ರಾಯಚೂರು: ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂಬ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಕುರಿತು ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಆರ್ ಎಸ್ ಎಸ್ , ತಾಲಿಬಾನಿಗಳ ಮೈಂಡ್ ಸೆಟ್ ಒಂದೇ ಯಾಗಿದೆ ಎಂದು ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ರಾಯಚೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಏನೇ ಬೈಠಕ್ ಮಾಡಬೇಕೆಂದರೂ ಪೂರ್ವಾನುಮತಿ ಪಡೆಯಬೇಕು. ಆರ್ಎಸ್ಎಸ್ನವರು (RSS)ಯಾವುದೇ ಪೂರ್ವಾನುಮತಿಯಿಲ್ಲದೆ ಕಾರ್ಯಕ್ರಮ ಮಾಡ್ತಾರೆ.ಯಾರೂ ಹೇಳುವವರಿಲ್ಲ ಕೇಳುವವರಿಲ್ಲ ಅಂತ ಇಷ್ಟು ದಿನ ಮಾಡಿಕೊಂಡು ಬಂದುಬಿಟ್ಟಿದ್ದಾರೆ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು ಎಂದರು.
ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಕಾರ್ಯಕ್ರಮ ನಡೆಸುವುದಕ್ಕೆ ತೀವ್ರ ಆಕ್ಷೇಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಪಾರ್ಕ್ಗಳಲ್ಲಿ ಸುಮ್ಮನೆ ಸಭೆಗಳನ್ನ ಮಾಡುವುದು, ಅವರ ವಿಷಪೂರಿತವಾದ ಸಿದ್ಧಾಂತಗಳನ್ನ ಹರಡುವ ಕೆಲಸಗಳನ್ನ ಮಾಡಬಾರದು ಎಂದು ಹೇಳಿದರು.
ಆರ್ ಎಸ್ ಎಸ್ ನವರು ಸುಮ್ನೆ ಮಾಮೂಲಾಗಿ ಕಾರ್ಯಕ್ರಮಗಳನ್ನ ಮಾಡಲ್ಲ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು. ಅನುಮತಿ ಪಡೆದು ಕಾರ್ಯಕ್ರಮ ಮಾಡಲಿ ಎಂದು ತಿಳಿಸಿದರು.