ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಡಾಮಂಡಲಗೊಂಡಿದ್ದು, ಕಾಂಗ್ರೆಸ್ ಹೈ ಕಮಾಂಡ್ ಈ ಬಗ್ಗೆ ಏನಾದ್ರು ಹೇಳಿದೆಯೇನ್ರಿ? ಎಂದು ಕಿಡಿಕಾರಿದ್ದಾರೆ.
ಮೈಸೂರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ (ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು.
ಯಾರು ಏನೇ ಹೇಳಿದ್ರೂ ಅದು ಮುಖ್ಯವಲ್ಲ. ಕಾಂಗ್ರೆಸ್ ಹೈಕಮಾಂಡ್ ಹೇಳುವುದಷ್ಟೇ ಮುಖ್ಯ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಏನಾದ್ರೂ ಹೇಳಿದ್ಯಾ? ಯಾಕೆ ಪದೇ ಪದೇ ಅದನ್ನೇ ಮಾತನಾಡುತ್ತೀರಾ. ಜನ ಮಾತನಾಡುತ್ತಿಲ್ಲ, ಮಾಧ್ಯಮದವರೇ ಪದೇ ಪದೇ ಮಾತನಾಡುತ್ತಿದ್ದಾರೆ ಎಂದು ಸಿಡಿಮಿಡಿಗೊಂಡರು.
ಕಾಂಗ್ರೆಸ್ಗೆ ಹೈಕಮಾಂಡ್ ಇದೆ. ಹೈಕಮಾಂಡ್ ಹೇಳುವುದು ಮಾತ್ರವೇ ಮುಖ್ಯ, ಅದೇ ಅಂತಿಮ. ನಾನು ಬಿಹಾರ ಚುನಾವಣೆ ಬಳಿಕ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡುತ್ತೇನೆ. ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರೊಟ್ಟಿಗೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಏನು ಹೇಳುತ್ತದೆಯೋ ಆ ರೀತಿ ನಡೆದುಕೊಳ್ಳುತ್ತೇನೆಂದು ಹೇಳಿದರು.
ಇದೇ ವೇಳೆ ಬಿಹಾರ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಚಾರಕ್ಕೆ ಇಲ್ಲಿಯವರೆಗೆ ನನ್ನನ್ನ ಕರೆದಿಲ್ಲ, ಕರೆದರೆ ಹೋಗುತ್ತೇನೆ. ಬಿಹಾರದಲ್ಲಿ ಈ ಬಾರಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತದೆ. ನಿತೀಶ್ ಕುಮಾರ್ ಬಗ್ಗೆ ಜನಕ್ಕೆ ಬೇಸರ ಬಂದಿದೆ. ಏಕೆಂದರೆ, ಅವರಿಗೆ ಯಾವುದೇ ಸಿದ್ಧಾಂತ ಇಲ್ಲ. ಅವರು ಎಲ್ಲಾ ಪಕ್ಷಗಳನ್ನ ಬದಲಾಯಿಸಿದ್ದಾರೆ. ಈ ಕಾರಣ ಜನ ಇಂಡಿ ಒಕ್ಕೂಟದ ಪರ ಮತ ಹಾಕುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮ ಗ್ಯಾರೆಂಟಿಗಳನ್ನೇ ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಆದರೂ ಅಲ್ಲಿಯ ಜನ ಅವರ ಕೈ ಹಿಡಿಯುವುದಿಲ್ಲ. ಕರ್ನಾಟಕದಲ್ಲಿ ಬಿಹಾರದ ಮತದಾರರು ಇದ್ದಾರೆ. ಅವರಿಗೂ ನಮ್ಮ ಒಕ್ಕೂಟಕ್ಕೆ ಮತ ಹಾಕಿ ಎಂದು ಕೇಳುತ್ತೇವೆ. ಬಿಹಾರದಲ್ಲಿ ಅತಿ ಹೆಚ್ಚಿನ ಬಡವರು ಇದ್ದಾರೆಂದು ತಿಳಿಸಿದರು.
ಹುಲಿ ದಾಳಿ ಪ್ರಕರಣದ ಕುರಿತು ಮಾತನಾಡಿ, ಒಂದು ಸತ್ಯ ಹೇಳುತ್ತೇನೆ ಕೇಳಿ. ಜನರು ಕಾಡಿನೊಳಗೆ ಓಡಾಡಲು ಶುರು ಮಾಡಿದ್ದಾರೆ. ಹೀಗಾಗಿ ಪ್ರಾಣಿಗಳು ಹೊರಬರಲು ಪ್ರಾರಂಭಿಸಿದೆ. ಕಾಡಿನೊಳಗೆ ಪ್ರಾಣಿಗಳಿಗೆ ಮೇವು ನೀರು ಸಿಗುತ್ತಿಲ್ಲ. ಇದರಿಂದಲೂ ನಾಡಿಗೆ ಪ್ರಾಣಿಗಳು ಬರುತ್ತಿದೆ. ಕಾಡಂಚಿನಲ್ಲಿ ಅಕ್ರಮ ರೆಸಾರ್ಟ್ ಗಳು ಹೆಚ್ಚಾಗುತ್ತಿದೆ. ಅವುಗಳಿಗೆ ಕಡಿವಾಣ ಹಾಕುವ ಕೆಲಸ ಮಾಡುತ್ತೇವೆ. ಸಫಾರಿಗಳ ಸಂಖ್ಯೆಯೂ ಹೆಚ್ಚಾಗಿರುವ ಬಗ್ಗೆ ಗಮನಕ್ಕೆ ಬಂದಿದೆ. ಅದನ್ನು ಕಡಿಮೆ ಮಾಡುವ ಕೆಲಸ ಮಾಡುತ್ತೇವೆ. ಹುಲಿ ದಾಳಿ ಪ್ರಕರಣಕ್ಕೆ ನಾನೇ ಪ್ರತ್ಯೇಕ ಸಭೆ ಕರೆಯುತ್ತಿದ್ದೇನೆ ಎಂದರು.