ಸಿದ್ದರಾಮಯ್ಯ  
ರಾಜಕೀಯ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ ಪ್ರಸ್ತಾಪ: ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ದೆಹಲಿ ಭೇಟಿ

ಸಿದ್ದರಾಮಯ್ಯನವರ ದೆಹಲಿ ಭೇಟಿ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಕೂಡ ಇರುತ್ತಾರೆ. ಅವರು ದೆಹಲಿಯಲ್ಲಿ ಕರ್ನಾಟಕ ಭವನ -3 ನ್ನು ಉದ್ಘಾಟಿಸಲಿದ್ದಾರೆ.

ಬೆಂಗಳೂರು: ಮೊಣಕಾಲಿನ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಯುಗಾದಿ ಹಬ್ಬ ಮುಗಿದ ನಂತರ ನಂತರ ನಾಡಿದ್ದು ಏಪ್ರಿಲ್ 2 ರಂದು ದೆಹಲಿಗೆ ನಾಲ್ಕು ದಿನಗಳ ಭೇಟಿ ನೀಡಲಿದ್ದಾರೆ. ತಮ್ಮ ಸಂಪುಟದ ಸಹೋದ್ಯೋಗಿಗಳ ಹಿತ ಕಾಪಾಡುವುದರ ಜೊತೆಗೆ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಬಲಪಡಿಸಿಕೊಳ್ಳಲು ಅವರು ಹೈಕಮಾಂಡ್ ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕಳೆದ ಶುಕ್ರವಾರ ಅವರ ಆಪ್ತ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಸೇರಿದಂತೆ ಕೆಲವು ಪ್ರಸ್ತಾಪಗಳನ್ನು ಸಿದ್ದರಾಮಯ್ಯನವರು ಭೇಟಿ ಮಾಡಿದ ಸಂದರ್ಭದಲ್ಲಿ ಮುಂದಿಡಲು ವೇದಿಕೆ ಸಿದ್ಧಪಡಿಸಿದ್ದರು ಎಂದು ಮೂಲಗಳು ಹೇಳುತ್ತವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಅವರ ಸ್ಥಾನಕ್ಕೆ ತಮ್ಮ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲು ಸತೀಶ್ ಜಾರಕಿಹೊಳಿ ಆಶಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯನವರ ದೆಹಲಿ ಭೇಟಿ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಕೂಡ ಇರುತ್ತಾರೆ. ಅವರು ದೆಹಲಿಯಲ್ಲಿ ಕರ್ನಾಟಕ ಭವನ -3 ನ್ನು ಉದ್ಘಾಟಿಸಲಿದ್ದಾರೆ. ಏಪ್ರಿಲ್ 3 ಮತ್ತು 4 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಏಪ್ರಿಲ್ 5 ರಂದು ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

ಸತೀಶ್ ಜಾರಕಿಹೊಳಿಯವರು ನಿನ್ನೆ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರೊಂದಿಗೆ ಉಪಾಹಾರ ಸಭೆ ನಡೆಸಿ ಕೇಂದ್ರ ನಾಯಕರ ಗಮನಕ್ಕೆ ತರಬೇಕಾದ ವಿವಿಧ ವಿಷಯಗಳ ಕುರಿತು ಇಬ್ಬರೂ ಚರ್ಚಿಸಿದ್ದರು.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಪ್ರಯತ್ನ ಮತ್ತು ಅವರ ಮಗ ಎಂ ಎಲ್ಸಿ ರಾಜೇಂದ್ರ ಅವರ ಮೇಲೆ 'ಸುಪಾರಿ' ಹತ್ಯೆ ಯತ್ನದ ಆರೋಪ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಮಹತ್ವದ್ದಾಗಿದೆ. ಸಂಪುಟ ಸಚಿವರ ಕಡೆಗೆ ಈ ವಿಷಯದಲ್ಲಿ ಅನುಮಾನ ತೋರಿಸುತ್ತಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ, ಕರ್ನಾಟಕದ ಬೆಳವಣಿಗೆಗಳ ಬಗ್ಗೆ ಅಸಮಾಧಾನಗೊಂಡಿರುವ ಕೇಂದ್ರ ನಾಯಕರ ಮುಂದೆ ಸಿದ್ದರಾಮಯ್ಯ ತಮ್ಮದೇ ಆದ ಅಭಿಪ್ರಾಯಗಳನ್ನು ಮಂಡಿಸಿ ಅವರ ವಿಶ್ವಾಸಗಳಿಸಲು ಪ್ರಯತ್ನಿಸುವ ಸಾಧ್ಯತೆಯಿದೆ. ಸಹಕಾರ ಸಚಿವ ರಾಜಣ್ಣ ಸ್ವತಃ ಈ ವಿಷಯವನ್ನು ವಿಧಾನಸಭೆಯಲ್ಲಿ ಹೇಗೆ ಎತ್ತಿದರು ಮತ್ತು ವಿರೋಧ ಪಕ್ಷಗಳಿಗೆ, ವಿಶೇಷವಾಗಿ ಉಚ್ಚಾಟಿತ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೇಗೆ ಉತ್ತರಿಸಿದರು ಎಂಬುದನ್ನು ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ವಿವರಿಸಬೇಕಾಗುತ್ತದೆ.

ದೆಹಲಿಗೆ ಭೇಟಿ ನೀಡುವ ನಿರೀಕ್ಷೆಯಿರುವ ಕೆಲವು ಎಸ್‌ಸಿ/ಎಸ್‌ಟಿ ನಾಯಕರ ಜೊತೆಗೆ, ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಸೇರಿದಂತೆ ಸಿಎಂ ಅವರ ಪ್ರಸ್ತಾವನೆಗಳನ್ನು ಎಸ್‌ಸಿ/ಎಸ್‌ಟಿ ಸಚಿವರು ಅನುಮೋದಿಸುತ್ತಾರೆ ಎಂದು ಮೂಲವೊಂದು ತಿಳಿಸಿದೆ.

ಸಂಪುಟ ಪುನಾರಚನೆ

ನಾಲ್ಕು ಖಾಲಿ ಇರುವ ಎಂಎಲ್‌ಸಿ ಹುದ್ದೆಗಳನ್ನು ಭರ್ತಿ ಮಾಡಲು ಹೈಕಮಾಂಡ್‌ನಿಂದ ಅನುಮತಿ ಪಡೆಯುವುದು ಕೂಡ ಸಿಎಂ ಕಾರ್ಯಸೂಚಿಯಲ್ಲಿದೆ, ಅಂತಿಮ ಪಟ್ಟಿ ಈಗಾಗಲೇ ಸಿದ್ಧವಾಗಿದೆ. ಮೇ 20 ರಂದು ಸಿಎಂ ಆಗಿ ಎರಡು ವರ್ಷಗಳನ್ನು ಪೂರೈಸಿದ ನಂತರ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆಯ ಬಗ್ಗೆಯೂ ಚರ್ಚಿಸಲಿದ್ದಾರೆ, ರಾಹುಲ್ ಗಾಂಧಿಯವರು ಒಪ್ಪಿಗೆ ನೀಡಿದರೆ, ಅದು ಜೂನ್‌ನಲ್ಲಿ ನಡೆಯಲಿದೆ.

ರಾಹುಲ್ ಗಾಂಧಿಯವರು ಸಂಪುಟ ಪುನಾರಚನೆಗೆ ಒಪ್ಪಿಗೆ ನೀಡಿದರೆ, ಎರಡೂವರೆ ವರ್ಷಗಳ ನಂತರ, ಈ ವರ್ಷ ನವೆಂಬರ್ ನಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕಾಂಗ್ರೆಸ್ ಶಾಸಕರೊಬ್ಬರು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT