ಪ್ರಲ್ಹಾದ ಜೋಶಿ 
ರಾಜಕೀಯ

ಬೆಂಗಳೂರು ಕಾಲ್ತುಳಿತ: ಸಿಎಂ ಸಿದ್ದರಾಮಯ್ಯ ಬುದ್ಧಿ ಇಲ್ಲದವರಂತೆ ವರ್ತನೆ, ರಾಜಕೀಯ ಪ್ರತಿಷ್ಠೆ ಮರೆಮಾಚಲು ಯತ್ನ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಡಿಕೆ ಶಿವಕುಮಾರ್‌ ಒಂದು ಕ್ಷಣವೂ ಕಾಯದೇ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಿಎಂ ಸಿದ್ದರಾಮಯ್ಯ ಅವರೇ ಇದರ ನೈತಿಕೆ ಹೊಣೆ ಹೊರಬೇಕು ಎಂದರು.

ಮೈಸೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಘಟಿಸಿದ ದುರಂತದ ಹಿನ್ನೆಲೆಯಲ್ಲಿ ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ ಜೋಶಿ, ಡಿಕೆ ಶಿವಕುಮಾರ್‌ ಒಂದು ಕ್ಷಣವೂ ಕಾಯದೇ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಿಎಂ ಸಿದ್ದರಾಮಯ್ಯ ಅವರೇ ಇದರ ನೈತಿಕೆ ಹೊಣೆ ಹೊರಬೇಕು ಎಂದರು.

ವಿಧಾನಸೌಧ ಮುಂಭಾಗ ಕಾರ್ಯಕ್ರಮ ನಡೆಯುತ್ತಿರುವಾಗಲೇ ʼಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಮೂವರ ಸಾವುʼ ಸುದ್ದಿ ಹರಡಿತ್ತು. ಹಾಗಿದ್ದರೂ ಡಿಸಿಎಂ ಕ್ರೀಡಾಂಗಣಕ್ಕೆ ತೆರಳಿ ಸಂಭ್ರಮಿಸಿದ್ದಾರೆ. ಇದು ಅಕ್ಷಮ್ಯ ಅಪರಾಧವಲ್ಲವೇ? ಇಷ್ಟು ದೊಡ್ಡ ದುರಂತ ಘಟಿಸಿದರೂ ತಕ್ಷಣಕ್ಕೆ ಒಂದೇ ಒಂದು ಎಫ್‌ಐಆರ್‌ ಹಾಕದ ಸರ್ಕಾರ, ಹೈಕೋರ್ಟ್‌ ಸ್ವಯಂ ಪ್ರಕರಣ ದಾಖಲಿಸಿಕೊಳ್ಳುತ್ತಲೇ ಪೊಲೀಸ್‌ ಅಧಿಕಾರಿಗಳನ್ನು ಹೊಣೆಯಾಗಿಸುವ ರೀತಿ ಅಮಾನತ್ತು ಮಾಡಿದ್ದೀರಿ. ಹಾಗಾದರೆ, ಡಿಕೆ ಶಿವಕುಮಾರ್‌ ಅವರನ್ನೂ ಡಿಸಿಎಂ ಸ್ಥಾನದಿಂದ ತೆಗೆದುಹಾಕಿ ವಿಚಾರಣೆಗೆ ಒಳಪಡಿಸುತ್ತೀರಾ? ಎಂದು ಪ್ರಶ್ನಿಸಿದರು.

ಸಿಎಂ ಅದ್ಯಾವಾಗ ನೈತಿಕ ಹೊಣೆ ಹೊತ್ತಿದ್ದಾರೆ?: ಸಿಎಂ ಸಿದ್ದರಾಮಯ್ಯ ಅವರು ಮೂಡಾ ಹಗರಣದಲ್ಲೂ ಆಯುಕ್ತ, ಅಧಿಕಾರಿಗಳನ್ನು ಗುರಿ ಮಾಡಿದರು. ವಾಲ್ಮೀಕಿ ಹಗರಣದಲ್ಲೂ ಅಷ್ಟೇ. ಈಗ ಈ ದುರಂತದಲ್ಲೂ ಅದೇ ವರ್ತನೆ ತೋರಿದ್ದಾರೆ. ತಮ್ಮ ರಾಜಕೀಯ ಪ್ರತಿಷ್ಠೆಯನ್ನು ಮರೆಮಾಚಲು ಯತ್ನಿಸಿದ್ದಾರೆ ಎಂದು ಆರೋಪಿಸಿದರು.

ಯಾರನ್ನು ರಕ್ಷಿಸಲು ಪೊಲೀಸರ ಅಮಾನತ್ತು:? ಹೈಕೋರ್ಟ್‌ ಪ್ರಕರಣ ದಾಖಲಿಸಿಕೊಂಡ ಬಳಿಕ ಆರ್‌ಸಿಬಿ ದುರ್ಘಟನೆ ತನಿಖೆಗೆ ಸಿಎಂ ಬುದ್ಧಿ ಇಲ್ಲದವರಂತೆ ನಡೆದುಕೊಂಡಿದ್ದಾರೆ. ತರಾತುರಿಯಲ್ಲಿ ನಿವೃತ್ತ ನ್ಯಾಯಾಧೀಶರ ಏಕಸದಸ್ಯ ಆಯೋಗ ನೇಮಿಸಿದ್ದಾರೆ. ಪೊಲೀಸರನ್ನು ಅಮಾನತ್ತು ಮಾಡಿದ್ದಾರೆ. ಇದು ಯಾರನ್ನು ರಕ್ಷಿಸಲು? ವಾಸ್ತವವಾಗಿ ಹೈಕೋರ್ಟ್‌ ಸಮ್ಮತಿಸುವ ನ್ಯಾಯಾಧೀಶರನ್ನು ತನಿಖೆಗೆ ನೇಮಿಸಬೇಕು ಎಂದು ಹೇಳಿದರು.

ಹೈಕೋರ್ಟ್‌ ಸುಪರ್ದಿಯಲ್ಲೇ ವಿಚಾರಣೆ ಆಗಬೇಕು: ಈ ದುರಂತ ಈಗ ಹೈಕೋರ್ಟ್‌ ಅಂಗಳದಲ್ಲಿದೆ. ಹಾಗಾಗಿ ಹೈಕೋರ್ಟ್‌ ಮಾನಿಟರಿಯಲ್ಲೇ ತನಿಖೆಯಾಗಬೇಕು. ಹೈಕೋರ್ಟ್‌ ಸಪರ್ದಿಯಲ್ಲೇ ವಿಚಾರಣೆ ಆಗಬೇಕು. ಹೈಕೋರ್ಟ್‌ ನ್ಯಾಯಾಧೀಶರನ್ನೇ ನೇಮಿಸಬೇಕು ಎಂದು ಪ್ರಲ್ಹಾದ ಜೋಶಿ ಆಗ್ರಹಿಸಿದರು.

ಎರೆದುಕೊಳ್ಳುವವರ ಬುಡಕ್ಕೆ ಬಗ್ಗಿದ ಸರ್ಕಾರ: ಬೆಂಗಳೂರಿನಲ್ಲಿ ಸಂಭ್ರಮಾಚರಣೆಗೆ ಆರ್‌ಸಿಬಿ ತಂಡ ಮುಂದಾಗಿರಲಿಲ್ಲ. ಅಲ್ಲದೇ, ಪೊಲೀಸ್‌ ಇಲಾಖೆ ಸಹ ಅನುಮತಿ ಕೊಡಲು ಸಿದ್ಧವಿರಲಿಲ್ಲ. ಹಾಗಿದ್ದರೂ ಸರ್ಕಾರವೇ ಒತ್ತಡ ಹಾಕಿದೆ. ʼಎರೆದುಕೊಳ್ಳುವವರ ಬುಡಕ್ಕೆ ಬಗ್ಗಿದರುʼ ಎನ್ನುವಂತೆ ಆರ್‌ಸಿಬಿ ಟ್ರೋಫಿ ಗೆದ್ದ ವಿಜಯೋತ್ಸವದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪ್ರತಿಷ್ಠೆ ಮೆರೆಯಲು, ಕ್ರೆಡಿಟ್‌ ತೆಗೆದುಕೊಳ್ಳಲು ಹೋಗಿದೆ. ಅದೂ ಯಾವೊಂದೂ ಪೂರ್ವ ತಯಾರಿ ಇಲ್ಲದೇ ಎಂದು ಸಚಿವ ಪ್ರಲ್ಹಾದ ಕಿಡಿ ಕಾರಿದರು.

ಆರ್‌ಸಿಬಿ ತಂಡಕ್ಕೆ ವಿಮಾನ; ತನಿಖೆಯಾಗಲಿ: ಆರ್‌ಸಿಬಿ ತಂಡವನ್ನು ಬೆಂಗಳೂರಿಗೆ ಕರೆಸಿಕೊಳ್ಳಲು ವಿಮಾನ ಕಳಿಸಿ ಕೊಟ್ಟವರು ಯಾರು? ಸರ್ಕಾರದಲ್ಲಿ ಇರುವವರೇ ವಿಮಾನ ಬುಕ್​ ಮಾಡಿದಂತಿದೆ. ಈ ಕುರಿತು ತನಿಖೆಯಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲೆತ್ನಿಸದೆ ನೈತಿಕ ಹೊಣೆ ಹೊರಬೇಕು. ಕೂಡಲೇ, ದಾದಾಗಿರಿ ಎಂಬಂತೆ ವರ್ತಿಸುವ ಡಿಸಿಎಂ ಡಿಕೆ ಶಿವಕುಮಾರ್‌ ರಾಜೀನಾಮೆ ಪಡೆಯಬೇಕು ಎಂದು ಜೋಶಿ ಆಗ್ರಹಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನ ಕಾಲ್ತುಳಿಕ್ಕೆ ಬಲಿಯಾಗಿದ್ದು ಗೊತ್ತಾದರೂ ವಿಧಾನಸೌಧದೆದುರು ಡಿಸಿಎಂ, ಸಚಿವರು, ಅಧಿಕಾರಿಗಳು ಕುಟುಂಬ ಸಮೇತ ಆರ್‌ಸಿಬಿ ಆಟಗಾರರೊಂದಿಗೆ ಸೆಲ್ಫಿಯಲ್ಲಿ ಮುಳುಗಿದರು. ಸಂಜೆ 5 ಗಂಟೆವರೆಗೂ ಸಂಭ್ರಮಿಸಿದ್ದಾರೆ. ಈ ಸರ್ಕಾರಕ್ಕೇನಾದರೂ ಮಾನವೀಯತೆ, ಮನುಷ್ಯತ್ವ ಇದೆಯೇ? ಜನರ ಬಗ್ಗೆ ಕಳಕಳಿ ಇದೆಯೇ? ಎಂದು ತರಾಟೆಗೆ ತೆಗೆದುಕೊಂಡರು.

ಟ್ವೀಟ್‌ ಕರೆ ಕೊಟ್ಟವರು ಯಾರು?: ವಿಧಾನಸೌಧ ಮುಂಭಾಗ ಭವ್ಯ ಸಂಭ್ರಮಾಚರಣೆಗೆ ಸಂಜೆ 4 ಗಂಟೆಗೆ ಬನ್ನಿ ಎಂದು ಟ್ವೀಟ್‌ ಕರೆ ಕೊಟ್ಟಿದ್ದು ತಾವೇ ಅಲ್ಲವೇ? ಹಾಗಾಗಿ ಅಷ್ಟು ಜನ ಬಂದಿದ್ದಾರೆ. ಇನ್ನು ವಿಮಾನ ನಿಲ್ದಾಣದಲ್ಲಿ ಆರ್‌ಸಿಬಿ ಆಟಗಾರರನ್ನು ಖುದ್ದು ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಹೋಗಿ ಸ್ವಾಗತಿಸಿದ್ದಾರೆ. ಸಾಲದ್ದಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೂ ತೆರಳಿದ್ದಾರೆ. ಪೊಲೀಸ್‌ ಕಮಿಷನರ್‌ ಅನುಮತಿ ಕೊಡದಿದ್ದರೂ ಡಿಸಿಎಂ ಹೇಗೆ ಹೋದರು? ಡಿಸಿಎಂ ತಮ್ಮನ್ನೇನು ಕ್ರಿಕೆಟ್‌ ಕೋಚ್‌ ಅಂದುಕೊಂಡಿದ್ದಾರಾ ಹೇಗೆ? ಎಂದು ಪ್ರಲ್ಹಾದ ಜೋಶಿ ತರಾಟೆಗೆ ತೆಗೆದುಕೊಂಡರು.

ರಾಹುಲ್‌ ಗಾಂಧಿ ಸಹ ಜವಾಬ್ದಾರಿ: ರಾಹುಲ್‌ ಗಾಂಧಿಯೂ ಇದಕ್ಕೆ ಜವಾಬ್ದಾರರಾಗುತ್ತಾರೆ. ಅವರಿಗೆ ನೈತಿಕತೆ ಇದ್ದರೆ, ಕಾಂಗ್ರೆಸ್‌ ಹೈಕಮಾಂಡ್‌ಗೆ ಕಮಾಂಡ್‌ ಅನ್ನೋದು ಇದ್ದರೆ ಮೊದಲು ಡಿಸಿಎಂ ಡಿಕೆಶಿ ರಾಜೀನಾಮೆ ಪಡೆಯಲಿ ಮತ್ತು ಸಿಎಂರನ್ನು ಹೊಣೆಯಾಗಿಸಿ ಕ್ರಮ ಕೈಗೊಳ್ಳಲಿ. ಘಟನೆಯನ್ನು ಗಂಭೀರವಾಗಿ ಪರಿಗಣಿಸಲಿ ಎಂದು ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!