ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಶನಿವಾರ ಸಾಧನಾ ಸಮಾವೇಶ ನಡೆಸಲಾಗುತ್ತಿದ್ದು, ಸಾಧನಾ ಸಮಾವೇಶದ ಹೆಸರಲ್ಲಿ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜುಗೊಂಡಿದೆ.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಸುಮಾರು 22,600 ಕೋಟಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಶನಿವಾರ ಬೆಳಗ್ಗೆ 11ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸಂಪುಟದ ಸಚಿವರು, ಮೈಸೂರು ಹಾಗೂ ಚಾಮರಾಜನಗರ ಭಾಗದ ಶಾಸಕರು, ಮಾಜಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಹಾಗೂ ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದಕ್ಕಾಗಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಕಾರ್ಯಕ್ರಮದ ವೇದಿಕೆಯ ಮುಂಭಾಗ ಕ್ಯಾಂಪ್ ನಿರ್ಮಿಸಲಾಗಿದ್ದು, ಈ ರ್ಯಾಂಪ್ ಮೂಲಕ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರನ್ನು ಹೊತ್ತು ಮೆರೆಸಲು ಸಿದ್ಧತೆ ನಡೆಸಲಾಗಿದೆ.
ಈ ಕ್ಯಾಂಪ್ ಮೂಲಕ ನೆರೆದಿರುವ ಕಾರ್ಯಕರ್ತರ ಬಳಿ ಸಿದ್ದರಾಮಯ್ಯ ತೆರಳಲು ವ್ಯವಸ್ಥೆ ಮಾಡಲಾಗಿದೆ. ವೇದಿಕೆಯಿಂದ ಕಾರ್ಯಕರ್ತರ ಕಡೆಗೆ ಸುಮಾರು 200 ಮೀಟರ್ ಉದ್ದದ ಕ್ಯಾಂಪ್ ನಿರ್ಮಿಸಲಾಗಿದೆ. ಈ ಅದ್ದೂರಿ ಸಮಾವೇಶದಲ್ಲಿ ಸುಮಾರು 1 ಲಕ್ಷಜನಭಾಗವಹಿಸುವ ನಿರೀಕ್ಷೆಯಿದೆ.
ಸಮಾವೇಶದ ಹಿನ್ನೆಲೆಯಲ್ಲಿ ಇಡೀ ನಗರ ಕಾಂಗ್ರೆಸ್'ಮಯವಾಗಿದೆ. ನಗರದ ಪ್ರಮುಖ ವೃತ್ತಗಳು, ರಸ್ತೆಗಳ ಎಲ್ಲಡೆ ಕಾಂಗ್ರೆಸ್ ಬಾವುಟಗಳು, ಕಾಂಗ್ರೆಸ್ನ ನಾಯಕರಿಗೆ ಶುಭ ಕೋರುವ ಬಂಟಿಂಗ್ಗಳು ರಾರಾಜಿಸುತ್ತಿವೆ. ಸರ್ಕಾರದ ಸಾಧನೆಗಳನ್ನು ಪ್ರತಿಬಿಂಬಿಸು ವಭಿತ್ತಿಪತ್ರಗಳು ಎಲ್ಲೆಡೆ ರಾರಾಜಿಸುತ್ತಿವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸಮಾವೇಶಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಆಸನದ ವ್ಯವಸ್ಥೆ, ಆಗಮನ ಹಾಗೂ ನಿರ್ಗಮ ನಕ್ಕೆ ಪ್ರತ್ಯೇಕ ಗೇಟ್ ಗಳ ನಿರ್ಮಾಣ ಮಾಡಲಾಗಿದೆ. ಎಲ್ಲರಿಗೂ ಕುಡಿಯುವ ನೀರು, ಶೌಚಾಲಯ, ಊಟ, ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರಿಗೆ ಸಾರಿಗೆ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ.
ಹೈಕಮಾಂಡ್ ಎದುರಿಸಲು ಸಿದ್ದು ಷಡ್ಯಂತ್ರ
ಈ ನಡುವೆ ಸಾಧನಾ ಸಮಾವೇಶದ ಕುರಿತು ಬಿಜೆಪಿ ಟೀಕಿಸಿದ್ದು, ಸಿಎಂ ತಮ್ಮ ಹುದ್ದೆ ಉಳಿಸಿಕೊಳ್ಳಲು ಈ ಸಮಾವೇಶ ನಡೆಸುತ್ತಿದ್ದಾರೆ ಎಂದು ಹೇಳಿದೆ.
ಆರಂಭದಿಂದಲೂ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಹೇಳುತ್ತಲೇ ಇದ್ದಿದ್ದರಿಂದ ಯಾವಾಗಲೂ ಸರ್ಕಾರವನ್ನು ಅಸ್ಥಿರತೆ ಕಾಡುತ್ತಿದೆ. ಈ ಸಮಾವೇಶದಿಂದ ಜನರಿಗೆ ಯಾವುದೇ ಉಪಯೋಗವಿಲ್ಲ. ವಾಲ್ಮೀಕಿ ನಿಗಮದಲ್ಲಿ ಹಗರಣ, 2,500 ರೈತರ ಆತ್ಮಹತ್ಯೆ 1200 ನವಜಾತ ಶಿಶುಗಳ ಸಾವು, ಬಾಣಂತಿಯರ ಸಾವು, ಹತ್ತಕ್ಕೂ ಅಧಿಕ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಆತ್ಮಹತ್ಯೆ, ಆರ್ಸಿಬಿ ಸಂಭ್ರಮಾಚರಣೆ ವೇಳೆ 11 ಸಾವು, ಇಂತಹ ಘಟನೆಗಳನ್ನು ಸಂಭ್ರಮಿಸಲು ಸಮಾವೇಶ ಮಾಡಲಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.
ಆರ್ಸಿಬಿ ಕಾರ್ಯಕ್ರಮ ಸರ್ಕಾರದ ವತಿಯಿಂದ ನಡೆದಿಲ್ಲ ಎಂದು ಬಿಂಬಿಸಲಾಗುತ್ತಿದೆ. ಆದರೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿದ್ದರು. ಸಿಐಡಿ ಹಾಗೂ ನ್ಯಾ.ಡಿ ಕುನ್ಹಾ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಸರ್ಕಾರದ ಪಾತ್ರದ ಬಗ್ಗೆ ಹೇಳದೆ, ಪೊಲೀಸರ ಮೇಲೆ ಆರೋಪ ಮಾಡಲಾಗಿದೆ. ಪೊಲೀಸರಿಗೆ ಆದೇಶ ಕೊಟ್ಟ ಸರ್ಕಾರದ ತಪ್ಪಿನ ಬಗ್ಗೆ ಎಲ್ಲೂ ಹೇಳಿಲ್ಲ. ಇಂತಹ ಸಮಯದಲ್ಲಿ ಸಮಾವೇಶ ನಡೆಸಲಾಗುತ್ತಿದೆ. ಇದೇ ರೀತಿ ಡಿ.ಕೆ.ಶಿವಕುಮಾರ್ ಕನಕಪುರದಲ್ಲಿ ಸಮಾವೇಶ ನಡೆಸಿದರೆ ಆಗ ಯಾರ ಬಲ ಹೆಚ್ಚಿದೆ ಎಂದು ತೀರ್ಮಾನಿಸಬಹುದು. ಇಲ್ಲಿ ಪರಸ್ಪರ ಸ್ಪರ್ಧೆ ನಡೆಯುತ್ತಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ. ಇಂತಹ ಸಮಯದಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ 50 ಕೋಟಿ ರೂ. ಹಾಗೂ ಬಿಜೆಪಿ-ಜೆಡಿಎಸ್ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗುವುದೆಂದು ಹೇಳಿದ್ದಾರೆ. ಈ ರೀತಿ ತಾರತಮ್ಯ ಮಾಡಿ, ಕೇಂದ್ರದ ಮೇಲೆ ತಾರತಮ್ಯದ ಆರೋಪ ಹೊರಿಸುತ್ತಿದ್ದಾರೆ. ಎಲ್ಲ ಶಾಸಕರಿಗೆ ಸಮಾನ ಅನುದಾನ ನೀಡಬೇಕು. ಇದರಿಂದ ಸಮಾನ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಅಶ್ವತ್ಥ್ ನಾರಾಯಣ್ ಅವರು ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಅನುಮತಿ ಪಡೆಯದೆ ನಡೆಸಿದ್ದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇಕೆ ಭಾಗವಹಿಸಿದರು? ಎಂದು ಪ್ರಶ್ನಿಸಿದರು. ಈ ಸರ್ಕಾರ ಎಲ್ಲಾ ವಲಯಗಳಲ್ಲೂ ವಿಫಲವಾಗಿದೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು ತಂದಿದೆ ಎಂದು ಕಿಡಿಕಾರಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಸಾಧನಾ ಸಮಾವೇಶದ ಮೂಲಕ ಕಾಂಗ್ರೆಸ್ ಹೈಕಮಾಂಡಿಗೆ ಬೆದರಿಸುವ ಷಡ್ಯಂತ್ರ ಸಿದ್ದರಾಮಯ್ಯ ಅವರದ್ದು. ಮುಖ್ಯಮಂತ್ರಿ ಕುರ್ಚಿಗೆ ಕಂಟಕ ಬಂದಾಗಲೆಲ್ಲ, ರಾಜೀನಾಮೆ ಕೊಡುವ ಸಂದರ್ಭ ಬಂದಾಗ ಸಿದ್ದರಾಮಯ್ಯನವರಿಗೆ ಅಹಿಂದ ಸಮುದಾಯಗಳು ನೆನಪಾಗುತ್ತದೆ. ರಾಜ್ಯದಲ್ಲಿ ಏನು ಕಡಿದು ಕಟ್ಟೆ ಹಾಕಿದ್ದೀರೆಂದು ಸಾಧನಾ ಸಮಾವೇಶ ಮಾಡುತ್ತಿದ್ದಾರೆ ಎಂದು ರಾಜ್ಯದ ಜನರೇ ಕೇಳುವಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಇದು ಶಕ್ತಿ ಪ್ರದರ್ಶನವಲ್ಲ; ಅಪಪ್ರಚಾರ ಮಾಡುತ್ತಿರುವ ಬಿಜೆಪಿಗೆ ಉತ್ತರ
ಇದೇ ವೇಳೆ ಸುಳ್ಳು ಅಪಪ್ರಚಾರ ಮಾಡುತ್ತಿರುವ ಬಿಜೆಪಿಗೆ ಉತ್ತರ ನೀಡಲು ಸಾಧನಾ ಸಮಾವೇಶ ನಡೆಸುತ್ತಿದ್ದೇವೆಯೇ ವಿನಃ ಶಕ್ತಿ ಪ್ರದರ್ಶನವಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಅಭಿವೃದ್ಧಿಗೆ ದುಡ್ಡಿಲ್ಲ ಎಂದು ಬಿಜೆಪಿ ಹೇಳುತ್ತಿದೆ. ನಾವು ಸಾವಿರಾರು ಕೋಟಿ ಹಣವನ್ನು ಒಂದೇ ನಗರಕ್ಕೆ ಮಂಜೂರು ಮಾಡಿದ್ದೇವೆ. ಇದನ್ನು ಜನರಿಗೆ ಹೇಳಲು ಸಮಾವೇಶ ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರದ ಬಗ್ಗೆ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಶನಿವಾರ ಮೈಸೂರಿನಲ್ಲಿ ನಡೆಯುತ್ತಿರುವ ಸಮಾ ವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಜನರ ಕೆಲಸವನ್ನು ಮು೦ದಿಡುವ ಕಾರ್ಯಕ್ರಮವಾಗಿದೆ. ಸುಮಾರು 2,600 ಕೋಟಿ ರೂ.ಗಳ ಕಾರ್ಯಕ್ರಮಗಳಿಗೆ ಚಾಲನೆ ಅಭಿವೃದ್ಧಿ ನೀಡಲಾಗುತ್ತಿದೆ ಎಂದು ಹೇಳಿದರು.