ಬೆಂಗಳೂರು: 352 ಸೀಟು ಗೆದ್ದಿದ್ದ ನಿಮ್ಮ ಪರಮೋಚ್ಛ ನಾಯಕ ರಾಹುಲ್ ಅವರ ಅಜ್ಜಿ ಇಂದಿರಾ ಗಾಂಧಿ ಅವರ ಕೈಯಲ್ಲಿ ಸಂಘದ ಚಟುವಟಿಕೆಗಳನ್ನು ನಿಷೇಧ ಮಾಡಲು ಆಗಲಿಲ್ಲ. 414 ಸೀಟು ಗೆದ್ದಿದ್ದ ರಾಜೀವ್ ಗಾಂಧಿ ಅವರ ಕೈಯಲ್ಲಿ ಸಂಘದ ಚಟುವಟಿಕೆಗಳನ್ನು ನಿಷೇಧ ಮಾಡಲು ಆಗಲಿಲ್ಲ. ಇನ್ನು outgoing ಸಿಎಂ ಸಿದ್ದರಾಮಯ್ಯ ಅವರು ಏನು ಮಾಡಲು ಸಾಧ್ಯ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಸರ್ಕಾರಿ ಸ್ಥಳಗಳಲ್ಲಿ ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಿನಲ್ಲಿ ಆರ್ಎಸ್ಎಸ್ ನಡೆಸುವ ಎಲ್ಲ ಬಗೆಯ ಚಟುವಟಿಕೆಗಳಿಗೂ ನಿಷೇಧ ಹೇರಬೇಕೆಂದು ಮುಖ್ಯಮಂತ್ರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬರೆದಿರುವ ಪತ್ರದ ಕುರಿತು ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಕಾಂಗ್ರೆಸ್ ನಾಯಕರು ಹುಚ್ಚರಾಗಿದ್ದಾರೆ. ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರು, ಕೇಂದ್ರ ಗೃಹ ಸಚಿವರು ಎಲ್ಲರೂ ಆರ್ಎಸ್ಎಸ್ನಿಂದ ಬಂದವರು. ಭಯೋತ್ಪಾದಕರನ್ನು ಬೆಂಬಲಿಸುವ ಕಾಂಗ್ರೆಸ್ ಅನ್ನು ಮೊದಲು ನಿಷೇಧಿಸಬೇಕು. ಕಾಂಗ್ರೆಸ್ ಸೀಮಿತ ಪಕ್ಷವಾಗಿದ್ದು. ಆರ್ಎಸ್ಎಸ್ ದೇಶಾದ್ಯಂತ ಇದೆ. ಯಾರೂ ಆರ್ಎಸ್ಎಸ್ ಅನ್ನು ಮುಟ್ಟಲು ಸಾಧ್ಯವಿಲ್ಲ. ಈ ಸಂಘಟನೆ ರಾಷ್ಟ್ರೀಯತೆಯನ್ನು ಕಲಿಸುವ ಕೇಂದ್ರವಾಗಿದೆ. ಯಾರಾದರೂ ಅಲ್ಲಿಗೆ ಹೋಗಿ ಭಾಗವಹಿಸಬಹುದು. ಆರ್ಎಸ್ಎಸ್ ಅನ್ನು ನಿಷೇಧಿಸುವ ಶಕ್ತಿ ಕಾಂಗ್ರೆಸ್ಗೆ ಇಲ್ಲ. ಪ್ರಿಯಾಂಕ್ ಅವರನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಜನರು ಪ್ರಧಾನಿ ಮೋದಿ ಅವರನ್ನು ದ್ವೇಷಿಸುತ್ತಾರೆ. ರಾಹುಲ್ ಗಾಂಧಿಯವರನ್ನು ಇಷ್ಟಪಡುತ್ತಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಕಾಂಗ್ರೆಸ್ನ ವರ್ತನೆ ಸ್ಪಷ್ಟವಾಗಿತ್ತು. ರಾಜ್ಯ ಸರ್ಕಾರಕ್ಕೆ ತಾಕತ್ ಇದ್ದರೆ ಆರ್ಎಸ್ಎಸ್ ಅನ್ನು ನಿಷೇಧಿಸಲಿ. ಕಾಂಗ್ರೆಸ್ಗೆ ಅಂತಹ ಅಧಿಕಾರವಿಲ್ಲ,
352 ಸೀಟು ಗೆದ್ದಿದ್ದ ನಿಮ್ಮ ಪರಮೋಚ್ಛ ನಾಯಕ ರಾಹುಲ್ ಗಾಂಧಿ ಅವರ ಅಜ್ಜಿ ಇಂದಿರಾ ಗಾಂಧಿ ಅವರ ಕೈಯಲ್ಲಿ ಸಂಘದ ಚಟುವಟಿಕೆಗಳನ್ನು ನಿಷೇಧ ಮಾಡಲು ಆಗಲಿಲ್ಲ. 414 ಸೀಟು ಗೆದ್ದಿದ್ದ ರಾಜೀವ್ ಗಾಂಧಿ ಅವರ ಕೈಯಲ್ಲಿ ಸಂಘದ ಚಟುವಟಿಕೆಗಳನ್ನು ನಿಷೇಧ ಮಾಡಲು ಆಗಲಿಲ್ಲ. ಇನ್ನು outgoing ಸಿಎಂ ಸಿದ್ದರಾಯ್ಯ ಅವರು ಏನು ಮಾಡಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.
ಸಂಘವನ್ನ ಮತ್ತು ಸಂಘದ ಚಟುವಟಿಕೆಗಳನ್ನು ನಿಷೇಧ ಮಾಡುವುದು ಅಸಾಧ್ಯ. ಆದರೆ ನಿಮಗೆ ಒಂದು ಸವಾಲು ಹಾಕುತ್ತೇನೆ. ನಿಮಗೆ ತಾಕತ್ತಿದ್ದರೆ, ನೀವು ನಂಬಿರುವ ಸಿದ್ಧಾಂತದ ಬಗ್ಗೆ ನಿಜಕ್ಕೂ ಬದ್ಧತೆ ಇದ್ದರೆ ಮೊದಲು ಅದನ್ನು ಮಾಡಿ ತೋರಿಸಿ. ಗೃಹ ಸಚಿವ ಡಾ. ಜಿ. ಪರಮೇಶ್ವರ ಇತ್ತೀಚೆಗೆ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆರೂವರೆ ಕೋಟಿ ಕನ್ನಡಿಗರ ಪಾಲಿಗೆ ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಸದನ ಕಲಾಪದ ವೇಳೆ ನಿಮ್ಮ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ.ಶಿವಕುಮಾರ್ ಅವರು ಹೆಮ್ಮೆಯಿಂದ ಸಂಘ ಗೀತೆ ಹಾಡಿದ್ದಾರೆ.
ಸಂಘದ ಚಟುವಟಕೆಗಳನ್ನು ನಿಷೇಧ ಮಾಡುವ ಮುನ್ನ ಮೊದಲು ನಿಮ್ಮ ತಂದೆ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿಸಿ ನೋಡೋಣ, ಆಗುತ್ತಾ? ಎಂದು ವ್ಯಂಗ್ಯವಾಡಿದ್ದಾರೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ದೇಶದ್ರೋಹಿಗಳನ್ನು ಸಮರ್ಥನೆ ಮಾಡಿಕೊಳ್ಳುವ ತಾವು ಭಾರತದ ಏಕತೆ, ಸಮಗ್ರತೆ, ಸಂವಿಧಾನದ ಆಶಯಗಳ ಬಗ್ಗೆ ಮಾತನಾಡುವುದು ನಿಜಕ್ಕೂ ಹಾಸ್ಯಾಸ್ಪದ. ನಿಮ್ಮ ವೈಫಲ್ಯ, ದುರಾಡಳಿತವನ್ನ ಮುಚ್ಚಿಕೊಳ್ಳಲು ಈ ರೀತಿ ಕೆಲಸಕ್ಕೆ ಬರದ ಪತ್ರಗಳನ್ನು ಬರೆಯುವುದು ಬಿಟ್ಟು ನಿಮ್ಮ ಖಾತೆಗಳನ್ನು ಸರಿಯಾಗಿ ನಿರ್ವಹಿಸಿ. ನೆರೆಯಿಂದ ಸಂಕಷ್ಟದಲ್ಲಿರುವ ಕಲ್ಯಾಣ ಕರ್ನಾಟಕದ ರೈತರಿಗೆ ನೆರವು ನೀಡುವ ಕೆಲಸ ಮಾಡಿ ಎಂದು ತಿರುಗೇಟು ನೀಡಿದ್ದಾರೆ.
ಮತ್ತೊಂದು ಪೋಸ್ಟ್ ನಲ್ಲಿ ನಕಲಿ ಗಾಂಧಿ ಕುಟುಂಬವನ್ನು ಮೆಚ್ಚಿಸಲು ಆರ್ ಎಸ್ಎಸ್ ಬಗ್ಗೆ ಇನ್ನೆಷ್ಟು ವಿಷ ಕಾರುತ್ತೀರಿ? ಇಂದು ನೀವು ಆರೆಸ್ಸೆಸ್ ವಿರುದ್ಧ ವಿಷ ಕಾರುತ್ತಾ ಸಂಘದ ಚಟುವಟಿಕೆ “ನಿಷೇಧಿಸಬೇಕು” ಎಂದು ಹೇಳುತ್ತಿದ್ದೀರಿ. ಆದರೆ 2002ರಲ್ಲಿ ಬೆಂಗಳೂರಿನ ನಾಗವಾರದಲ್ಲಿ ನಡೆದ ಸಂಘದ ಸಮರಸತಾ ಸಂಗಮ ಕಾರ್ಯಕ್ರಮದ ಸಂದರ್ಭದಲ್ಲಿ, ಅಂದು ಗೃಹಸಚಿವರಾಗಿದ್ದ ನಿಮ್ಮ ತಂದೆ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಸ್ವತಃ ಆ ಶಿಬಿರಕ್ಕೆ ಭೇಟಿ ನೀಡಿ, ಆರೆಸ್ಸೆಸ್ನ ಸಮಾಜಮುಖಿ ಕಾರ್ಯಗಳನ್ನು ಮೆಚ್ಚಿಕೊಂಡು, ಪೂರ್ಣ ಸಹಕಾರ ನೀಡಿದ್ದರು ಎಂಬುದು ತಮಗೆ ಗೊತ್ತಿದೆಯಾ? ಮೊದಲು ನಿಮ್ಮ ಮನೆಯ ಇತಿಹಾಸ ತಿಳಿದು ನಂತರ ರಾಷ್ಟ್ರಸೇವಕರ ಬಗ್ಗೆ ಮಾತನಾಡಿ ಎಂದು ತಿರುಗೇಟು ನೀಡಿದ್ದಾರೆ.
ಈ ನಡುವೆ ಮಾಜಿ ಸಚಿವ ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ಇತರರು ಆರ್ಎಸ್ಎಸ್ ಅನ್ನು ನಿಷೇಧಿಸುವ ದುಸ್ಸಾಹಸಕ್ಕೆ ಹಾಕಿದ್ದರು. ಆದರೆ, ಅದೇ ಅವರಿಗೆ ತಿರುಗುಬಾಣವಾಯಿತು. ಈ ಇತಿಹಾಸದ ಬಗ್ಗೆ ತಿಳಿದಿಲ್ಲದವರು ಮತ್ತೊಮ್ಮೆ ಅದೇ ದುಸ್ಸಾಹಲಕ್ಕೆ ಹೈ ಹಾಕಲು ಹೊರಟಿದ್ದಾರೆ. ದ್ವೇಷದ ರಾಜಕೀಯವು ಪ್ರಗತಿಗೆ ಅಡ್ಡಿಯಾಗಿದೆ ಎಂದು ಹೇಳಿದ್ದಾರೆ.
ಮತ್ತೊಂದು ಪೋಸ್ಟ್ನಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 2002 ರಲ್ಲಿ ಬೆಂಗಳೂರಿನಲ್ಲಿ ಆರ್ಎಸ್ಎಸ್ ಶಿಬಿರಕ್ಕೆ ಭೇಟಿ ನೀಡಿದ ವೃತ್ತಪತ್ರಿಕೆ ತುಣುಕನ್ನು ಅವರು ಹಂಚಿಕೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಅದನ್ನು ಟ್ಯಾಗ್ ಮಾಡಿದ್ದಾರೆ.