ಬೆಂಗಳೂರು: ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡಾ ನಾಲ್ಕು ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮತ್ತೊಮ್ಮೆ ತೀವ್ರ ವಾಗ್ವಾದ ನಡೆಯಿತು.
ಧರ್ಮಾಧಾರಿತ ಮೀಸಲಾತಿ "ಸಾಂವಿಧಾನಕ್ಕೆ ವಿರುದ್ಧವಾಗಿದೆ" ಎಂಬ ಬಿಜೆಪಿಯ ಆರೋಪವನ್ನು ತಳ್ಳಿಹಾಕಿ, ಮೀಸಲಾತಿಯನ್ನು ಸಮರ್ಥಿಸಿಕೊಂಡ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಖ್ಖರು ಮತ್ತು ಬೌದ್ಧರು ಈ ದೇಶದ ನಾಗರಿಕರು ಎಂದು ಹೇಳಿದರು.
"ನಮಗೆ ಅಲ್ಪಸಂಖ್ಯಾತರು ಮತ್ತು ಹಿಂದುಳಿದ ಸಮುದಾಯಗಳ ಬಗ್ಗೆ ಕಾಳಜಿ ಇದೆ. ಬಿಜೆಪಿ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಲು ಬಯಸುತ್ತದೆ ಎಂದು ಹೇಳುತ್ತಿದೆ. ಹಾಗಿದ್ದರೆ ಕ್ರಿಶ್ಚಿಯನ್ ಮತ್ತು ಮುಸ್ಲಿಂಮರನ್ನು ಮಂತ್ರಿಗಳನ್ನಾಗಿ ಮಾಡಲಿ. ಆಗ ಮಾತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಸಮಾನತೆಯ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆ. ಕುವೆಂಪು ಬರೆದ ನಾಡಗೀತೆಯನ್ನು ಅವರು ಓದಲಿ, ಆಗ ಕರ್ನಾಟಕವನ್ನು ಶಾಂತಿಯ ತೋಟ ಮಾಡುವುದು ಅಂದರೆ ಏನೆಂದು ಅವರಿಗೆ ಅರ್ಥವಾಗುತ್ತದೆ" ಎಂದು ಶಿವಕುಮಾರ್ ತಿರುಗೇಟು ನೀಡಿದರು.
ಡಾ. ಎಪಿಜೆ ಅಬ್ದುಲ್ ಕಲಾಂ ಅವರನ್ನು ಭಾರತದ ರಾಷ್ಟ್ರಪತಿಯನ್ನಾಗಿ ನೇಮಿಸಿದ್ದು ಕಾಂಗ್ರೆಸ್ ಅಲ್ಲ, ಬಿಜೆಪಿ ಸರ್ಕಾರ ಎಂದು ವಿಜಯೇಂದ್ರ ಅವರು ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.
"ನಾವು ನಜ್ಮಾ ಹೆಪ್ತುಲ್ಲಾ, ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ಆರಿಫ್ ಮೊಹಮ್ಮದ್ ಖಾನ್ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸಿದ್ದೇವೆ. ಸಂಗೀತಗಾರ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರಿಗೆ ಬಿಜೆಪಿ ಸರ್ಕಾರ ಭಾರತ ರತ್ನ ನೀಡಿದೆ" ಎಂದು ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದರು.
ಕಾಂಗ್ರೆಸ್ನ ತುಷ್ಟೀಕರಣ ರಾಜಕೀಯ ಹೊಸದಲ್ಲ. ದಲಿತರ ಬಗ್ಗೆ ಕಾಂಗ್ರೆಸ್ ಗೆ ಕಾಳಜಿ ಇಲ್ಲ. ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯನ್ನು "ಮುಸ್ಲಿಂ ಗೂಂಡಾಗಳು ಸುಟ್ಟುಹಾಕಿದಾಗ" ಅವರು ಎಲ್ಲಿದ್ದರು ಎಂದು ವಿಜಯೇಂದ್ರ ಪ್ರಶ್ನಿಸಿದರು.
ಇನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಸುಪ್ರೀಂ ಕೋರ್ಟ್ನ ಹಲವಾರು ತೀರ್ಪುಗಳು ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಯಾವುದೇ ಅವಕಾಶವಿಲ್ಲ ಎಂದು ಹೇಳಿವೆ ಎಂದು ಹೇಳಿದ್ದಾರೆ.
"ಆದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೋಪಿ' ಧರಿಸಿ, ಟಿಪ್ಪು ಜಯಂತಿಯನ್ನು ಆಯೋಜಿಸಿ, ಶಾದಿ ಭಾಗ್ಯವನ್ನು (2013 ರಲ್ಲಿ ಪ್ರಾರಂಭಿಸಲಾಯಿತು, ಇದು ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಮಹಿಳೆಯರಿಗೆ ಆರ್ಥಿಕ ನೆರವು ನೀಡುತ್ತದೆ) ಪರಿಚಯಿಸಿದರು. ಅವರು ಮುಸ್ಲಿಮರಿಗೆ ಅವರು ಕೇಳಿದ್ದಕ್ಕಿಂತ ಹೆಚ್ಚಿನ ಅನುದಾನಗಳನ್ನು ನೀಡಿದರು. ಈಗ, ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇ. 4 ರಷ್ಟು ಮೀಸಲಾತಿ ನೀಡುವ ಮೂಲಕ, ಕಾಂಗ್ರೆಸ್ ಸರ್ಕಾರ ಹಿಂದೂಗಳ ಮೇಲೆ ದಾಳಿ ಮಾಡಿದೆ" ಎಂದು ಅಶೋಕ್ ಆರೋಪಿಸಿದರು.
ಕರ್ನಾಟಕದಲ್ಲಿ ಧರ್ಮಾಧಾರಿತ ಗುತ್ತಿಗೆ ವ್ಯವಸ್ಥೆ ಎಂದಿಗೂ ಇರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರವು ಸಮುದಾಯಗಳ ನಡುವೆ ಸಂಘರ್ಷಕ್ಕೆ ಕಾರಣವಾಗುವ ಮೀಸಲಾತಿಯನ್ನು ಪರಿಚಯಿಸಿದೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.
ಈ ವಿಚಾರವನ್ನು ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಧರ್ಮಾಧಾರಿತ ಮೀಸಲಾತಿಯನ್ನು "ಸಂವಿಧಾನದ ಅಡಿಯಲ್ಲಿ ಅನುಮತಿಸಲಾಗುವುದಿಲ್ಲ" ಎಂದು ಹೇಳಿದರು.
"ನೀವು ಗುತ್ತಿಗೆಯಲ್ಲಿ ಮುಸ್ಲಿಮರಿಗೆ ನಾಲ್ಕು ಪ್ರತಿಶತ ಮೀಸಲಾತಿಯನ್ನು ನೀಡಿದ್ದೀರಿ. ನಾವು ಧರ್ಮಾಧಾರಿತ ಮೀಸಲಾತಿಯನ್ನು ವಿರೋಧಿಸುತ್ತೇವೆ. ಅದನ್ನು ಜಾರಿಗೆ ತರದಂತೆ ನಾನು ನಿಮ್ಮ ಮೂಲಕ ಸರ್ಕಾರವನ್ನು ಒತ್ತಾಯಿಸುತ್ತೇನೆ" ಎಂದು ಅವರು ಹೇಳಿದರು.