ಬೆಂಗಳೂರು: ಬಿಹಾರದ ಜಯ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸದೃಢ ನಾಯಕತ್ವದ ಕೊರಳನ್ನು ಅಲಂಕರಿಸಿದ ಪ್ರಜಾಪ್ರಭುತ್ವದ ವಿಜಯದ ಹಾರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಹೇಳಿದರು.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್'ಡಿಎ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲವು ದಾಖಲಿಸಿದ ಬೆನ್ನಲ್ಲೇ ರಾಜ್ಯದ ಬಿಜೆಪಿ ಹಾಗೂ ಜೆಡಿಎಸ್ ಕಚೇರಿಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯಸಭಾ ಸಂಸದ ಲೆಹರ್ ಸಿಂಗ್ ಸಿರೋಯಾ, ಎನ್ ರವಿಕುಮಾರ್, ಪಿ ರಾಜೀವ್ ಸೇರಿದಂತೆ ಬಿಜೆಪಿ ನಾಯಕರು ಮತ್ತು ಅನೇಕ ಹಾಲಿ ಮತ್ತು ಮಾಜಿ ಶಾಸಕರು ಪಕ್ಷದ ಕಾರ್ಯಕರ್ತರೊಂದಿಗೆ ಸೇರಿಕೊಂಡು ಸಂಭ್ರಮಾಚರಣೆ ಆಚರಿಸಿದರು.
ಎನ್'ಡಿಎ ಗೆಲುವು ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ ಅವರು, ಬಿಹಾರ ವಿಧಾನಸಭಾ ಚುನಾವಣೆಯ ಅಭೂತಪೂರ್ವ ಜಯ, ದೇಶದ ಹೆಮ್ಮೆಯ ಪ್ರಧಾನಿ ಮೋದಿ ಅವರ ಸದೃಢ ನಾಯಕತ್ವದ ಕೊರಳನ್ನು ಅಲಂಕರಿಸಿದ ಪ್ರಜಾಪ್ರಭುತ್ವದ ವಿಜಯದ ಹಾರವಾಗಿ ವಿಜೃಂಭಿಸಿದೆ. ಮಾನ್ಯ ಪ್ರಧಾನಿ ಅವರ ನೇತೃತ್ವದ ಎನ್'ಡಿಎ ಸರ್ಕಾರ ದೇಶಕ್ಕೆ ಅನಿವಾರ್ಯ ಎಂಬ ಸಂದೇಶವನ್ನೂ ಬಿಹಾರದ ಮತದಾರರು ರವಾನಿಸಿದ್ದಾರೆ.
ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ನೇತೃತ್ವದಲ್ಲಿ ಎನ್'ಡಿಎ ಮೈತ್ರಿಕೂಟದ ಸಂಘಟಿತ ಹೋರಾಟ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಕಾರ್ಯತಂತ್ರ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ದಕ್ಷ ಆಡಳಿತವನ್ನು ಮೆಚ್ಚಿ ಬಿಹಾರದ ಜನತೆ ಮತ್ತೆ NDA ಸರ್ಕಾರವನ್ನು ನಿರೀಕ್ಷೆ ಮೀರಿದ ಐತಿಹಾಸಿಕ ದಾಖಲೆಯ ಬಹುಮತದಿಂದ ಗೆಲ್ಲಿಸಿ ಆಶೀರ್ವದಿಸಿದ್ದಾರೆಂದು ಹೇಳಿದ್ದಾರೆ.
ಈ ಚುನಾವಣೆಯಲ್ಲಿ ಮತಚೋರಿ ಹೆಸರಿನಲ್ಲಿ ಅಪಪ್ರಚಾರ ನಡೆಸಿ ರಾಜಕೀಯ ಚೋರತನ ಮಾಡಲು ಹೊರಟ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಗೆ ಬಿಹಾರದ ಮತದಾರರು ತಕ್ಕ ಪಾಠ ಕಲಿಸಿ ಬಿಹಾರದ ರಾಜಕೀಯ ಭೂಪಟದಲ್ಲಿ ಕಾಂಗ್ರೆಸ್ ಗೆ ಅಸ್ತಿತ್ವಕ್ಕಾಗಿ ತಿಣುಕಾಡಬೇಕಾದ ಸ್ಥಿತಿಗೆ ತಳ್ಳಿದ್ದಾರೆ. ಆರ್.ಜೆ.ಡಿ ಸೇರಿದಂತೆ ಮಹಾಘಟಬಂಧನ್ ಕೂಟವನ್ನು ಬಿಹಾರದ ಜನತೆ ಸೋಲಿನ ಬಂಧನದ ರುಚಿ ತೋರಿಸಿ ದ್ದಾರೆ. ಪಾಳೆಗಾರಿಕೆ ರಾಜಕೀಯಕ್ಕೆ ಇನ್ನೆಂದೂ ಅವಕಾಶ ನೀಡಲಾಗದು ಎಂಬ ಉತ್ತರ ಕೊಟ್ಟಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಪ್ರಚಾರ ನಡೆಯುವುದಿಲ್ಲ, ಅಲ್ಪಸಂಖ್ಯಾತರ ಹೆಸರಿನಲ್ಲಿ ಓಲೈಕೆಯ ಮತಬ್ಯಾಂಕ್ ರಾಜಕಾರಣಕ್ಕೆ ಭವಿಷ್ಯವಿಲ್ಲ ಎನ್ನುವುದನ್ನು ಬಿಹಾರದ ಜನತೆ ತೋರಿಸಿಕೊಟ್ಟಿದ್ದಾರೆ. ಬಿಹಾರದ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಸೇರಿದಂತೆ ದೇಶದ ಇತರ ವಿರೋಧ ಪಕ್ಷಗಳಿಗೆ ನೀತಿ ಪಾಠ ಹೇಳಿದೆ. ವಿರೋಧ ಪಕ್ಷವಾಗಿ ಜವಾಬ್ದಾರಿಯಿಂದ ನಡೆದುಕೊಳ್ಳದಿದ್ದರೆ ನಿಮ್ಮನ್ನು ವಿರೋಧ ಪಕ್ಷದ ಸ್ಥಾನದಲ್ಲೂ ಕುಳ್ಳಿರಿಸಲಾಗದು ಎಂಬ ಎಚ್ಚರಿಕೆ ರವಾನಿಸಿದ್ದಾರೆ.
ರಾಹುಲ್ ಗಾಂಧಿ ಅವರು ಬೆನ್ನತ್ತಿಹೋದ ಈ ವರೆಗಿನ ಚುನಾವಣೆಗಳೆಲ್ಲವೂ ಸರಣೀ ಪತನದ ಕಹಿಯನ್ನು ಕಾಂಗ್ರೆಸ್ ಅನುಭವಿಸಿದೆ,ಸದ್ಯ ಸೋಲಿನ ಸುಳಿಯಲ್ಲಿ ಸಿಲುಕಿಕೊಂಡು ಕಾಂಗ್ರೆಸ್ ಹಡಗು ಸಮುದ್ರದಲ್ಲಿ ಮುಳುಗುತ್ತಿದೆ,ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳು ಕಾಂಗ್ರೆಸ್ ಪಾಲಿಗೆ ಊರುಗೋಲುಗಳಾಗಿವೆ. ಇಂತಹ ಪರಿಸ್ಥಿತಿಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಕಾಂಗ್ರೆಸ್'ನ ಮುಂದಾಳುಗಳು ಜನಪರವಾಗಿ ಚಿಂತಿಸದೇ ಅಭಿವೃದ್ಧಿ ಕೆಲಸಗಳನ್ನು ಮೂಲೆಗೆ ಸರಿಸಿ, ರಾಷ್ಟ್ರಭಕ್ತ ಸಂಘಟನೆಗಳ ಕುರಿತು ಅವಿವೇಕದ ಹೇಳಿಕೆಗಳನ್ನು ನೀಡುವುದರಲ್ಲೇ ತಲ್ಲೀನರಾಗಿದ್ದಾರೆ. ಬಿಹಾರದ ಚುನಾವಣೆಯ ಫಲಿತಾಂಶದಿಂದಾದರೂ ರಾಜ್ಯದ ಕಾಂಗ್ರೆಸ್ಸಿಗರು ಪಾಠ ಕಲಿಯಲಿ. ತಮ್ಮ ಉಳಿದಿರುವ ಅವಧಿಯನ್ನಾದರೂ ಜನಪರ ಕಾರ್ಯಕ್ಕಾಗಿ ಮೀಸಲಿರಿಸಿ ಮತದಾರರ ಋಣ ತೀರಿಸಲಿ ಎಂದು ತಿಳಿಸಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಪ್ರತಿಕ್ರಿಯಿಸಿ, ಬಿಹಾರ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷವನ್ನು ನಡುಗುವಂತೆ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಇಬ್ಬರೂ ಇದೀಗ ರಾಹುಲ್ ಗಾಂಧಿಯವರ ವೋಟ್ ಚೋರಿ ಅಭಿಯಾನದಿಂದ ನಿಧಾನಗತಿಯಲ್ಲಿ ಹಿಂದೆ ಸರಿಯುವಂತೆ ಮಾಡಿದೆ ಎಂದು ಹೇಳಿದ್ದಾರೆ.
ಜನರ ಆದೇಶದ ಮುಂದೆ ನಾವು ತಲೆಬಾಗುತ್ತೇವೆಂದು ಸಿಎಂ ಹೇಳಿದ್ದು, ಕಾಂಗ್ರೆಸ್ಗೆ ಹೊಸ ತಂತ್ರ ಬೇಕೆಂದು ಡಿಕೆ.ಶಿವಕುಮಾರ್ ಹೇಳಿದ್ದಾರೆ. ಇದರ ಅರ್ಥ ಒಂದೇ ಇನ್ನು ಮುಂದೆ ರಾಹುಲ್ ಗಾಂಧಿಯವರ ನೆಪ ಮತ್ತು ನಾಟಕದ ಮುಂದೆ ಸುಳಿಯಲು ಬಯಸುವುದಿಲ್ಲ ಎಂಬುದು. ಜನರು ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟವನ್ನು ತಿರಸ್ಕರಿಸಿದ್ದಾರೆ. ಜನರು ತಮ್ಮ ಆದೇಶವನ್ನು ನೀಡಿದ್ದಾರೆ. ಆದರೆ, ಇದನ್ನು ಒಪ್ಪಿಕೊಳ್ಳುವ ಬದಲು, ಕಾಂಗ್ರೆಸ್ ನಾಯಕರು ಹೊಸ ಪಿತೂರಿ ನಡೆಸುತ್ತಿದ್ದಾರೆಂದು ಕಿಡಿಕಾರಿದ್ದಾರೆ.
ಈ ತೀರ್ಪು ಮೋದಿಗೆ ಸಿಕ್ಕ "ದೊಡ್ಡ ಆಶೀರ್ವಾದ" ಎಂದು ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಈ ಫಲಿತಾಂಶವು ಡಬಲ್-ಎಂಜಿನ್ ಸರ್ಕಾರಗಳ ಮೇಲಿನ ಜನರ ನಂಬಿಕೆಯನ್ನು ಸಾಬೀತುಪಡಿಸಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ ಸಿ ಎನ್ ಅಶ್ವತ್ಥ ನಾರಾಯಣ್ ಹೇಳಿದ್ದಾರೆ.