ಬಿ ವೈ ವಿಜಯೇಂದ್ರ 
ರಾಜಕೀಯ

ರಾಜ್ಯ ಸರ್ಕಾರ ಬೆಲೆ ಏರಿಕೆ ಗ್ಯಾರಂಟಿ ಯಶಸ್ವಿಗೊಳಿಸಿದೆ: ಬಿ.ವೈ ವಿಜಯೇಂದ್ರ ವ್ಯಂಗ್ಯ

ಈ ಸರ್ಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ ಹೆಚ್ಚಿಸಲು ಹೊರಟಿದ್ದಾರೆ.

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ವ್ಯಂಗ್ಯವಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ಬಣ್ಣದ ಹಬ್ಬ ಹೋಳಿಯ ಶುಭಾಶಯ ಕೋರಿದರು. ನಾಡಿನ ಬೆನ್ನೆಲುಬಾದ ರೈತರ ಬದುಕು ಹಸನಾಗಲಿ, ಎಲ್ಲ ಜನತೆಗೆ ಒಳಿತಾಗಲಿ ಎಂದು ಹಾರೈಸಿದರು.

ಬಳಿಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಸರ್ಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ ಹೆಚ್ಚಿಸಲು ಹೊರಟಿದ್ದಾರೆ. ಬಜೆಟ್ ಮೇಲೆ ಈ ವಿಷಯಗಳ ಕುರಿತು ಚರ್ಚಿಸಲಿದ್ದೇವೆ. ರಾಜ್ಯದ ಬಜೆಟ್ ಕುರಿತು ಅಧಿವೇಶನದಲ್ಲಿ ಚರ್ಚೆ ಆರಂಭವಾಗಿದೆ. ನಾನು ಕೂಡ ಬಜೆಟ್ ಬಗ್ಗೆ ಚರ್ಚೆ ಆರಂಭಿಸಿದಾಗ ಆಡಳಿತ ಪಕ್ಷದ ಸದಸ್ಯರು, ಅಧಿಕಾರಿಗಳು ಇರಲಿಲ್ಲ, ಹಾಗಾಗಿ ಮಾತು ಮೊಟಕುಗೊಳಿಸಿದೆ. ಸೋಮವಾರ ಅಥವಾ ಮಂಗಳವಾರ ಮಾತನಾಡಲಿದ್ದೇನೆ ಎಂದು ಹೇಳಿದರು.

ಒಂದೆಡೆ ರಾಜ್ಯ ಅಭಿವೃದ್ಧಿ ಶೂನ್ಯವಾಗಿದೆ. ಇನ್ನೊಂದೆಡೆ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ನಾಡಿನ ಜನರ, ಕೃಷಿಕರ, ಬಡವರ ಕಣ್ಣೀರನ್ನು ಒರೆಸಬೇಕಿದ್ದ ಬಜೆಟ್, ಆ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ತಮಿಳುನಾಡು ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಭಾರತದ ಆರ್ಥಿಕ ಶಕ್ತಿಯನ್ನು ಸಂಕೇತಿಸುವ ‘ರೂಪಾಯಿ ಚಿಹ್ನೆ’ ಯನ್ನು ಪಕ್ಕಕ್ಕೆ ಸರಿಸಿರುವ ತಮಿಳುನಾಡು ಸರ್ಕಾರದ ವರ್ತನೆ ಅತ್ಯಂತ ಖಂಡನೀಯ. ರೂಪಾಯಿ ಚಿಹ್ನೆಯನ್ನು ಧಿಕ್ಕರಿಸುವ ಮೂಲಕ ದೇಶದ ಐಕ್ಯತೆಯಲ್ಲಿ ಬಿರುಕು ಮೂಡಿಸುವ ಪ್ರತ್ಯೇಕತಾ ಮನೋಭಾವವನ್ನು ಪ್ರದರ್ಶಿಸಿದೆ ಎಂದು ಕಿಡಿಕಾರಿದರು.

ದಕ್ಷಿಣ ಭಾರತದಲ್ಲಿ ತಮಿಳುನಾಡಿನ ಭಾಷೆ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆ ಸೇರಿದಂತೆ ದಕ್ಷಿಣ ಭಾರತದ ಇತರ ರಾಜ್ಯಗಳ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ ಅದನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹಿಂದಿನ ಯುಪಿಎ ಸೇರಿದಂತೆ ಕಾಂಗ್ರೆಸ್ ಸರ್ಕಾರಗಳು ತೋರಿದ ಧೋರಣೆಗಳಿಗೆ ಭಿನ್ನವಾಗಿ ಪ್ರಧಾನಿ ಮೋದಿ ಅವರ ನೇತೃತ್ವದ ಎನ್.ಡಿ.ಎ ಸರ್ಕಾರ ಅತೀವ ಕಾಳಜಿ ಹಾಗೂ ಬದ್ಧತೆಯನ್ನು ತೋರುತ್ತಿದೆ. ಆದರೆ, ಮುಂಬರುವ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಡಿಎಂಕೆ ಸರ್ಕಾರದ ಮುಖ್ಯಮಂತ್ರಿ ಸ್ಟಾಲಿನ್ ಅವರು ತಮಿಳುನಾಡಿನ ಜನರ ಭಾವನೆಯಲ್ಲಿ ಭಾಷೆ ಹಾಗೂ ಪ್ರಾಂತೀಯತೆ ಹೆಸರಿನಲ್ಲಿ ದ್ವೇಷ ಬಿತ್ತಲು ಹೊರಟಿರುವುದು ರಾಷ್ಟ್ರದ ಹಿತಾಸಕ್ತಿಗೆ ಮಾರಕ ಉಂಟುಮಾಡುವ ನಡೆಯಾಗಿದೆ.

ಇಂತಹ ನಡವಳಿಕೆಗಳು ತಮಿಳುನಾಡಿನ ಜನತೆಯೂ ಸಹ ಒಪ್ಪಲು ಸಾಧ್ಯವಿಲ್ಲ, ಅಭಿವೃದ್ಧಿ ಇಲ್ಲದ ಆಡಳಿತದಿಂದ ಕಂಗೆಟ್ಟಿರುವ ಡಿಎಂಕೆ ಸರ್ಕಾರ ಭಾಷೆ ಹಾಗೂ ಪ್ರಾಂತೀಯತೆಯ ಹೆಸರಿನಲ್ಲಿ ಜನತೆಯ ಧಿಕ್ಕು ತಪ್ಪಿಸುವ ಮಾರ್ಗವನ್ನು ಅನುಸರಿಸುತ್ತಿದೆ, ಇದಕ್ಕೆ ತಮಿಳುನಾಡಿನ ಜನರೇ ತಕ್ಕ ಉತ್ತರ ನೀಡಲಿದ್ದಾರ ಈ ರೀತಿಯ ವರ್ತನೆಗಳನ್ನು ಈ ದೇಶದ ಯಾವುದೇ ಭಾಗದಲ್ಲಿ ನಡೆದರೂ ಅದನ್ನು ಯಾರೂ ಒಪ್ಪಲಾರರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಯುಪಿಎ ಆಡಳಿತಾವಧಿಯಲ್ಲಿಯೇ ಅಸ್ತಿತ್ವ ಕಂಡುಕೊಂಡ ₹ ಚಿಹ್ನೆಯನ್ನು ಅಪಮಾನಿಸುತ್ತಿರುವ ತನ್ನ ಮಿತ್ರ ಪಕ್ಷದ ರಾಷ್ಟ್ರ ಹಿತಾಸಕ್ತಿಯ ವಿರೋಧದ ನಡೆಯನ್ನು ಕಾಂಗ್ರೆಸ್ ಖಂಡಿಸದೇ ಮೌನ ವಹಿಸಿರುವುದನ್ನು ನೋಡಿದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದ ಐಕ್ಯತೆಗಿಂತಲೂ ಅಧಿಕಾರ ರಾಜಕಾರಣವೇ ತನ್ನ ಆದ್ಯತೆ ಎಂಬುದನ್ನು ಅದು ತೋರಿಸಿಕೊಳ್ಳುತ್ತಿದೆ ಎದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ ಚೌಧರಿ