯಲು ಹೋದರಲ್ಲವೇ? ಆಗ ಈ ಐಎಎಸ್ ಸಂಘ ಎಲ್ಲಿ ಹೋಗಿತ್ತು?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಎಸ್‌ ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ದ ಅವಮಾನ ಆಗುವಂತೆ ನಡೆದುಕೊಂಡಾಗ ಐಎಎಸ್‌ ಅಧಿಕಾರಿಗಳ ಸಂಘ ಎಲ್ಲಿ ಹೋಗಿತ್ತು? ಆಗೇಕೆ ಮುಖ್ಯಮಂತ್ರಿ ವಿರುದ್ಧ ದೂರು ನೀಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಪ್ರಶ್ನಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್ ಅವರ ಹೇಳಿಕೆ ಕುರಿತು ಮಾಧ್ಯಮಗಳ ವರದಿ ಗಮನಿಸಿದ್ದೇನೆ. ರವಿಕುಮಾರ್ ಅವರು ಸ್ಪಷ್ಟನೆಯನ್ನೂ ನೀಡಿದ್ದಾರೆ. ಐಎಎಸ್ ಅಧಿಕಾರಿಗಳ ಸಂಘದವರು ಮುಖ್ಯಮಂತ್ರಿ ಭೇಟಿ ಮಾಡಿ ದೂರು ನೀಡಿದ್ದಾಗಿ ಮಾಹಿತಿ ಬಂದಿದೆ. ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ರವಿಕುಮಾರ್ ಅವರ ವಿಚಾರ ಒಂದೆಡೆ ಇರಲಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಬೆಳಗಾವಿಯಲ್ಲಿ ಬಹಿರಂಗ ಸಭೆಯಲ್ಲಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿಗೆ ಕಪಾಳಕ್ಕೆ ಹೊಡೆಯಲು ಹೋದರಲ್ಲವೇ? ಆಗ ಈ ಐಎಎಸ್ ಸಂಘ ಎಲ್ಲಿ ಹೋಗಿತ್ತು? ಇದೇ ಮುಖ್ಯಮಂತ್ರಿಗಳು ಇನ್ನೊಂದು ಕಡೆ ಸರ್ಕಾರಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳನ್ನು ‘ಏಯ್ ಎದ್ದೇಳು’ ಎಂದು ಅಪಮಾನ ಮಾಡಿದ್ದರು. ಆಗ ಐಎಎಸ್ ಸಂಘ ಎಲ್ಲಿ ಹೋಗಿತ್ತು? ಇದು ಕೂಡ ಚರ್ಚೆ ಆಗಲಿ. ಜನರು ಕೂಡ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಹೇಳಿದರು.

ನಾನು ಯಾರನ್ನೂ ಸಮರ್ಥಿಸಿಕೊಳ್ಳುತ್ತಿಲ್ಲ. ಆದರೆ, ಪಕ್ಷಪಾತವನ್ನಷ್ಟೇ ಪ್ರಶ್ನಿಸುತ್ತಿದ್ದಾರೆ. ರವಿಕುಮಾರ್ ಅವಹು ಈಗಾಗಲೇ ತಮ್ಮ ಹೇಳಿಕೆ ಸಂಬಂಧ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೊದಲ ಬಾರಿಗೆ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗುತ್ತಿಲ್ಲ. ಪೊಲೀಸ್‌ ಇಲಾಖೆಯಲ್ಲಿ ನಿಗದಿತ ದಿನದಂದು ವೇತನ ಕೊಡಲು ಸಾಧ್ಯವಾಗುತ್ತಿಲ್ಲ. ನೀರಾವರಿ ಇಲಾಖೆಯಲ್ಲಿ 2–3 ತಿಂಗಳಿಂದ ಸರಿಯಾಗಿ ಸಂಬಳ ನೀಡುತ್ತಿಲ್ಲ. ಎಲ್ಲ ಇಲಾಖೆಗಳಲ್ಲೂ ಇದೇ ಪರಿಸ್ಥಿತಿ ಇದೆ. ಇಂತಹ ದರಿದ್ರ ಸರ್ಕಾರ ಬದುಕಿದೆಯೇ ಎಂದು ಜನ ಸಾಮಾನ್ಯರು ಮಾತನಾಡುತ್ತಿದ್ದಾರೆ. ಯಾರೇ ಮುಖ್ಯಮಂತ್ರಿ ಇದ್ದರೂ ಪರಿಸ್ಥಿತಿ ಬದಲಾಗದು ಎಂದು ಹೇಳಿದರು.

ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಹಳ ಜನ ಪ್ರಾರ್ಥನೆ ಮಾಡುತ್ತಿದ್ದಾರೆ, ಪ್ರಯತ್ನ ಮಾಡುತ್ತಿದ್ದಾರೆ. ಸುರ್ಜೇವಾಲಾರನ್ನು ಕರೆಸಿ ಭೂಮಿ ಪೂಜೆ, ಗುದ್ದಲಿ ಪೂಜೆ ಮಾಡಿಸಲಿದ್ದಾರೆ. ಬರುವ ದಿನಗಳಲ್ಲಿ ಏನೇನಾಗುತ್ತದೆಯೋ ಕಾದು ನೋಡೋಣ ಎಂದು ತಿಳಿಸಿದರು.

ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಯಾರು ಮುಖ್ಯಮಂತ್ರಿ ಎಂಬುದು ನಮಗೆ ಮುಖ್ಯವಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯ ಜನರು ಛೀಮಾರಿ ಹಾಕುತ್ತಿದ್ದಾರೆ. ಸಂಕಷ್ಟದಲ್ಲಿರುವ ರೈತರ ಬಗ್ಗೆ ಈ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಟೀಕಿಸಿದರು.

ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಅನ್ನು ನಿಷೇಧಿಸಲಾಗುವುದು ಎಂಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ, ನಾನು ಅಂತಹ ಮೂರ್ಖ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT